ಬೆಂಗಳೂರು: ರಾಜ್ಯದಲ್ಲಿ ಅಲ್ಪಸಂಖ್ಯಾತರು ವಾಸಿಸುತ್ತಿರುವ ಕಾಲೋನಿಗಳ ಮೂಲಸೌಕರ್ಯ ಮತ್ತು ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು 600 ಕೋಟಿ ರೂಪಾಯಿಗಳ ಬೃಹತ್ ಯೋಜನೆಯನ್ನು ಘೋಷಿಸಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕ್ರಿಯಾಯೋಜನೆಗೆ ಅಧಿಕೃತ ಅನುಮೋದನೆ ನೀಡಲಾಗಿದೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರು ವಾಸಿಸುವ ಕಾಲೋನಿಗಳ ಅಭಿವೃದ್ಧಿಪಡಿಸುವುದು.ಈ ಯೋಜನೆಯು ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣಾ ಫಲಿತಾಂಶ ಅಥವಾ ಇತ್ತೀಚಿನ ರಾಜಕೀಯ ಬೆಳವಣಿಗೆಗಳಿಗೆ ಸಂಬಂಧಿಸಿದ್ದಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇದು ರಾಜಕೀಯ ಉದ್ದೇಶದ ನಿರ್ಧಾರವಲ್ಲ. ಈ ಹಿಂದೆಯೂ ಅನೇಕ ಬಾರಿ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರ ಅಸ್ತು ಎಂದಿದೆ. ಇದು ಅವಸರದಲ್ಲಿ ಮಾಡಿದ ಕ್ರಿಯಾಯೋಜನೆಯೂ ಅಲ್ಲ. ದಾವಣಗೆರೆಯ ಬೆಳವಣಿಗೆಗಳಿಗೂ ಮತ್ತು ಈ ಯೋಜನೆಗೂ ಯಾವುದೇ ಸಂಬಂಧ ಕಲ್ಪಿಸುವುದು ಸರಿಯಲ್ಲ,” ಎಂದು ತಿಳಿಸಿದರು.
ಅಲ್ಪಸಂಖ್ಯಾತರ ಸಮುದಾಯದ ವಸತಿ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಸುಧಾರಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಮುಂದಿನ ಎರಡು ವರ್ಷಗಳಲ್ಲಿ ಹಂತ ಹಂತವಾಗಿ ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂದು ಅವರು ಮಾಹಿತಿ ನೀಡಿದರು.








