ಹುಬ್ಬಳ್ಳಿ : ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಲಾಗಿದೆ. ಅಣ್ಣಿಗೇರಿಗೆ ಯುಜಿಡಿ ಮಾಡುವ ಕುರಿತು ಬಜೆಟ್ ನಲ್ಲಿ ಚರ್ಚಿಸಲಾಗುವುದು. ಈ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಶ್ರಮಿಸಲಾಗುವುದು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹೇಳಿದರು.
ಇಂದು ಶಿರಗುಪ್ಪಿ ಗ್ರಾಮದಲ್ಲಿ ಜಲ ಸಂಪನ್ಮೂಲ ಇಲಾಖೆ ಹಾಗೂ ಕರ್ನಾಟಕ ನೀರಾವರಿ ನಿಗಮ ನಿಯಮಿತ ಸಹಯೋಗದಲ್ಲಿ ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ ಶಂಕು ಸ್ಥಾಪನೆ ಮತ್ತು ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನಾ, ಭೂಮಿ ಪೂಜೆ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಬೆಣ್ಣೆ ಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಲಾಗಿದೆ. ಅಲ್ಲದೇ ವಿವಿಧ ಕಾಮಗಾರಿಗಳ ಉದ್ಘಾಟನೆ ಮಾಡಲಾಗಿದೆ. ಶಾಸಕ ಎನ್.ಎಚ್.ಕೋನರಡ್ಡಿ ನಿಷ್ಠಾವಂತ ಪ್ರಾಮಾಣಿಕ ಶಾಸಕರಾಗಿದ್ದಾರೆ. ರೂ.200 ಕೋಟಿ ವೆಚ್ಚದಲ್ಲಿ ಬೆಣ್ಣೆ ಹಳ್ಳ ಚಾಲನೆ ನೀಡಲಾಗಿರುತ್ತದೆ. ಈ ಯೋಜನೆ ಪ್ರಾರಂಭಕ್ಕೆ ಶಾಸಕ ಎನ್.ಎಚ್. ಕೋನರಡ್ಡಿ ಅವರ ಒತ್ತಾಸೆ ಕಾರಣವಾಗಿದೆ. ಈ ಹಿಂದೆ ರೂ.1610 ಕೋಟಿ ಅಂದಾಜು ವೆಚ್ಚದ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ವಿಳಂಬ ಮಾಡಿದ ನಂತರ ರೂ.200 ಕೋಟಿ ವೆಚ್ಚದಲ್ಲಿ ಕಾಮಗಾರಿಯನ್ನು ಪ್ರಾರಂಭಿಸಲಾಗುತ್ತಿದೆ. ಈ ಹಳ್ಳದ ಪ್ರವಾಹದಿಂದ ಸುಮಾರು 37 ಹಳ್ಳಿಗಳು ಹಾಗೂ 20 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ಪ್ರವಾಹ ಉಂಟಾಗುತ್ತಿತ್ತು. ರೂ. 150 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ಅಭಿವೃದ್ಧಿ ನಡೆಯುತ್ತಿಲ್ಲ ಎಂದು ಹೇಳಲಾಗುತ್ತಿದೆ. ಆದರೆ ಹಲವಾರು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. 2018 ರಲ್ಲಿ ಸುಪ್ರೀಂ ಕೋರ್ಟ್ ಕಳಸಾ ಬಂಡೂರಿ ಯೋಜನೆಗೆ ಒಪ್ಪಿಗೆ ಸೂಚಿಸಿದೆ. ಈಗಾಗಲೇ ಕಳಸಾ ಬಂಡೂರಿ ಯೋಜನೆಗೆ ಟೆಂಡರ್ ಕರೆದು ಏಜೆನ್ಸಿಗೆ ಒಪ್ಪಿಸಲಾಗಿದೆ. ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ನಾಳೆನೇ ಕಾಮಗಾರಿ ಆರಂಭಿಸಲಾಗುವುದು. ಕೇಂದ್ರ ಸರ್ಕಾರದಿಂದ ಅನುಮತಿ ದೊರೆಯಬೇಕಿದೆ. ಕೇಂದ್ರ ವನ್ಯಜೀವಿ ಮಂಡಳಿಯು ಅನುಮತಿ ಕೂಡಲೇ ನೀಡಬೇಕಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಮೂರನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆ ಕೇಂದ್ರ ಸರ್ಕಾರದಿಂದ ನಿಂತು ಹೋಗಿದೆ. ಕೇಂದ್ರ ಸರ್ಕಾರ ಕೂಡಲೇ ಗೆಜೆಟ್ ನೋಟಿಫಿಕೇಶನ್ ಮಾಡಬೇಕು. ಮೇಕೆದಾಟು ಯೋಜನೆಗೆ ಸಹ ಕೇಂದ್ರ ಸರ್ಕಾರ ಅನುಮತಿ ನೀಡಬೇಕು. ಈಗಾಗಲೇ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. 65 ಟಿಎಂಸಿ ಕುಡಿಯುವ ನೀರಿನ ಯೋಜನೆ ಇದಾಗಿದೆ. ಭದ್ರಾ ಮೇಲ್ದಂಡೆ ಯೋಜನೆಗೆ
ರೂ.5300 ಕೋಟಿ ಕೊಡುತ್ತೇವೆ ಕೇಂದ್ರ ಸರ್ಕಾರ ಹೇಳಿತ್ತು. ಆದರೆ ಯಾವುದೇ ಹಣ ಇದುವರೆಗೂ ನೀಡಿಲ್ಲ. ರಾಷ್ಟ್ರೀಯ ಯೋಜನೆಯಾಗಿ ಮಾಡುತ್ತೇವೆ ಎಂದು ಬಣ್ಣಿಸಿದ್ದರು. 2005 ರಲ್ಲಿ ಮನರೇಗಾ ಯೋಜನೆ ಜಾರಿ ಮಾಡಲಾಗಿತ್ತು. ಆದರೆ ಕೇಂದ್ರ ಸರ್ಕಾರ ಕಳೆದ ಡಿಸೆಂಬರ್ ನಲ್ಲಿ ಈ ಯೋಜನೆಯನ್ನು ರದ್ದು ಮಾಡಿದೆ. ಯುವಕರಿಗೆ, ಮಹಿಳೆಯರಿಗೆ, ಕೆಲಸವಿಲ್ಲದವರಿಗೆ ಕೆಲಸ ಕೊಡುವ ಯೋಜನೆಯನ್ನು ಕೈ ಬಿಡಲಾಗಿದೆ ಎಂದು ಅವರು ತಿಳಿಸಿದರು.
ನಾವು ನಂಬಿಕೆ ಇಟ್ಟಿಕೊಂಡಿದ್ದು ಮನುಷ್ಯ ಧರ್ಮ, ಮಾನವೀಯತೆ ಧರ್ಮ. ಬಸವಣ್ಣನವರು ಇವನಾರವ ಇವನಾರವ ಎಂದೆನಿಸದಿರಯ್ಯ ಇವ ನಮ್ಮವ ಇವ ನಮ್ಮವ ಎಂದೆಸಯ್ಯಾ... ಎಂದು ಹೇಳಿದ್ದಾರೆ. ಸುಮಾರು 1.16 ಲಕ್ಷ ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗೆ ವ್ಯಯಿಸಲಾಗಿದೆ. ವಾರ್ಷಿಕವಾಗಿ ಸುಮಾರು 54 ಸಾವಿರ ಕೋಟಿಗೂ ಅಧಿಕ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಲಾಗುತ್ತದೆ. ಪ್ರತಿ ಕುಟಂಬಕ್ಕೆ 4-5 ಸಾವಿರ ಪ್ರತಿ ತಿಂಗಳು ನೀಡಲಾಗುತ್ತಿದೆ. ವರ್ಷಕ್ಕೆ 50 ಸಾವಿರ ಹಣ ನೇರವಾಗಿ ಮುಟ್ಟಲಿದೆ. ಸುಮಾರು 25 ಸಾವಿರ ಕೋಟಿ ನೀರಾವರಿಗೆ ಖರ್ಚು ಮಾಡಲಾಗಿದೆ. 4.5 ಲಕ್ಷ ಕೋಟಿಗೂ ಹೆಚ್ಚು ಹಣ ಕೇಂದ್ರಕ್ಕೆ ಕೊಡುತ್ತಿದ್ದೇವೆ. ಆದರೆ ಕೇಂದ್ರದಿಂದ 60 ಸಾವಿರ ಕೋಟಿ ಮಾತ್ರ ರಾಜ್ಯಕ್ಕೆ ಮರಳುತ್ತಿದೆ. ಮನರೇಗಾ ಯೋಜನೆಯನ್ನು ಮರು ಸ್ಥಾಪನೆ ಮಾಡುವ ನಿಟ್ಟಿನಲ್ಲಿ ಹೋರಾಟ ಮಾಡುತ್ತೇವೆ. ಶೇ. 53 ಮಹಿಳೆಯರು ಇದ್ದಾರೆ. ಅದರಲ್ಲಿ ಶೇ. 28 ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಇದ್ದಾರೆ. ಶೇ.17 ರಷ್ಟು ಪರಿಶಿಷ್ಟ ಜಾತಿ ಹಾಗೂ ಶೇ. 11 ರಷ್ಟು ಪರಿಶಿಷ್ಟ ಪಂಗಡ ವರ್ಗದವರಿದ್ದಾರೆ ಎಂದರು.
ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಮಾತನಾಡಿ, ನೀರಾವರಿ, ಲೋಕೋಪಯೋಗಿ, ಕಾರ್ಮಿಕ ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಕಾಮಗಾರಿಗಳನ್ನು ಇಂದು ಲೋಕಾರ್ಪಣೆ ಮಾಡಲಾಗುತ್ತಿದೆ. ನಮ್ಮ ಸರ್ಕಾರ ಅಭಿವೃದ್ಧಿಯಡೆಗೆ ನಡೆಯುತ್ತಿದೆ. ಶಾಸಕರಾದ ಎನ್.ಎಚ್.ಕೋನರಡ್ಡಿ ಅವರು ಪ್ರಾಮಾಣಿಕ ಶಾಸಕರಾಗಿದ್ದಾರೆ. ರೂ.80 ಕೋಟಿ ವೆಚ್ಚದ ಸೇತುವೆ ನಿರ್ಮಾಣಕ್ಕೆ ನೀಡಲಾಗಿದೆ. ಈ ಭಾಗದ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಜನಪರ ಕಾರ್ಯಗಳು ಈ ಭಾಗದಲ್ಲಿ ನಡೆಯಲಿ ಎಂದು ಸಚಿವರು ಆಶಿಸಿದರು.
ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್ ಮಾತನಾಡಿ, ಸ್ವಾತಂತ್ರ್ಯ ದೊರೆತ ನಂತರ ನವಲಗುಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ದೊಡ್ಡ ಕಾಮಗಾರಿ ಇದಾಗಿದೆ. ಇದೊಂದು ದಾಖಲೆ ಕಾರ್ಯಕ್ರಮವಾಗಿದೆ. ಬೆಣ್ಣೆ ಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿಗೆ ಇಂದು ಚಾಲನೆ ನೀಡಲಾಗುತ್ತಿದೆ. ಬೆಣ್ಣಿಹಳ್ಳ ಹಾವೇರಿಯ ಧುಂಡಸಿಯಿಂದ ಗದಗಿನ ಮೆಣಸಗಿಯಲ್ಲಿ ಮಲಪ್ರಭಾ ನದಿಯನ್ನು ಸೇರುತ್ತದೆ. ಸುಮಾರು 150 ಕಿ.ಮೀ. ಹರಿಯುತ್ತದೆ. 50 ಸಾವಿರ ಎಕರೆ ಭೂಮಿಯ ರೈತರ ಬೆಳೆ ಹಾನಿ ಆಗುತ್ತಿತ್ತು. ಈ ಯೋಜನೆಯು ಪ್ರವಾಹ ಮುಕ್ತವಾಗಿಸಲಿದೆ. 16 ಟಿಎಂಸಿ ನೀರು ಹಳ್ಳದಲ್ಲಿ ಹರಿಯುತ್ತದೆ. ದೊಡ್ಡ ಅಣೆಕಟ್ಟು ಸಹ ಕಟ್ಟಬಹುದಿತ್ತು. ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ಜನರಿಗೆ ಆಶ್ರಯವಾಗಿವೆ. ಕರ್ನಾಟಕದ ಬಡತನವನ್ನು ಬೇರು ಸಮೇತ ಕಿತ್ತು ಹಾಕಲಾಗಿದೆ. ಜನರಲ್ಲಿ ನಾವು ದೇವರನ್ನು ಕಂಡಿದ್ದೇವೆ. ಮಹಿಳೆಯರಿಗೆ ಶಕ್ತಿ ಯೋಜನೆ, ಗೃಹ ಲಕ್ಷ್ಮಿ ಯೋಜನೆ ಜಾರಿಗೆ ತರಲಾಗಿದೆ. ಮಹಾದಾಯಿ ಯೋಜನೆಗೆ ಕೇಂದ್ರ ಸರ್ಕಾರ ಮುಂದಾಗಬೇಕಿದೆ. ಸುಮಾರು 200 ಕಿ.ಮೀ. ಚಕ್ಕಡಿ ರಸ್ತೆ ಅಭಿವೃದ್ಧಿ ಪಡಿಸಿದ ಹರಿಕಾರ ಎನ್.ಎಚ್.ಕೋನರಡ್ಡಿ ಅವರಾಗಿದ್ದಾರೆ ಎಂದು ಸಚಿವರು ನುಡಿದರು.
ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಮಾತನಾಡಿ, ರೂ.200 ಕೋಟಿ ವೆಚ್ಚದಲ್ಲಿ ಬೆಣ್ಣೆ ಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಶಾಸಕರಾದ ಎನ್.ಎಚ್.ಕೋನರಡ್ಡಿ ಅವರ ಕಾರ್ಯವನ್ನು ಮೆಚ್ಚುವಂತಹದ್ದು. ಕಳಸಾ ಬಂಡೂರಿ ಯೋಜನೆ ಆರಂಭಿಸುವ ಕುರಿತು ಪದೇ ಪದೇ ಪ್ರಶ್ನೆಗಳು ಕೇಳಿ ಬರುತ್ತಿವೆ. ಈಗಾಗಲೇ ರೂ.1,300 ಕೋಟಿ ಟೆಂಡರ್ ಮೂಲಕ ಕರೆದು ಅವರಿಗೆ ಒಪ್ಪಿಸಲಾಗಿದೆ. ಕೇಂದ್ರ ವನ್ಯಜೀವಿ ಮಂಡಳಿಯಿಂದ ಅನುಮತಿ ನೀಡಬೇಕು. ಕಳಸಾ ಬಂಡೂರಿ ಯೋಜನೆಯನ್ನು ಕೈಗೊಳ್ಳಲಾಗುವುದು. ಪಂಚ ಗ್ಯಾರಂಟಿ ಯೋಜನೆಗೆ ವಾರ್ಷಿಕವಾಗಿ 60 ಸಾವಿರ ಕೋಟಿ ಹಣ ವ್ಯಯಿಸಲಾಗುತ್ತಿದೆ. ಐದು ವರ್ಷಕ್ಕೆ ರೂ.3 ಲಕ್ಷ ಕೋಟಿ ಖರ್ಚಾಗುತ್ತದೆ. ರೈತರಿಗೆ ರೂ. 3 ಲಕ್ಷ ಸಾಲ ನೀಡಲಾಗುತ್ತದೆ. ಕೃಷಿ ಯಂತ್ರೋಪಕರಣಗಳಿಗೆ ಸಹಾಯಧನ ನೀಡಲಾಗುತ್ತದೆ. ರೂ. 85 ಸಾವಿರ ಕೋಟಿ ಹಣವನ್ನು ಅಭಿವೃದ್ಧಿ ಕಾಮಗಾರಿಗಳಿಗೆ ವ್ಯಯಿಸಲಾಗುತ್ತಿದೆ. 3,500 ಕೋಟಿ ಹಣವನ್ನು ಗೃಹ ಲಕ್ಷ್ಮಿ ಯೋಜನೆ ಮೂಲಕ ಜನರಿಗೆ ನೀಡಲಾಗಿದೆ. ಶಾಸಕರಾದ ಎನ್.ಎಚ್. ಕೋನರಡ್ಡಿ ಅವರು ಜನಪರ ಕೆಲಸ ಮಾಡುತ್ತಿದ್ದಾರೆ. ಜಿಲ್ಲೆಯ ಸಮತೋಲನ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಅವರು ತಿಳಿಸಿದರು.
