ಕಲಬುರ್ಗಿ : ವೈದ್ಯಕೀಯ ವಿದ್ಯಾರ್ಥಿಗಳ ಸ್ಟೈಫಂಡ್ ದುರ್ಬಳಕೆ ಆರೋಪದಡಿ ಕಲಬುರ್ಗಿಯ ಕಾಂಗ್ರೆಸ್ ಮುಖಂಡ ಭೀಮಾಶಂಕರ ಬಿಲಗುಂದಿ ಸೇರಿದಂತೆ ಮೂವರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಇಂದು ದಾಳಿ ಮಾಡಿ, ಶೋಧ ನಡೆಸಿದ್ದಾರೆ.
ಹೌದು 2018ರಿಂದ 2024ರವರೆಗೆ ಎಂಆರ್ಎಂಸಿಯ 282 ಪಿಜಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸೇರಬೇಕಿದ್ದ 81.21 ರೂ.ಕೋಟಿ ಸ್ಟೈಫಂಡ್ ಹಣವನ್ನು ಭೀಮಾಶಂಕರ ಸೇರಿ ನಾಲ್ವರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ 2023ರ ಮಾರ್ಚ್ 31ರಂದು ಕಲಬುರ್ಗಿಯ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ವಿದ್ಯಾರ್ಥಿಗಳ ಖಾತೆಗೆ ಸ್ಟೈಫಂಡ್ ಹಣ ಜಮೆ ಮಾಡಿಸಿ, ಬಳಿಕ ವಿದ್ಯಾರ್ಥಿಗಳಿಂದ ಖಾಲಿ ಚೆಕ್ಗಳಿಗೆ ಅಕ್ರಮವಾಗಿ ಸಹಿ ಪಡೆದುಕೊಂಡಿದ್ದರು. ಆ ನಂತರ ಅಕ್ರಮವಾಗಿ ಸ್ಟೈಫಂಡ್ ಹಣವನ್ನು ವಿತ್ಡ್ರಾ ಮಾಡಿಕೊಂಡ ಈ ನಾಲ್ವರು, ತಮ್ಮ ಸ್ವಂತಕ್ಕೆ ಬಳಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಈ ಪ್ರಕರಣ ಸಂಬಂಧ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಗೊತ್ತಾಗಿದೆ
ಈ ಸಂಬಂಧ ಭೀಮಾಶಂಕರ ಬಿಲಗುಂದಿ, ಡಾ.ಎಸ್.ಎಂ. ಪಾಟೀಲ, ಸುಭಾಷ ಜಗನ್ನಾಥ ಅವರ ಮನೆಗಳಲ್ಲಿ ಶೋಧ ನಡೆಸಲಾಗಿದೆ. ಇಂದು ಬೆಳಿಗ್ಗೆ 9 ಕಾರುಗಳಲ್ಲಿ 30ಕ್ಕೂ ಹೆಚ್ಚು ಇ.ಡಿ. ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮನೆಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಕೆನರಾ ಬ್ಯಾಂಕ್ ಎಂಆರ್ಎಂಸಿ ಶಾಖೆಯ ವ್ಯವಸ್ಥಾಪಕರ ಮನೆ ಮೇಲಿನ ದಾಳಿಯ ಬಗ್ಗೆ ತಿಳಿದುಬಂದಿಲ್ಲ.