ಬಳ್ಳಾರಿ : ಜಿಲ್ಲೆಯಲ್ಲಿನ ಮೈಕ್ರೋ ಫೈನಾನ್ಸ್ ಕಂಪನಿಗಳು ಆರ್ಬಿಐ ಮಾರ್ಗಸೂಚಿಯನ್ವಯ ಕಾರ್ಯನಿರ್ವಹಿಸಬೇಕು. ಸಾಲ ವಸೂಲಾತಿ ನೆಪದಲ್ಲಿ ಮಾನಸಿಕವಾಗಿ ನಿಂದಿಸುವುದು, ಅವಾಚ್ಯ ಶಬ್ದ ಬಳಸುವುದು, ಅವಮಾನಿಸುವ ಪ್ರಕರಣಗಳು ಕಂಡುಬAದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಖಡಕ್ ಸೂಚನೆ ನೀಡಿದರು.
ಮೈಕ್ರೋ ಫೈನಾನ್ಸ್ ಕಂಪನಿಗಳಿAದ ಸಾಲ ವಸೂಲಾತಿ ನೆಪದಲ್ಲಿ ಸಾಲಗಾರರಿಗೆ ಆಗುತ್ತಿರುವ ಕಿರುಕುಳ ಹಿನ್ನೆಲೆ ಹಾಗೂ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಸಾಲ ವಸೂಲಾತಿ ನೆಪದಲ್ಲಿ ಯಾವುದೇ ಕಿರುಕುಳ ಪ್ರಕರಣಗಳು ವರದಿಯಾಗಿಲ್ಲ. ಕಂಪನಿಗಳ ಪದಾಧಿಕಾರಿಗಳು ಸಾರ್ವಜನಿಕ ವಲಯದಲ್ಲಿ ಉತ್ತಮ ಭಾಂದವ್ಯ ಇಟ್ಟುಕೊಳ್ಳಬೇಕು. ಕಿರುಕುಳ ಪ್ರಕರಣಗಳಿಗೆ ಆಸ್ಪದ ನೀಡಬಾರದು ಎಂದು ಸೂಚಿಸಿದರು.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳಿAದ ಆಗುತ್ತಿರುವ ಆತ್ಮಹತ್ಯೆ ಪ್ರಕರಣಗಳ ಕುರಿತಾಗಿ ಈಗಾಗಲೇ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ನೇತೃತ್ವದಲ್ಲಿ ಸಭೆ ನಡೆಸಿ, ಸುಗ್ರಿವಾಜ್ಞೆ ಹೊರಡಿಸಲಾಗಿದೆ. ಮುಂದಿನ ದಿನಗಳಲ್ಲಿ ಕಾಯ್ದೆಯು ಜಾರಿಗೆ ಬರಲಿದೆ ಎಂದು ತಿಳಿಸಿದರು.
ಆರ್.ಬಿ.ಐ ಮಾರ್ಗಸೂಚಿ ಪಾಲನೆ ಕಡ್ಡಾಯ:
ಮೈಕ್ರೋ ಫೈನಾನ್ಸ್ ಕಂಪನಿಗಳು ಕಡ್ಡಾಯವಾಗಿ ಆರ್.ಬಿ.ಐ ಮಾರ್ಗಸೂಚಿ ಪಾಲನೆ ಮಾಡಬೇಕು. ಸಾಲ ಮಂಜೂರಾತಿ ಹಾಗೂ ವಸೂಲಾತಿ ನಿಯಮ ಬದ್ಧವಾಗಿರಬೇಕು. ಯಾವುದೇ ಕಾರಣಕ್ಕೂ ನಿಯಮಬಾಹಿರ ಮಾರ್ಗ ಅನುಸರಿಸಬಾರದು. ಸಾಲ ಮಂಜೂರಾತಿ ಸಂದರ್ಭದಲ್ಲಿ ನೇರವಾಗಿ ಸಾಲ ಪಡೆದವರೊಂದಿಗೇ ವ್ಯವಹರಿಸಬೇಕು. ಮಧ್ಯವರ್ತಿಗಳಿಗೆ ಅವಕಾಶ ನೀಡಬಾರದು ಎಂದರು.
ಕಿರುಕುಳ ನೀಡುವಂತಿಲ್ಲ:
ಸಾಲ ಮಂಜೂರಾತಿ ನಿಯಮಗಳು, ಸಾಲದ ಮೊತ್ತ, ಅವಧಿ, ಬಡ್ಡಿ ದರ, ಹಿಂಪಾವತಿ ಅವಧಿ ಸೇರಿದಂತೆ ಅಗತ್ಯ ಮಾಹಿತಿಗಳನ್ನೊಳಗೊಂಡ ಮಾರ್ಗಸೂಚಿ ಸಾಲ ಪಡೆಯುವವರಿಗೆ ಕಡ್ಡಾಯವಾಗಿ ನೀಡಬೇಕು. ಪಡೆದ ಸಾಲ ವಸೂಲಾತಿ ನೆಪದಲ್ಲಿ ಯಾವುದೇ ಕಾರಣಕ್ಕೂ ಕಿರುಕುಳ ನೀಡುವಂತಿಲ್ಲ ಎಂದು ತಾಕೀತು ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ ಅವರು ಮಾತಾನಾಡಿ, ಜಿಲ್ಲೆಯಲ್ಲಿ ಒಟ್ಟು 118 ಮೈಕ್ರೋ ಫೈನಾನ್ಸ್ ಕಂಪನಿಗಳಿದ್ದು, ಅದರಲ್ಲಿ 27 ಕಂಪನಿಗಳು ಆರ್ಬಿಐ ನಡಿ ಅಧೀಕೃತವಾಗಿ ನೋಂದಾಯಿಸಿಕೊAಡಿವೆ. ಇನ್ನುಳಿದ 97 ಕಂಪನಿಗಳು ನೋಂದಾಯಿಸಿಕೊAಡಿಲ್ಲ ಎಂದು ಸಭೆಗೆ ತಿಳಿಸಿದರು.
