ಬೆಂಗಳೂರು: ಕಳೆದ ಐದು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ರಾಜ್ಯದ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗಳ ಚುನಾವಣೆ ಪ್ರಕ್ರಿಯೆಯನ್ನು ನಡೆಸಲು ವಿಳಂಬ ಮಾಡಿರುವುದಕ್ಕೆ ರಾಜ್ಯ ಸರ್ಕಾರವು ಹೈಕೋರ್ಟ್ನ ಕ್ಷಮೆಯಾಚಿಸಿದೆ. ಇದರೊಂದಿಗೆ, ಜಿ.ಪಂ ಹಾಗೂ ತಾ.ಪಂ ಕ್ಷೇತ್ರಗಳಿಗೆ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸರ್ಕಾರವು ನ್ಯಾಯಾಲಯದಿಂದ ಮತ್ತೆ 8 ವಾರಗಳ ಹೆಚ್ಚುವರಿ ಕಾಲಾವಕಾಶವನ್ನು ಕೋರಿದೆ.
ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಿಗೆ 12 ವಾರಗಳ ಒಳಗಾಗಿ ಮೀಸಲಾತಿಯನ್ನು ಅಂತಿಮಗೊಳಿಸಲಾಗುವುದು ಎಂದು 2023ರ ಡಿಸೆಂಬರ್ 19 ರಂದು ರಾಜ್ಯ ಸರ್ಕಾರವು ಹೈಕೋರ್ಟ್ಗೆ ಲಿಖಿತ ಭರವಸೆಯನ್ನು ನೀಡಿತ್ತು. ಆದರೆ, ಸರ್ಕಾರವು ನ್ಯಾಯಾಲಯಕ್ಕೆ ಕೊಟ್ಟ ಭರವಸೆಯಂತೆ ನಡೆದುಕೊಂಡಿಲ್ಲ ಎಂದು ಆಕ್ಷೇಪಿಸಿ, ಸ್ವತಃ ರಾಜ್ಯ ಚುನಾವಣಾ ಆಯೋಗವೇ ಸರ್ಕಾರದ ವಿರುದ್ಧ 2024ರಲ್ಲಿ ನ್ಯಾಯಾಂಗ ನಿಂದನೆ ಅರ್ಜಿಯನ್ನು ದಾಖಲಿಸಿತ್ತು. ಈ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ವಿಭಾಗೀಯ ನ್ಯಾಯಪೀಠವು ನಡೆಸಿತು.
ಉದ್ದೇಶಪೂರ್ವಕ ವಿಳಂಬವಲ್ಲ: ಸರ್ಕಾರದ ಸ್ಪಷ್ಟನೆ
ವಿಚಾರಣೆಯ ವೇಳೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಡಿ. ರಂದೀಪ್ ಅವರು ನ್ಯಾಯಾಲಯಕ್ಕೆ ಅಫಿಡವಿಟ್ (ಪ್ರಮಾಣಪತ್ರ) ಸಲ್ಲಿಸಿದ್ದು, ಮೀಸಲಾತಿ ನಿಗದಿ ಪ್ರಕ್ರಿಯೆಯಲ್ಲಿ ವಿಳಂಬವಾಗಲು ಕಾರಣವಾದ ಅಂಶಗಳನ್ನು ವಿವರಿಸಿದ್ದಾರೆ. ಸರ್ಕಾರದಿಂದ ಉದ್ದೇಶಪೂರ್ವಕವಾಗಿ ಯಾವುದೇ ವಿಳಂಬ ಸಂಭವಿಸಿಲ್ಲ ಮತ್ತು ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸುವ ಉದ್ದೇಶವೂ ಇರಲಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಆದಾಗ್ಯೂ ಸಂಭವಿಸಿರುವ ವಿಳಂಬಕ್ಕೆ ಬೇಷರತ್ ಕ್ಷಮೆಯಾಚಿಸುವುದಾಗಿ ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.
ಗ್ರಾ.ಪಂ ಮೀಸಲಾತಿಗೆ ಜಿಲ್ಲಾಧಿಕಾರಿಗಳಿಗೆ 30 ದಿನಗಳ ಗಡುವು
ಇದೇ ವೇಳೆ, ಅವಧಿ ಮುಗಿದಿರುವ ರಾಜ್ಯದ 5,950 ಗ್ರಾಮ ಪಂಚಾಯಿತಿಗಳಿಗೆ ಸಕಾಲದಲ್ಲಿ ಚುನಾವಣೆ ನಡೆಸಲು ಪೂರಕವಾಗಿ, ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯೂ ನಡೆಯಿತು. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠವು ಶುಕ್ರವಾರ ಈ ವಿಚಾರಣೆ ನಡೆಸಿತು. ಈ ಸಂದರ್ಭದಲ್ಲಿ, ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳ ಸದಸ್ಯ ಸ್ಥಾನಗಳಿಗೆ ವರ್ಗವಾರು ಮೀಸಲಾತಿಯನ್ನು ನಿಗದಿಪಡಿಸಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ (DC) 30 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಪ್ರಗತಿ ವರದಿ ಸಲ್ಲಿಸಿದ ಹೆಚ್ಚುವರಿ ಅಡ್ವೋಕೇಟ್ ಜನರಲ್
ವಿಚಾರಣೆಯ ವೇಳೆ ರಾಜ್ಯ ಸರ್ಕಾರದ ಪರವಾಗಿ ಹಾಜರಿದ್ದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಅವರು, ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಸರ್ಕಾರವು ಇದುವರೆಗೆ ಮಾಡಿರುವ ಪ್ರಗತಿಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಈಗಾಗಲೇ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಸದಸ್ಯ ಸ್ಥಾನಗಳನ್ನು ನಿಗದಿಪಡಿಸಿ ಅಂತಿಮ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಇದರ ಮುಂದುವರಿದ ಭಾಗವಾಗಿ, ಆಯಾ ಸದಸ್ಯ ಸ್ಥಾನಗಳಿಗೆ ಪ್ರವರ್ಗವಾರು ಮೀಸಲಾತಿಯನ್ನು 30 ದಿನಗಳ ಒಳಗಾಗಿ ಅಂತಿಮಗೊಳಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿ ನಿರ್ದೇಶನ ನೀಡಲಾಗಿದೆ ಎಂದು ಅವರು ನ್ಯಾಯಪೀಠಕ್ಕೆ ವಿವರಿಸಿದರು.








