ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಅನೇಕ ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿಗೋಳಿಸಿದ್ದು, ಇದೀಗ ಸಾಲ ಪಡೆದವರಿಗೆ ಉಂಟಾಗುವ ಕಿರುಕುಳ ತಪ್ಪಿಸಿ ರಕ್ಷಣೆ ನೀಡುವ ಉದ್ದೇಶದಿಂದ ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕ 2025 ನ್ನು ವಿಧಾನಸಭೆಯಲ್ಲಿ ಇಂದು ಮಂಡಿಸಲಾಯಿತು.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಈ ವಿಧೇಯಕವರನ್ನು ಮಂಡಿಸಿದರು. ಮೈಕ್ರೊ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಸಂಸ್ಥೆಗಳು ರೈತರಿಂದ ಕೃಷಿ ಉತ್ಪನ್ನಗಳನ್ನು ಪಡೆದು ಕೃಷಿ ಸರಕುಗಳ ಖರೀದಿ ಮತ್ತು ಮಾರಾಟದಲ್ಲಿ ತೊಡಗಿರುವ ಅಥವಾ ಬಡವರಿಗೆ ಸಾಲವನ್ನು ನೀಡುವ ಮತ್ತು ಅಸಲನ್ನು ಬಡ್ಡಿಯೊಂದಿಗೆ ನಗದು ಅಥವಾ ವಸ್ತು ರೂಪದಲ್ಲಿ ತೆಗೆದುಕೊಳ್ಳುವ ಸಂದರ್ಭದಲ್ಲಿ ದುಬಾರಿ ಬಡ್ಡಿದರಗಳು, ಅನುಚಿತ ತೊಂದರೆ, ಬಲವಂತ ಮತ್ತು ಅಮಾನವೀಯ ವಸೂಲಾತಿ ಮಾಡುವುದು ಕಂಡುಬಂದಿದೆ.
ಈ ವಿಧೇಯಕದಲ್ಲಿ ಸಾಲಗಳನ್ನು ಪಡೆಯುವ ಮತ್ತು ಸಾಲಗಳಲ್ಲೇ ಮುಳುಗಿ ಹೋಗಿರುವ ಅಸಹಾಯಕರನ್ನು ಕಾಪಾಡುವ ಮತ್ತು ರಕ್ಷಿಸುವ ಉದ್ದೇಶವಿದೆ. ಬಡ ಗ್ರಾಮೀಣ ನಿರ್ಗತಿಕರು, ನಗರ ಕಾರ್ಮಿಕರು, ಸಮಾಜದ ಅಶಕ್ತ ಮತ್ತು ದುರ್ಬಲ ವರ್ಗದವರನ್ನು ಪೀಡಿಸುತ್ತಿವೆ ಮತ್ತು ಉಸಿರುಗಟ್ಟಿಸುತ್ತಿವೆ. ಸಾಲಗಾರನಿಗೆ ಕೆಲವೊಮ್ಮೆ ಹೆಚ್ಚಿನ ಬಡ್ಡಿಯನ್ನು ಪಾವತಿಸಲು ಒತ್ತಾಯಿಸಲಾಗುತ್ತಿದೆ.
ಲೇವಾದೇವಿದಾರರ ಕಾರಣದಿಂದಾಗಿ ಸಾಲಗಾರರು ಬೀದಿಗೆ ಬರುವಂತೆ ಮತ್ತು ಆತ್ಮಹತ್ಯೆ ಮಾಡಿಕೊಳ್ಳುವಂತೆ ಒತ್ತಾಯಪಡಿಸಲಾಗುತ್ತಿದೆ ಎಂದು ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ. ಆರ್ಥಿಕವಾಗಿ ದುರ್ಬಲ ಗುಂಪುಗಳು ಮತ್ತು ವ್ಯಕ್ತಿಗಳು, ವಿಶೇಷವಾಗಿ ಮಹಿಳೆಯರು ಹಾಗೂ ಮಹಿಳಾ ಸ್ವಸಹಾಯ ಗುಂಪುಗಳನ್ನು ರಕ್ಷಿಸಲು ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೈಕೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳನ್ನು ನಿಯಂತ್ರಿಸಲು ಪರಿಣಾಮಕಾರಿ ಕಾರ್ಯವ್ಯವಸ್ಥೆಯನ್ನು ಸೃಜಿಸುವ ಉದ್ದೇಶವನ್ನು ವಿಧೇಯಕ ಒಳಗೊಂಡಿದೆ.