ಬೆಂಗಳೂರು : ಮೈಸೂರು ನಾಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದ ಅಕ್ರಮ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಮೆಟ್ಟಿಲೇರಿದ್ದಾರೆ. ಇದರಿಂದ ಸಿಎಂ ಸಿದ್ದರಾಮಯ್ಯಗೆ ಮತ್ತೆ ಮುಡಾ ಸಂಕಷ್ಟ ಶುರುವಾಗಿದೆ.
ಹೌದು ಸ್ನೇಹಮಯಿ ಕೃಷ್ಣ ಅವರು, ಮೈಸೂರು ಜಿಲ್ಲಾ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ ಎಂ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಜಮೀನಿನ ಮೂಲ ಮಾಲೀಕ ಜೆ. ದೇವರಾಜು, ಮುಡಾದ ಮಾಜಿ ಆಯುಕ್ತ ಜಿ ಟಿ ದಿನೇಶ್ ಕುಮಾರ್ ಮತ್ತು ಜಾರಿ ನಿರ್ದೇಶನಾಲಯದ ಸಹಾಯಕ ನಿರ್ದೇಶಕರನ್ನು ಪ್ರತಿವಾದಿಗಳನ್ನಾಗಿ ಹೆಸರಿಸಿದ್ದಾರೆ. ಈ ಪ್ರಕರಣದಲ್ಲಿ ಖಾಸಗಿ ದೂರುದಾರರಾಗಿರುವ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿ ಇನ್ನೂ ವಿಚಾರಣೆಗೆ ಬರಬೇಕಿದೆ.
ವಿಶೇಷ ನ್ಯಾಯಾಲಯವು 2026ರ ಜನವರಿ 28ರಂದು ಈ ಬಿ ರಿಪೋರ್ಟ್ ಅನ್ನು ಅಂಗೀಕರಿಸಿ ಆದೇಶ ಹೊರಡಿಸಿತ್ತು. ಹೀಗಾಗಿ, ಲೋಕಾಯುಕ್ತ ಎಸ್ಪಿ ಸಲ್ಲಿಸಿರುವ ಬಿ ರಿಪೋರ್ಟ್ ಅನ್ನು ಪರಿಶೀಲನೆಗೆ ಒಳಪಡಿಸಬೇಕು, ಅದನ್ನು ಒಪ್ಪಿಕೊಂಡಿರುವ ವಿಶೇಷ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಬೇಕು ಎಂದು ಸ್ನೇಹಮಯಿ ಕೃಷ್ಣ ಆಗ್ರಹಿಸಿದ್ದಾರೆ.
ಮುಡಾ ಪ್ರಕರಣದ ತನಿಖೆಯನ್ನು ಸ್ವತಂತ್ರ ತನಿಖಾ ಸಂಸ್ಥೆಗೆ ವರ್ಗಾಯಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಆ ಸಂಸ್ಥೆಯು ತನಿಖೆ ನಡೆಸಿ ಹೊಸ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಬೇಕೆಂದೂ ಕೋರಿದ್ದಾರೆ. ಹೀಗಾಗಿ ಸಿಎಂಗೆ ಸಂಕಷ್ಟ ಎದುರಾಗಿದೆ.








