ಬೆಂಗಳೂರು : ನಗರದಲ್ಲಿ ಬೇಕರಿ, ಜ್ಯೂಸ್ ಅಂಗಡಿ, ಕಾಂಡಿಮೆಂಟ್ಸ್ ಅಂಗಡಿ ಇಟ್ಟುಕೊಂಡು ಬದುಕು ನಡೆಸುತ್ತಿರುವ ಸಣ್ಣ ವ್ಯಾಪಾರಿಗಳಿಗೆ ಕಮರ್ಷಿಯಲ್ ಟ್ಯಾಕ್ಸ್ ಇಲಾಖೆ ಅವರ ಬದುಕಿನ ಅತಿ ದೊಡ್ಡ ಶಾಕ್ ನೀಡಿದೆ. ವ್ಯಾಪಾರಿಗಳ ಅಪರಾಧವೆಂದರೆ ಗ್ರಾಹಕರಿಂದ ಆನ್ಲೈನ್ ಮುಖಾಂತರ ಹಣ ಸ್ವೀಕರಿಸಿರುವುದು. ವ್ಯಾಪಾರಿಗಳು ವ್ಯಾಪಾರ ಶುರುಮಾಡಿದಾಗಿನಿಂದ ಇದುವರೆಗೆ ನಡೆಸಿರುವ ವಹಿವಾಟಿನ ಮೇಲೆ ವಾಣಿಜ್ಯ ತೆರಿಗೆ ಕಟ್ಟಬೇಕೆಂದು ಇಲಾಖೆ ನೋಟೀಸ್ ಕಳಿಸಿದೆ.
ಆದರೆ ಇದೀಗ ವಾಣಿಜ್ಯ ಇಲಾಖೆ ಅಂಗಡಿ ಮಾಲೀಕರಿಗೆ ಸಿಹಿ ಸುದ್ದಿ ಒಂದನ್ನು ನೀಡಿದ್ದು, 40 ಲಕ್ಷ ರೂಪಾಯಿಗಿಂತ ಅಧಿಕ ವಹಿವಾಟು ನಡೆಸಿದ ಬೇಕರಿ, ಕಾಂಡಿಮೆಂಟ್ಸ್, ಬೀಡ ಅಂಗಡಿಗಳು ಕಮರ್ಷಿಯಲ್ ಟ್ಯಾಕ್ಸ್ ಪಾವತಿ ಮಾಡಬೇಕೆಂಬ ನೋಟಿಸ್ಗೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ಸ್ಪಷ್ಟನೆ ನೀಡಿದ್ದು, ವಾರ್ಷಿಕ ವಹಿವಾಟು 1.5 ಕೋಟಿಗಿಂತ ಕಡಿಮೆ ಇದ್ದರೇ ಅಂತಹ ವರ್ತಕರು ಕೇವಲ ಶೇ 1 ರಷ್ಟು ಮಾತ್ರ ತೆರಿಗೆ ಪಾವತಿಸಬಹುದಾಗಿದೆ ಎಂದು ಹೇಳಿದೆ.
ಹೌದು ಜುಲೈ 1, 2017 ರಿಂದ ಸರಕು ಮತ್ತು ಸೇವಾ ತೆರಿಗೆ ಕಾಯ್ದೆಯು ದೇಶಾದ್ಯಂತ ಜಾರಿಗೆ ಬಂದಿರುತ್ತದೆ. ಈ ಕಾಯ್ದೆಯ ಕಲಂ 22 ರನ್ವಯ ಸರಕು ಪೊರೈಕೆದಾರರ ಸಮಗ್ರ ವಹಿವಾಟು ಒಂದು ಹಣಕಾಸು ವರ್ಷದಲ್ಲಿ 40 ಲಕ್ಷ ರೂಪಾಯಿಗಳನ್ನು ಮೀರಿದರೆ ಅಥವಾ ಸೇವೆಗಳ ಪೊರೈಕೆದಾರರ ಸಮಗ್ರ ವಹಿವಾಟು ಒಂದು ಹಣಕಾಸು ವರ್ಷದಲ್ಲಿ 20 ಲಕ್ಷ ರೂಪಾಯಿಗಳನ್ನು ಮೀರಿದರೆ ಜಿಎಸ್ಟಿ ನೋಂದಣಿ ಪಡೆಯುವುದು ಕಡ್ಡಾಯವಾಗಿದೆ.
40 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ಹಣವನ್ನು ಪಡೆದು ಸರಕು ಮತ್ತು ಸೇವಾ ತೆರಿಗೆ ಕಾಯ್ದೆ – 2017 ರಡಿಯಲ್ಲಿ ನೋಂದಣಿಯನ್ನು ಪಡೆಯದೆ, ತೆರಿಗೆ ಪಾವತಿಸದೆ ಇರುವ ವರ್ತಕರಿಗೆ ನೋಟೀಸ್ ಜಾರಿಗೊಳಿಸಲಾಗಿದೆ. ಈ ನೋಟಿಸುಗಳಿಗೆ, ವರ್ತಕರು ತಾವು ಮಾರಾಟ ಮಾಡಿದ ಸರಕು ಮತ್ತು ಸೇವೆಗಳ ವಿವರಗಳನ್ನು ನೀಡಿ ಸರಿಯಾದ ತೆರಿಗೆಯನ್ನು ಪಾವತಿಸಬೇಕು. ಇಂತಹ ವರ್ತಕರು ತಕ್ಷಣ ನೋಂದಣಿ ಪಡೆಯಬೇಕು. ವಾರ್ಷಿಕ ವಹಿವಾಟು 1.5 ಕೋಟಿ ರೂಪಾಯಿಗಳಿಗಿಂತ ಕಡಿಮೆ ಇರುವ ಸಣ್ಣ ವರ್ತಕರು ರಾಜಿ ತೆರಿಗೆಯನ್ನು ಆಯ್ಕೆ ಮಾಡಿ, ಇನ್ಮುಂದೆ ಶೇ 1 ರಷ್ಟು ತೆರಿಗೆ ಪಾವತಿಸಬಹುದಾಗಿದೆ.
ಆದರೆ, ಯುಪಿಐ ಮೂಲಕ 40 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ಹಣವನ್ನು ಪಡೆದಿರುವ ವರ್ತಕರ ವಾರ್ಷಿಕ ವಹಿವಾಟು ಇನ್ನೂ ಗಣನೀಯವಾಗಿ ಹೆಚ್ಚಾಗಿದೆ. ಈ ಮಾಹಿತಿಯನ್ನು ಪರಿಶೀಲಿಸಿದ ಇಲಾಖೆ 40 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ಹಣವನ್ನು ಪಡೆದು ಸರಕು ಮತ್ತು ಸೇವಾ ತೆರಿಗೆ ಕಾಯ್ದೆ – 2017ರಡಿಯಲ್ಲಿ ನೋಂದಣಿಯನ್ನು ಪಡೆಯದೆ, ತೆರಿಗೆ ಪಾವತಿಸದೆ ಇರುವ ವರ್ತಕರಿಗೆ ನೋಟೀಸ್ ನೀಡಿದೆ. ಈ ನೋಟಿಸುಗಳಿಗೆ, ವರ್ತಕರು ತಾವು ಮಾರಾಟ ಮಾಡಿದ ಸರಕು ಮತ್ತು ಸೇವೆಗಳ ವಿವರಗಳನ್ನು ನೀಡಿ ಸರಿಯಾದ ತೆರಿಗೆಯನ್ನು ಪಾವತಿಸಬೇಕು ಎಂದು ಇಲಾಖೆ ತಿಳಿಸಿದೆ.