ಬೆಂಗಳೂರು : ಕಲಬುರಗಿ ಶರಣಬಸವೇಶ್ವರ ಸಂಸ್ಥಾನದ ಮಠದ ಎಂಟನೇ ಪೀಠಾಧಿಪತಿ ಡಾ. ಶರಣಬಸಪ್ಪ ಅಪ್ಪಾ (92) ಲಿಂಗೈಕ್ಯರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಸಿಎಂ ಸಿದ್ದರಾಮಯ್ಯ.ಶರಣರ ನಾಡು ಕಲಬುರಗಿಯ ಮಹಾದಾಸೋಹಿ, ಶರಣ ಬಸವೇಶ್ವರ ಮಹಾಸಂಸ್ಥಾನದ ಮಠಾಧೀಶರಾದ ಡಾ. ಶರಣಬಸಪ್ಪ ಅಪ್ಪನವರು ಲಿಂಗೈಕ್ಯರಾದ ಸುದ್ದಿ ನೋವುಂಟು ಮಾಡಿದೆ.ಬಸವಾದಿ ಶರಣರು ತೋರಿದ ಕಾಯಕ ಮತ್ತು ದಾಸೋಹದ ಹಾದಿಯಲ್ಲಿ ನಡೆಯುತ್ತಾ, ಸಮಾಜದ ಏಳಿಗೆಗಾಗಿ ಸದಾ ತುಡಿಯುತ್ತಿದ್ದ ನಿಜ ಬಸವಾನುಯಾಯಿ ಶರಣಬಸಪ್ಪ ಅಪ್ಪನವರ ಅಗಲಿಕೆಯಿಂದ ನಾಡು ಬಡವಾಗಿದೆ.ಅವರ ಆತ್ಮಕ್ಕೆ ಶಾಂತಿ ಸಿಗಲಿ, ಗುರುಗಳ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಅವರ ಭಕ್ತವೃಂದಕ್ಕೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಡಾ. ಶರಣಬಸಪ್ಪ ಅಪ್ಪಾ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಶರಣಬಸವೇಶ್ವರ ಸಂಸ್ಥಾನ ಮಠದಲ್ಲಿ ದಾಸೋಹ ಮಹಾಮನೆಯಲ್ಲಿ ಡಾ. ಶರಣಬಸಪ್ಪ ಅಪ್ಪಾ ಲಿಂಗೈಕ್ಯರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.