ಶಾಸಕರಾದ ಎನ್.ಎಚ್.ಕೋನರಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿ, ಬೆಣ್ಣೆ ಹಳ್ಳ ಮಳೆಗಾಲದಲ್ಲಿ ಭಾರೀ ಪ್ರಮಾಣದಲ್ಲಿ ಹಾನಿ ಮಾಡುತ್ತಿತ್ತು. ಬೆಣ್ಣೆ ಹಳ್ಳ ರೂ.200 ಕೋಟಿ ವೆಚ್ಚದಲ್ಲಿ ಮೊದಲ ಹಂತದ ಕಾಮಗಾರಿ ಕೈಗೊಳ್ಳಲಾಗುತ್ತಿದೆ.
ಕೆಲಸ ಮಾಡಿದ ನಂತರ ನಾವು ಮಾತನಾಡುತ್ತೇವೆ. ನವಲಗುಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರಸ್ತೆಗಳು, ರೈತರ ಬೆಳೆ ಹಾನಿ ಆಗುತ್ತವೆ.
ಕಡಲೆ ಕೇಂದ್ರ ಆರಂಭಿಸಲು ಒತ್ತಾಯಿಸಿದ್ದರು. ಈಗಾಗಲೇ ಅದಕ್ಕೆ ಒಪ್ಪಿಗೆಯನ್ನು ಕೊಟ್ಟಿದ್ದಾರೆ. ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಯೋಜನೆಯ ಶೇ. 70 ರಷ್ಟು ಕಾಮಗಾರಿಯನ್ನು ಮೊದಲ ಹಂತದಲ್ಲಿ ಆದಷ್ಟು ಬೇಗ ಮುಗಿಸಲಾಗುವುದು. ಕೇಂದ್ರ ವನ್ಯಜೀವಿ ಮಂಡಳಿಯಿಂದ ಅನುಮತಿ ದೊರೆತ ನಂತರ ಮಹಾದಾಯಿ ಯೋಜನೆ ಪ್ರಾರಂಭಿಸಲಾಗುವುದು. ಮಲಪ್ರಭಾ ಕಾಲುವೆ ಅಭಿವೃದ್ಧಿ ಪಡಿಸಲಾಗುತ್ತದೆ. ರೂ.124 ಕೋಟಿ ವೆಚ್ಚದಲ್ಲಿ ಅಣ್ಣಿಗೇರಿ ಯುಜಿಡಿ ಯೋಜನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಬರುವ ಬಜೆಟ್ ನಲ್ಲಿ ಘೋಷಣೆ ಆಗುವ ನಿರೀಕ್ಷೆಯಿದೆ. ಚಕ್ಕಡಿ ರಸ್ತೆ ನಿರ್ಮಾಣಕ್ಕೆ ಅನುದಾನ ನೀಡಿದ್ದಾರೆ. ರೂ.50 ಕೋಟಿ ಹಣವನ್ನು ರಸ್ತೆ ಅಭಿವೃದ್ಧಿಗೆ ನೀಡಲಾಗಿದೆ. ಕೋಳಿವಾಡ, ಕುಸುಗಲ್, ನಲವಡಿಯಲ್ಲಿ
ಕೆಪಿಎಸ್ ಶಾಲೆ ಆರಂಭಿಸಲಾಗಿದೆ. ನವಲಗುಂದ ವಿಧಾನಸಭಾ ಕ್ಚೇತ್ರದ ಅಭಿವೃದ್ಧಿಗೆ ಶ್ರಮಿಸಲಾಗುವುದು. ಜನಸೇವೆಗೆ ನಾನು ಬದ್ಧನಾಗಿದ್ದೇನೆ ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರಿ ಮುಖ್ಯಸಚೇತಕರಾದ ಸಲೀಂ ಅಹ್ಮದ್, ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಪ್ರಸಾದ್ ಅಬ್ಬಯ್ಯ, ಶಾಸಕರಾದ ಎಫ್.ಎಚ್.ಜಕ್ಕಪ್ಪನವರ, ಬಿ.ಆರ್.ಯಾವಗಲ್, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶಾಕೀರ್ ಸನದಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಆರ್.ಪಾಟೀಲ, ಮಾಜಿ ಸಂಸದರಾದ ಪ್ರೊ.ಐ.ಜಿ.ಸನದಿ, ಮಾಜಿ ಸಚಿವರಾದ ಎ.ಎಂ.ಹಿಂಡಸಗೇರಿ, ಮಾಜಿ ಶಾಸಕಿ ಕುಸುಮಾವತಿ ಶಿವಳ್ಳಿ ಸೇರಿದಂತೆ ಜನಪ್ರತಿನಿಧಿಗಳು,
ವಿವಿಧ ಇಲಾಖೆಗಳ ಅಧಿಕಾರಿಗಳು ಇತರರು ಉಪಸ್ಥಿತರಿದ್ದರು.