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ತಮ್ಮ ಮಾಹಿತಿಯನ್ನು ಜಿಲ್ಲಾಧಿಕಾರಿ ಕಚೇರಿ ಅಥವಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ನೀಡಬೇಕು. ಅಧಿಕಾರಿ ಮತ್ತು ಸಿಬ್ಬಂದಿಗಳು ಎಸ್ಪಿ ಕಚೇರಿ ಅಥವಾ ಹತ್ತಿರದ ಪೊಲೀಸ್ ಠಾಣೆಗಳಲ್ಲಿ ಕಡ್ಡಾಯವಾಗಿ ತಾವು ನೇಮಕಗೊಂಡಿರುವ ಕುರಿತು ದಾಖಲೆಗಳ ಪರಿಶೀಲನೆ ಮಾಡಿಸಬೇಕು. ಇದರಿಂದ ವಸೂಲಾತಿಗೆ ತೆರಳುವ ಏಜೆಂಟರುಗಳ ಮಾಹಿತಿ ಇರುತ್ತದೆ ಎಂದರು.
ಮುಖ್ಯವಾಗಿ ಸಾಲ ವಸೂಲಾತಿಗೆ ಬೆಳಿಗ್ಗೆ 09 ಗಂಟೆಯ ಮುಂಚೆ ಮತ್ತು ಸಂಜೆ 06 ಗಂಟೆಯ ನಂತರ ಕರೆ ಮಾಡುವುದಾಗಲೀ, ಮನೆಯ ಬಳಿ ಹೋಗುವುದಾಗಲೀ ಮಾಡುವಂತಿಲ್ಲ. ಅನಗತ್ಯವಾಗಿ ಮಾನಹಾನಿ, ಕಿರುಕುಳ ನೀಡುವುದು ಕಂಡುಬAದಲ್ಲಿ ಮುಲಾಜಿಲ್ಲದೇ ಕೇಸ್ ದಾಖಲು ಮಾಡಿಕೊಳ್ಳಲಾಗುವುದು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಒತ್ತಡ ಹೇರುವಂತಿಲ್ಲ:
ಸಾಲ ಮಂಜೂರಾತಿ ಸಂದರ್ಭದಲ್ಲಿಯೇ ಸಂಸ್ಥೆಯ ಎಲ್ಲಾ ಷರತ್ತು ಹಾಗೂ ನಿಬಂಧನೆಗಳನ್ನು ಸಾಲ ಪಡೆಯುವವರಿಗೆ ಮನವರಿಕೆ ಮಾಡಿಕೊಡಬೇಕು. ನಿಯಮಬದ್ಧವಾಗಿಯೇ ಸಾಲ ವಸೂಲಾತಿ ಮಾಡಬೇಕು. ಯಾವುದೇ ತರಹದ ಒತ್ತಡವನ್ನು ಸಾಲಗಾರರ ಮೇಲೆ ಹೇರಬಾರದು. ಅಪರಾಧ ಹಿನ್ನಲೆ ಹೊಂದಿರುವರನ್ನು ಸಾಲ ವಸೂಲಾತಿಗೆ ನೇಮಿಸಿಕೊಳ್ಳಬಾರದು ಎಂದು ಹೇಳಿದರು.
ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ತಿಳಿಸಿ:
ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳಿAದ ಹಣ ವಸೂಲಾತಿ ನೆಪದಲ್ಲಿ ಮಾನಹಾನಿ ಇಲ್ಲವೇ ಕಿರುಕುಳ ನೀಡುವುದು ಕಂಡುಬAದಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಖ್ಯೆ 9480803000 ಗೆ ಕರೆ ಮಾಡಿ ತಿಳಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದರು.
ಇಂತಹ ಪ್ರಕರಣಗಳಲ್ಲಿ ಶಿಕ್ಷೆಯ ವಿಧಾನಗಳು, ದಂಡದ ಪ್ರಮಾಣಗಳನ್ನು ಸಭೆಯಲ್ಲಿ ತಿಳಿಸಲಾಯಿತು.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಉಪವಿಭಾಗಾಧಿಕಾರಿ ಪಿ.ಪ್ರಮೋದ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಗಿರೀಶ್ ವಿ. ಕುಲಕರ್ಣಿ ಸೇರಿದಂತೆ ವಿವಿಧ ಮೈಕ್ರೋಫೈನಾನ್ಸ್ ಕಂಪನಿಗಳ ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.