ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಬೇಟೆ ಮುಂದುವರಿದಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ, ಇಂದು ಮುಂಜಾನೆಯೇ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ಭರ್ಜರಿ ದಾಳಿ ನಡೆಸಿದ್ದು, ಭ್ರಷ್ಟ ಅಧಿಕಾರಿಗಳ ನಿದ್ದೆಗೆಡಿಸಿದ್ದಾರೆ. ಬೆಂಗಳೂರು, ಕಲಬುರಗಿ, ಚಿಕ್ಕಮಗಳೂರು ಹಾಗೂ ಬೀದರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಪೊಲೀಸರು ಬೀಡುಬಿಟ್ಟಿದ್ದು, ತೀವ್ರ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ರಾಜಧಾನಿ ಬೆಂಗಳೂರಿನ ಎರಡು ಪ್ರಮುಖ ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಅಕ್ರಮ ಆಸ್ತಿ ಗಳಿಕೆ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಖಲೆಗಳನ್ನು ಜಾಲಾಡುತ್ತಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದಾರೆ. ನಗರದ ಪ್ರತಿಷ್ಠಿತ ಗೋದುತಾಯಿ ನಗರದಲ್ಲಿರುವ ನಿವಾಸ ಸೇರಿದಂತೆ ಒಟ್ಟು 5 ಪ್ರಮುಖ ಸ್ಥಳಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಆಸ್ತಿಪಾಸ್ತಿ ಹಾಗೂ ಪ್ರಮುಖ ಹೂಡಿಕೆಯ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಬೀದರ್ ಜಿಲ್ಲೆಯಲ್ಲೂ ಭ್ರಷ್ಟರಿಗೆ ಲೋಕಾಯುಕ್ತ ಬಿಸಿ ತಟ್ಟಿದೆ. ಲೋಕಾಯುಕ್ತ ಎಸ್ ಪಿ ಸಿದ್ದರಾಜು ಅವರ ನೇರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಹಳ್ಳಿಖೇಡ ಗ್ರಾಮದಲ್ಲಿರುವ ನಿವಾಸ, ತೋಟದ ಮನೆ ಹಾಗೂ ಹುಮ್ನಾಬಾದ್ನಲ್ಲಿರುವ ಎರಡು ಕಾಂಪ್ಲೆಕ್ಸ್ಗಳ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದೆ.
ಚಿಕ್ಕಮಗಳೂರು ನಗರದಲ್ಲೂ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆಯೇ ಅರಣ್ಯ ಇಲಾಖೆಯ ಅಧಿಕಾರಿಗೆ ದೊಡ್ಡ ಶಾಕ್ ನೀಡಿದ್ದಾರೆ. ನಗರದ ಕಲ್ಯಾಣನಗರದಲ್ಲಿರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಮೋಹನ್ ಅವರ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.








