ಶಿರಸಿ: ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಂದರೆ ಅವರನ್ನು ಸ್ವಾಗತಿಸಲಾಗುವುದು. ಹಿಂದೆ ಕಾಂಗ್ರೆಸ್ ನಲ್ಲಿದ್ದವರಿಗೆ ಬಿಜೆಪಿಯಿಂದ ಬೇಸರವಾಗಿದೆಯೆಂದು ತಿಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಎಸ್ ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ರವರು ಕಾಂಗ್ರೆಸ್ ಸೇರ್ಪಡೆ ಆಗುತ್ತಾರೆಯೆ ಎಂಬ ಪ್ರಶ್ನೆಗೆ ಉತ್ತರಿಸುತ್ತಾ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಾಂಬ್ ಸ್ಪೋಟ ಪ್ರಕರಣ ತನಿಖೆ ನಡೆಯುತ್ತಿದೆ : ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಿಗೆ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ನನಗೆ ಯಾವುದೇ ಬೆದರಿಕೆ ಬಂದಿಲ್ಲ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟವಾಗಿದೆ. ಇದರ ಬಗ್ಗೆ ಪೊಲೀಸರು, ಸಿಸಿಬಿ ಹಾಗೂ ಎನ್ ಐ ಎಯವರು ಸೂಕ್ತ ತನಿಖೆ ನಡೆಸುತ್ತಿದ್ದಾರೆ. ಸ್ಪೋಟದ ಬಗ್ಗೆ ಕೆಲವು ಸುಳಿವುಗಳು ಸಿಕ್ಕಿದ್ದು, ಎನ್ ಐ ಎಯವರು ಐವರನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ ಎಂದರು.
ದೇಶದ್ರೋಹಿಗಳು ಯಾರು : ಪಾಕ್ ಪರ ಘೋಷಣೆ ಪ್ರಕರಣದ ಎಫ್ ಎಸ್ ಎಲ್ ವರದಿಯನ್ನು ಕಾಂಗ್ರೆಸ್ ಸರ್ಕಾರ ತಿಳಿಸುತ್ತಿಲ್ಲ ಎಂಬ ಬಿಜೆಪಿಯವರ ಟೀಕೆಗೆ ಉತ್ತರಿಸುತ್ತಾ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಾಕ್ ಪರ ಘೋಷಣೆಗಳನ್ನು ಕೂಗಿದ್ದರು. ಆಗ ಆ ಸರ್ಕಾರ ಪ್ರಕರಣವನ್ನೇ ವಜಾಗೊಳಿಸಿದ್ದರು. ಆ ಪ್ರಕರಣಕ್ಕೆ ಸಂಬಂಧಿಸಿದವರನ್ನು ಬಂಧಿಸಲಾಗಿದೆ. ಇದರಿಂದ ಯಾರು ದೇಶದ್ರೋಹಿಗಳು ಎಂದು ತಿಳಿಯುತ್ತದೆ ಎಂದರು.