ಬೆಂಗಳೂರು : ಶಿಕ್ಷಕರನ್ನು ರಜೆ, ಬೋಧಕೇತರ ದಿನ ಅಥವಾ ಸಮಯದಲ್ಲಿ ಮತದಾರ ಪಟ್ಟಿ ಪರಿಷ್ಕರಣೆ ಹಾಗೂ ಚುನಾವಣಾ ಕಾರ್ಯಕ್ಕೆ ನಿಯೋಜಿಸಬಹುದೆಂದು ತಿಳಿಸಲಾಗಿದೆ. ಶಿಕ್ಷಕರಿಗೆ ಈ ಕಾರ್ಯಗಳಿಂದ ಯಾವುದೇ ವಿನಾಯಿತಿ ನೀಡಿಲ್ಲ ಎಂದು ರಾಜ್ಯ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
ಹೌದು ಸುಪ್ರೀಂ ಕೋರ್ಟ್ ಆದೇಶ ಹಾಗೂ ಕೇಂದ್ರ ಚುನಾವಣಾ ಆಯೋಗದ ನಿರ್ದೇಶನ ಹಾಗೂ ಮಾರ್ಗಸೂಚಿಗಳಲ್ಲಿ ಶಿಕ್ಷಕರನ್ನು ರಜೆ, ಬೋಧಕೇತರ ದಿನ/ಸಮಯದಲ್ಲಿ ಮತದಾರ ಪಟ್ಟಿ ಪರಿಷ್ಕರಣೆ ಹಾಗೂ ಚುನಾವಣಾ ಕಾರ್ಯಕ್ಕೆ ನಿಯೋಜಿಸಬಹುದೆಂದು ತಿಳಿಸಲಾಗಿದೆ. ಈ ವಿಚಾರವಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರು ಇತ್ತೀಚೆಗೆ ಆಯೋಗಕ್ಕೆ ಪತ್ರ ಬರೆದಿದ್ದರು.
ಸಾರ್ವಜನಿಕ ಹಿತದೃಷ್ಟಿ ಅಡಿಯಲ್ಲಿ ವಿವಿಧ ಶಾಲಾ ಶಿಕ್ಷಕರನ್ನು ಚುನಾವಣಾ ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ನಿಯೋಜಿಸಿರುವುದನ್ನು ಹಿಂಪಡೆಯುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ಎಲ್ಲ ಜಿಲ್ಲಾಧಿಕಾರಿಗಳು/ಜಿಲ್ಲಾ ಚುನಾವಣಾಧಿಕಾರಿಗಳು, ಅಪರ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಜಂಟಿ ಮುಖ್ಯ ಚುನಾವಣಾಧಿಕಾರಿ ಎಸ್.ಯೋಗೇಶ್ವರ ಪತ್ರ ಬರೆದು ಸ್ಪಷ್ಟನೆ ನೀಡಿದ್ದಾರೆ.