ಹನುಮಂತ ಲಮಾಣಿ, ಅಪ್ಪಣ್ಣ, ಮಹದೇವ ಸತ್ತಿಗೇರಿ, ನಯನಾ ಅವರು ರಸ ಮಂಜರಿ ಕಾರ್ಯಕ್ರಮ ನಡೆಸಿಕೊಟ್ಟರು.
ಎಸ್.ಎಸ್.ಹಿರೇಮಠ ಮತ್ತು ತಂಡದವರು ನಾಡ ಗೀತೆ ಮತ್ತು ರೈತ ಗೀತೆ ಹಾಡಿದರು. ಪ್ರಭಾರ ಜಿಲ್ಲಾಧಿಕಾರಿ ಭುವನೇಶ ಪಾಟೀಲ ಸ್ವಾಗತಿಸಿದರು.
ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಹಾಗೂ ತಡೆಗೋಡೆ ನಿರ್ಮಾಣ ಯೋಜನೆ ಸಂಕ್ಷಿಪ್ತ ವಿವರ
ಹುಬ್ಬಳ್ಳಿ ( ಕರ್ನಾಟಕ ವಾರ್ತೆ) ಫೆ.8: ಬೆಣ್ಣೆಹಳ್ಳವು ಹಾವೇರಿ ಜಿಲ್ಲೆ ಶಿಗ್ಗಾಂವ ತಾಲೂಕಿನ ಧುಂಡಸಿ ಹತ್ತಿರ ಉಗಮವಾಗಿ ಧಾರವಾಡ ಜಿಲ್ಲೆಯ ಕುಂದಗೋಳ, ಹುಬ್ಬಳ್ಳಿ, ನವಲಗುಂದ ಹಾಗೂ ಗದಗ ಜಿಲ್ಲೆಯ ನರಗುಂದ ಮತ್ತು ರೋಣ ತಾಲೂಕಿನಲ್ಲಿ ಒಟ್ಟು 148 ಕಿ.ಮೀ. ಉದ್ದಕ್ಕೆ ಹರಿದು ಮೆಣಸಗಿ ಗ್ರಾಮದ ಹತ್ತಿರ ಮಲಪ್ರಭಾ ನದಿಯನ್ನು ಸೇರುತ್ತದೆ. ಈ ಹಳ್ಳಕ್ಕೆ ಧಾರವಾಡ, ಹಾವೇರಿ, ಗದಗ ಹಾಗೂ ಬೆಳಗಾವಿ ಜಿಲ್ಲೆಯ ಒಟ್ಟು 15 ಪ್ರಮುಖ ಉಪಹಳ್ಳಗಳು ಸೇರಿಕೊಳ್ಳುತ್ತವೆ. ಮಳೆಗಾಲದಲ್ಲಿ ಹಳ್ಳದ ಬದಿ ಇರುವ ಗ್ರಾಮಗಳಲ್ಲಿ ಮಿಂಚು ಪ್ರವಾಹ (Flash Flood) ಉಂಟಾಗಿ ಧಾರವಾಡ ಹಾಗೂ ಗದಗ ಜಿಲ್ಲೆಯ 37 ಹಳ್ಳಿಗಳಲ್ಲಿ ಅಪಾರ ಪ್ರಮಾಣದ ಹಾನಿ ಉಂಟಾಗುತ್ತದೆ. ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿಗೆ ಜಿ.ಎಸ್. ಪರಮಶಿವಯ್ಯಾ ಅವರ ವರದಿಯನ್ನಾಧರಿಸಿ ಕೇಂದ್ರ ಜಲ ಆಯೋಗದ ಮಾರ್ಗಸೂಚಿಯಂತೆ ವಿವರವಾದ ವರದಿಯನ್ನು ತಯಾರಿಸಲು ಶಾಸಕರಾದ ಎನ್.ಹೆಚ್. ಕೋನರಡ್ಡಿ ಅವರು 2014 ರಲ್ಲಿ ಬೆಣ್ಣೆಹಳ್ಳ ಹಾಗೂ ಮಲಪ್ರಭಾ ನದಿ ಪ್ರವಾಹ ನಿಯಂತ್ರಣ ಕಾಮಗಾರಿಗಳನ್ನು ಕೈಗೊಳ್ಳಲು SDMF ಅನುದಾನದಡಿ ನೀಡಿದ ರೂ.35.6 ಕೋಟಿಗಳಲ್ಲಿ ರೂ.90 ಲಕ್ಷ ಅನುದಾನವನ್ನು ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಹಾಗೂ ಶಾಶ್ವತ ಪರಿಹಾರಕ್ಕಾಗಿ ಸಮಗ್ರವಾಗಿ ವಿವರವಾದ ಯೋಜನಾ (ಡಿ.