ಚಿತ್ರದುರ್ಗ : ಡಿಸೆಂಬರ್ ನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ ಆಗುತ್ತದೆ ಎಂದು ಚಿತ್ರದುರ್ಗದಲ್ಲಿ ಬಿಜೆಪಿ ಸಂಸದ ಗೋವಿಂದ ಕಾರಜೋಳ್ ಹೇಳಿಕೆ ನೀಡಿದರು. ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಮೂರು ಗುಂಪುಗಳಿವೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ರಣಹದ್ದಿನಂತೆ ಕಚ್ಚಾಡುತ್ತಿದ್ದಾರೆ. ದಲಿತ ಸಿಎಂ ಗೆ ಪರಮೇಶ್ವರ್ ಮಲ್ಲಿಕಾರ್ಜುನ ಖರ್ಗೆ, ಎಚ್ ಸಿ ಮಹದೇವಪ್ಪ ಹಾಗೂ ಮುನಿಯಪ್ಪ ಪೈಪೋಟಿ ನಡೆಸಿದ್ದಾರೆ ಎಂದರು.
ಒಂದೆಡೆ ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಲಿದೆ ಎಂದು ಕಾಂಗ್ರೆಸ್ ನಾಯಕರೇ ಹೇಳುತ್ತಿದ್ದು ಇನ್ನೊಂದು ಕಡೆ ವಿಪಕ್ಷ ಬಿಜೆಪಿ ನಾಯಕರು ಶೀಘ್ರದಲ್ಲಿ ಸರ್ಕಾರ ಪತನವಾಗಲಿದ್ದು ಚುನಾವಣೆ ನಡೆಯಲಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಇದೀಗ ಬಿಜೆಪಿ ಸಂಸದ ಗೋವಿಂದ ಕಾರಜೋಳ ರಾಜ್ಯ ಸರ್ಕಾರ ಪತನಗೊಂಡು 150 ಶಾಸಕರೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಭರವಸೆ ಇದೆ ಎಂದು ಭವಿಷ್ಯ ನುಡಿದಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ ಸಂಸದ ಗೋವಿಂದ ಕಾರಜೋಳ 2028ಕ್ಕೆ ವಿಧಾನಸಭೆ ಚುನಾವಣೆ ಬರುತ್ತೆ ಅಂತ ನಾನು ಹೇಳುವುದಿಲ್ಲ. ಡಿಸೆಂಬರ್ ಬಳಿಕ ಯಾವುದೇ ಸಂದರ್ಭದಲ್ಲಿ ಚುನಾವಣೆ ಬರಬಹುದು. 150 ಶಾಸಕರೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಭರವಸೆ ಇದೆ. ಕಾಂಗ್ರೆಸ್ ಸರ್ಕಾರ ಒಂದೇ ಒಂದು ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಉಸ್ತುವಾರಿ ಸಚಿವರಿಗೆ ಜನರು ಶಾಪ ಹಾಕುತ್ತಿದ್ದಾರೆ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಹೇಳಿಕೆ ನೀಡಿದರು.