ನವದೆಹಲಿ : ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಮರುಮತ ಎಣಿಕೆಗೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಇದೀಗ ಸೂಚನೆ ನೀಡಿದೆ. ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಗೆ ಸುಪ್ರೀಂಕೋರ್ಟ್ ರಾಜ ಚುನಾವಣಾ ಆಯೋಗಕ್ಕೆ ಸೂಚಿಸಿದೆ.
ಶಾಸಕರಾಗಿ ಆಯ್ಕೆ ಅಸಿಂಧುಗೊಳಿಸಿದ್ದ ಆದೇಶಕ್ಕೆ ತಡೆ ನೀಡಿದ್ದು, ಇದೀಗ ಮಾಲೂರು ಕ್ಷೇತ್ರದ ಮತಗಳ ಮರು ಎಣಿಕೆಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಫಲಿತಾಂಶವನ್ನು ಮುಚ್ಚಿದಲಕೋಟೆಯಲ್ಲಿ ಸಲ್ಲಿಸಲು ಸುಪ್ರೀಂಕೋರ್ಟ್ ರಾಜ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.
ಪ್ರಕರಣದ ಹಿನ್ನೆಲೆ
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದಿಂದ ಕೆ.ವೈ.ನಂಜೇಗೌಡ ಗೆಲುವು ಸಾಧಿಸಿದ್ದರು. ಇದನ್ನು ಪ್ರಶ್ನಿಸಿರುವ ಅರ್ಜಿದಾರರು, ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಲ್ಲಾ 15 ಮಂದಿ ಸ್ಪರ್ಧಿಗಳ ಏಜೆಂಟ್ಗಳಿಗೆ ಮತ ಎಣಿಕೆ ಕೇಂದ್ರದಲ್ಲಿ ಸಮರ್ಪಕ ವ್ಯವಸ್ಥೆ ಮಾಡಿರಲಿಲ್ಲ. ಒಂದೇ ಕೊಠಡಿಯಲ್ಲಿ ಮತಗಳ ಎಣಿಕೆ ಕಾರ್ಯ ನಡೆಯಬೇಕಿದ್ದು, ಎರಡು ಪ್ರತ್ಯೇಕ ಕೊಠಡಿಯಲ್ಲಿ ಎಣಿಕೆ ಮಾಡಲಾಗಿದೆ.ಆ ಮೂಲಕ ಜನಪ್ರತಿನಿಧಿಗಳ ಕಾಯ್ದೆಯ ನಿಯಮಗಳು ಮತ್ತು ಚುನಾವಣಾ ಆಯೋಗ ಪ್ರಕಟಿಸಿದ್ದ ನಿಯಮಗಳನ್ನು ಉಲ್ಲಂಘಿಸಲಾಗಿದೆ.
ಹೀಗಾಗಿ, ನಂಜೇಗೌಡರನ್ನು ವಿಜೇತ ಅಭ್ಯರ್ಥಿಯಾಗಿ ಘೋಷಣೆ ಮಾಡಿದ ಚುನಾವಣಾ ಆಯೋಗದ ಕ್ರಮವನ್ನು ರದ್ದುಪಡಿಸಬೇಕು. ಅಷ್ಟೇ ಅಲ್ಲದೆ, ಕ್ಷೇತ್ರದ ಮತಗಳನ್ನು ಮರು ಎಣಿಕೆ ಮಾಡುವಂತೆ ನಿರ್ದೇಶನ ನೀಡಬೇಕು ಎಂದು ಕೋರಿದ್ದರು.2023ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಸ್.ಮಂಜುನಾಥ್ ಗೌಡ ಅವರು ಕಾಂಗ್ರೆಸ್ ಅಭ್ಯರ್ಥಿ ಕೆ.ವೈ.ನಂಜೇಗೌಡ ಅವರ ವಿರುದ್ಧ 248 ಮತಗಳ ಅಂತರದಿಂದ ಸೋತಿದ್ದರು.
ಬಳಿಕ ಮಾಲೂರು ವಿಧಾನಸಭಾ ಕ್ಷೇತ್ರದ ಫಲಿತಾಂಶವನ್ನು ಹೈಕೋರ್ಟ್ ರದ್ದುಪಡಿಸಿ ಮಹತ್ವದ ಆದೇಶ ನೀಡಿತ್ತು. ಮುಂದಿನ ನಾಲ್ಕು ವಾರಗಳಲ್ಲಿ ಹೊಸದಾಗಿ ಮತ ಎಣಿಕೆ ನಡೆಸಿ ಫಲಿತಾಂಶ ಪ್ರಕಟಿಸಬೇಕು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ (ಸಿಇಸಿ) ನಿರ್ದೇಶನ ನೀಡಿದೆ. ಇದೀಗ ಸುಪ್ರೀಂ ಕೋರ್ಟ್ ಮಾಲೂರು ವಿಧಾನಸಭಾ ಕ್ಷೇತ್ರದ ಮರುಮತ ಎಣಿಕೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.