ಬೆಂಗಳೂರು: ಉಪ ನೋಂದಣಾಧಿಕಾರಿಗಳು ಮತ್ತು ಸಿಬ್ಬಂದಿಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫೆಬ್ರವರಿ 27 ರಿಂದ ರಾಜ್ಯಾದ್ಯಂತ ಆಸ್ತಿ ನೋಂದಣಿ ಸೇರಿ ಎಲ್ಲ ಸೇವೆಯನ್ನು ಬಹಿಷ್ಕರಿಸಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದ್ದು, ರಾಜ್ಯಾದ್ಯಂತ ಆಸ್ತಿ ನೋಂದಣಿ ಸ್ಥಗಿತವಾಗುವ ಸಾಧ್ಯತೆ ಇದೆ.
ಕರ್ನಾಟಕ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆ ನೌಕರರ ಸಂಘ ಶುಕ್ರವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಇಲಾಖೆಯ ಕಾರ್ಯದರ್ಶಿಗಳಿಗೆ ಈ ಸಂಬಂಧ ಪತ್ರ ಸಲ್ಲಿಸಿದ್ದು, ಬೇಡಿಕೆಗಳನ್ನು ಈಡೇರಿಸದಿದ್ದರೆ ಫೆಬ್ರವರಿ 27ರಿಂದ ರಾಜ್ಯಾದ್ಯಂತ ಆಸ್ತಿ ದಸ್ತಾವೇಜು ನೋಂದಣಿ ಸೇರಿ ಎಲ್ಲಾ ಸೇವೆಗಳನ್ನು ಬಹಿಷ್ಕರಿಸಿ ಮುಷ್ಕರ ಹೂಡಲು ನಿರ್ಧಾರ ಕೈಗೊಂಡಿರುವುದಾಗಿ ಹೇಳಿದ್ದಾರೆ. ಈ ಮೂಲಕ ರಾಜ್ಯಾದ್ಯಂತ ಫೆ.27 ರಿಂದ ಆಸ್ತಿ ನೋಂದಣಿ ಸ್ಥಗಿತವಾಗುವ ಸಾಧ್ಯತೆ ಇದೆ.
ಕಾವೇರಿ-2 ತಂತ್ರಾಂಶದಲ್ಲಿನ ಸಮಸ್ಯೆ, ಇಸಿ, ಸಿಸಿ ವಿತರಿಸಲು ಉಂಟಾಗುತ್ತಿರುವ, ಸರ್ವರ್ ಸಮಸ್ಯೆ, ಐಟಿ ಅಧಿಕಾರಿಗಳು ಮಾಹಿತಿ ಹೆಸರಲ್ಲಿ ಉಪ ನೋಂದಣಾಧಿಕಾರಿಗಳಿಗೆ ನೀಡುತ್ತಿರುವ ಕಿರುಕುಳದ ವಿರುದ್ಧ ಹಾಗೂ ವರ್ಗಾವಣೆಯ ಪ್ರತ್ಯೇಕ ನಿಯಮ ರೂಪಿಸಲು ಮುಷ್ಕರ ಕೈಗೊಳ್ಳಲಾಗಿದೆ.