ಪಿ.ಆರ್.) ವರದಿಯನ್ನು ತಯಾರಿಸಲು ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸಿರುತ್ತಾರೆ. ಅಂದಿನ ಜಲಸಂಪನ್ಮೂಲ ಸಚಿವರಾದ ಎಂ.ಬಿ. ಪಾಟೀಲ ಅವರು 2017 ರಲ್ಲಿ ಬೆಣ್ಣೆಹಳ್ಳ ಶಾಶ್ವತ ಪರಿಹಾರಕ್ಕಾಗಿ ಸಮೀಕ್ಷೆ ನಡೆಸಿ ಡಿಪಿಆರ್ ತಯಾರಿಸಲು ಕರ್ನಾಟಕ ನೀರಾವರಿ ನಿಗಮದವರಿಗೆ ಸೂಚಿಸಿದರ ಅನ್ವಯ ಬೆಣ್ಣೆಹಳ್ಳದ ಪ್ರವಾಹ ನಿಯಂತ್ರಣ ಕಾಮಗಾರಿಗೆ ಕೇಂದ್ರ ಜಲ ಆಯೋಗದ ಮಾರ್ಗಸೂಚಿಗಳಂತೆ ಸಮಗ್ರವಾದ ಯೋಜನಾ ವರದಿಯನ್ನು ತಯಾರಿಸಲು ಶಾಸಕರಾದ ಎನ್.ಹೆಚ್. ಕೋನರಡ್ಡಿ ಅವರ ಅವಧಿಯಲ್ಲಿ ದಿನಾಂಕ: 11/12/2017 ರಂದು ಟೆಂಡರ್ ಮೂಲಕ ತಜ್ಞ ಸಮಾಲೋಚಕರನ್ನು ನೇಮಿಸಲಾಯಿತು.
ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣಾ ಯೋಜನಾ ವರದಿಯನ್ನು ಉಪಹಳ್ಳಗಳ ಪ್ರವಾಹ ನಿಯಂತ್ರಣ ಹಾಗೂ ನವಲಗುಂದ ತಾಲ್ಲೂಕಿನ ಯಮನೂರ ಬಳಿ ಸ್ನಾನ ಘಟ್ಟ ನಿರ್ಮಾಣದೊಂದಿಗೆ ಯಮನೂರ ಆರತಿ ಅನುಷ್ಠಾನ ಮಾಡಲು ಡಿಪಿಆರ್ನ್ನು ಮರು ಪರಿಷ್ಕರಿಸಿ 2024 ರಲ್ಲಿ ರೂ.1610 ಕೋಟಿಗಳ ಸಮಗ್ರವಾದ ವಿವರವಾದ ಯೋಜನಾ ವರದಿಯನ್ನು ಕರ್ನಾಟಕ ನೀರಾವರಿ ನಿಗಮದ ನಿರ್ದೇಶಕ ಮಂಡಳಿಯ ಸಭೆಯಲ್ಲಿ ಅನುಮೋದನೆ ಕೋರಿ ಮಂಡಿಸಲಾಯಿತು. ಶಾಸಕ ಎನ್.ಹೆಚ್. ಕೋನರಡ್ಡಿ ಇವರ ಅವಿರತ ಪ್ರಯತ್ನದಿಂದ 2024-25 ನೇ ಸಾಲಿನ ಆಯವ್ಯಯದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧಾರವಾಡ ಹಾಗೂ ಗದಗ ಜಿಲ್ಲೆಯಲ್ಲಿ ಹರಿಯುವ ಬೆಣ್ಣೆಹಳ್ಳದ ಪ್ರವಾಹ ನಿಯಂತ್ರಣ, ತಡೆಗೋಡೆ ನಿರ್ಮಾಣ ಹಾಗೂ ಶಾಶ್ವತ ಪರಿಹಾರ ಕಾಮಗಾರಿಗೆ ರೂ.200 ಕೋಟಿ ಅನುದಾನವನ್ನು ರಾಜ್ಯ ವಿಪತ್ತು ಉಪಶಮನ ನಿಧಿ (SDMF) ಅಡಿ ಕೈಗೊಳ್ಳುವುದಾಗಿ ಘೋಷಿಸಿದ್ದರು. ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಯೋಜನೆ ಹಾಗೂ ಅತಿಸೂಕ್ಷ್ಮ ಪ್ರದೇಶಗಳಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿಗಳಿಗೆ 09-10-2024ರಂದು ರೂ.200 ಕೋಟಿ ಮೊತ್ತದ ಕಾಮಗಾರಿಯನ್ನು ಕೈಗೊಳ್ಳಲು ಜಲಸಂಪನ್ಮೂಲ ಇಲಾಖೆಯಿಂದ ಆಡಳಿತಾತ್ಮಕ ಅನುಮೋದನೆ ನೀಡಲಾಗಿರುತ್ತದೆ. ಧಾರವಾಡ ಹಾಗೂ ಗದಗ ಜಿಲ್ಲೆಗಳಲ್ಲಿ ಹರಿಯುವ ಬೆಣ್ಣಿಹಳ್ಳದ ಪ್ರವಾಹ ನಿಯಂತ್ರಣ ಹಾಗೂ ತಡೆಗೋಡೆ ನಿರ್ಮಾಣದ ರೂ. 200.00 ಕೋಟಿ ಕಾಮಗಾರಿಯ ಟೆಂಡರ ಪ್ರಕ್ರಿಯೆ ಪೂರ್ಣಗೊಂಡಿದೆ. ಇಂದು ಈ ಯೋಜನೆಗೆ ಹುಬ್ಬಳ್ಳಿ ತಾಲ್ಲೂಕಿನ ಶಿರಗುಪ್ಪಿ ಗ್ರಾಮದ ಹತ್ತಿರ ಶಂಕುಸ್ಥಾಪನೆ ನೆರವೇರಿಸಿದರು. ಇದರೊಂದಿಗೆ ನವಲಗುಂದ ವಿಧಾನಸಭಾ ಕ್ಷೇತ್ರದ ನವಲಗುಂದ, ಹುಬ್ಬಳ್ಳಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ರೂ.150 ಕೋಟಿಗೂ ಹೆಚ್ಚಿನ ಅನುದಾನದಡಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು.
2018 ರಲ್ಲಿ ಸುಪ್ರೀಂ ಕೋರ್ಟ್ ಕಳಸಾ ಬಂಡೂರಿ ಯೋಜನೆಗೆ ಒಪ್ಪಿಗೆ ಸೂಚಿಸಿದೆ. ಈಗಾಗಲೇ ಕಳಸಾ ಬಂಡೂರಿ ಯೋಜನೆಗೆ ಟೆಂಡರ್ ಕರೆದು ಏಜೆನ್ಸಿಗೆ ಒಪ್ಪಿಸಲಾಗಿದೆ. ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ನಾಳೆನೇ ಕಾಮಗಾರಿ ಆರಂಭಿಸಲಾಗುವುದು. ಕೇಂದ್ರ ಸರ್ಕಾರದಿಂದ ಅನುಮತಿ ದೊರೆಯಬೇಕಿದೆ. ಕೇಂದ್ರ ವನ್ಯಜೀವಿ ಮಂಡಳಿಯು ಬೇಗನೆ ಅನುಮತಿ ನೀಡಬೇಕು ಎನ್ನುವುದು… pic.twitter.com/4EQ0CdpVZh
— Siddaramaiah (@siddaramaiah) February 9, 2026








