ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಇಲಾಖೆಯು ಮಹತ್ವದ ಸುದ್ದಿಯೊಂದನ್ನು ನೀಡಿದೆ. 2024-25ನೇ ಸಾಲಿನ ವರ್ಗಾವಣೆ ಪ್ರಕ್ರಿಯೆಯಲ್ಲಿ ಬೇರೆ ತಾಲೂಕುಗಳಿಗೆ ಆಯ್ಕೆಯಾಗಿರುವ ಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲು ಮತ್ತು ಹೊಸ ಸ್ಥಳದಲ್ಲಿ ಹಾಜರಾಗಲು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಅಂತಿಮ ದಿನಾಂಕವನ್ನು ಪ್ರಕಟಿಸಿ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಏನಿದೆ ಆದೇಶದಲ್ಲಿ?
ವರ್ಗಾವಣೆಗೊಂಡ ಎಲ್ಲಾ ಶಿಕ್ಷಕರು ಮತ್ತು ಮುಖ್ಯಶಿಕ್ಷಕರನ್ನು ಏಪ್ರಿಲ್ 09, 2026 ರಂದು ಪ್ರಸ್ತುತ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕು. ಬಿಡುಗಡೆಗೊಂಡ ಶಿಕ್ಷಕರು ಏಪ್ರಿಲ್ 10, 2026 ರಂದು ತಮಗೆ ವರ್ಗಾವಣೆಯಾದ ಹೊಸ ಸ್ಥಳಗಳಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕು.
ಗಣತಿ ಕಾರ್ಯದಿಂದ ವಿನಾಯಿತಿ: ವರ್ಗಾವಣೆಗೊಂಡ ಶಿಕ್ಷಕರನ್ನು ಯಾವುದೇ ರೀತಿಯ ಗಣತಿ (Census) ಅಥವಾ ಇತರ ಪೂರಕ ಕೆಲಸಗಳಿಗೆ ನಿಯೋಜಿಸಬಾರದು ಎಂದು ಜಿಲ್ಲಾ ಉಪನಿರ್ದೇಶಕರಿಗೆ (DDPI) ಸೂಚಿಸಲಾಗಿದೆ.
ಪರ್ಯಾಯ ವ್ಯವಸ್ಥೆ: ಒಂದು ವೇಳೆ ವರ್ಗಾವಣೆಗೊಂಡ ಶಿಕ್ಷಕರು ಈಗಾಗಲೇ ಬೇರೆ ಕೆಲಸಗಳಲ್ಲಿ ನಿಯೋಜನೆಗೊಂಡಿದ್ದರೆ, ತಕ್ಷಣವೇ ಪರ್ಯಾಯ ವ್ಯವಸ್ಥೆ ಮಾಡಿ ಅವರನ್ನು ಬಿಡುಗಡೆ ಮಾಡುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.
ಕಾರಣ: ಮಕ್ಕಳ ಕಲಿಕೆಯ ಹಿತದೃಷ್ಟಿಯಿಂದ ಹಾಗೂ ವರ್ಗಾವಣೆ ಪ್ರಕ್ರಿಯೆಯನ್ನು ಸುಗಮವಾಗಿ ಮುಕ್ತಾಯಗೊಳಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆಯುಕ್ತರಾದ ವಿಕಾಸ್ ಕಿಶೋರ್ ಸುರಾಳ್ಕರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಈ ಆದೇಶದ ಪ್ರತಿಯನ್ನು ರಾಜ್ಯದ ಎಲ್ಲಾ ಜಿಲ್ಲಾ ಉಪನಿರ್ದೇಶಕರಿಗೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಕ್ತ ಕ್ರಮಕ್ಕಾಗಿ ರವಾನಿಸಲಾಗಿದೆ.









