ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಜಾಹೀರಾತು ಪ್ರಕಟಿಸಿ ಮಾನಹಾನಿ ಮಾಡಿದ ಆರೋಪ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಗೆ ಜಾಮೀನು ನೀಡಲಾಗಿದೆ.
ಈ ನಡುವೆ ಸಂಸದ ರಾಹುಲ್ ಗಾಂಧಿ ಖುದ್ದು ಹಾಜರಾತಿಗೆ ವಿನಾಯ್ತಿ ಕೋರಿರುವ ಅರ್ಜಿ ವಿಚಾರಣೆ ನಡೆದು, ಇಂದು ಮಧ್ಯಾಹ್ನ ನಾಲ್ಕು ಗಂಟೆಗೆ ತೀರ್ಪು ನೀಡುವುದಾಗಿ ನ್ಯಾಯಾದೀಶರು ಹೇಳಿದ್ದರು. ಅದರಂತೆ ಈಗ ನ್ಯಾಯಾಧೀಶರು ಆದೇಶವನ್ನು ಹೊರಡಿಸಿದ್ದು, ತೀರ್ಪಿನಲ್ಲಿ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ. ಆದೇಶದಲ್ಲಿ ಪ್ರಕರಣದ ವಿಚಾರಣೆ ನಡೆಸಿದ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ (42ನೇ ಸೆಷನ್ಸ್ ನ್ಯಾಯಾಲಯ) ನ್ಯಾಯಾಧೀಶರಾದ ಕೆ.ಎನ್.ಶಿವಕುಮಾರ್ ಅವರು ಈ ಖುದ್ದು ಹಾಜರಾತಿಯಿಂದ ವಿನಾಯ್ತಿ ನೀಡಿದ್ದಾರೆ.
ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಸೂರ್ಯ ಮುಕುಂದರಾಜು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಎಸ್.ಎ.ಅಹ್ಮದ್ ಮತ್ತು ಸಿ.ಆರ್.ದೀಪು ಮತ್ತು ರಾಹುಲ್ ಗಾಂಧಿ ಅವರಿಗೆ ನಿಶಿತ್ ಶೆಟ್ಟಿ ಮತ್ತು ಕೆಪಿಸಿಸಿ ಪರವಾಗಿ ಸಂಜಯ್ ಯಾದವ್ ಅವರು ವಾದವನ್ನು ಮಂಡನೆ ಮಾಡಿದ್ದರು. ಸುಳ್ಳು ಜಾಹೀರಾತು ನೀಡಲು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ರಾಹುಲ್ ಗಾಂಧಿ ಅವರು ನೇರ ಕಾರಣವಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಖಾಸಗಿ ದೂರು ದಾಖಲಿಸಿತ್ತು.