ಕೊಡಗು : ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿನ ದಾಳಿ ಗೆ ಇಬ್ಬರು ಕನ್ನಡಿಗರು ಸೇರಿದಂತೆ ಪ್ರವಾಸಿಗರು ಬಲಿಯಾಗಿದ್ದಾರೆ. ಇದೀಗ ಈ ಒಂದು ನರಮೇಧವನ್ನು ಸಮರ್ಥಿಸಿ ಕೊಡಗಿನಲ್ಲಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಫೇಸ್ ಬುಕ್ ಪೇಜ್ ವಿರುದ್ಧ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲದ ಸತೀಶ್ ಕುಮಾರ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ FIR ದಾಖಲಾಗಿದೆ.
ಹೌದು ನಿಚ್ಚು ಮಂಗಳೂರು ಎಂಬ ಫೇಸ್ಬುಕ್ ಪೇಜ್ನಲ್ಲಿ, 2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್ನಲ್ಲಿ ಮೂವರು ಮುಸ್ಲಿಮರನ್ನು ಕೊಲ್ಲಲಾಗಿತ್ತು. ಆರೋಪಿ ಚೇತನ್ ಸಿಂಗ್ಗೆ ಸಾರ್ವಜನಿಕವಾಗಿ ನೇಣಿಗೆ ಹಾಕಲಿಲ್ಲ. ಪಾಲ್ಗರ್ ಘಟನೆ ಕಾರಣಕ್ಕೆ ಕಾಶ್ಮೀರದಲ್ಲಿ ಧರ್ಮ ಕೇಳಿ ಉಗ್ರರು ಹತ್ಯೆ ಮಾಡಿದ್ದಾರೆ” ಎಂದು ಪೋಸ್ಟ್ ಹಾಕಲಾಗಿದೆ. ಈ ಪೋಸ್ಟ್ಗೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಪೇಸ್ ಬುಕ್ ಪೇಜ್ನ ಡಿಪಿಯಲ್ಲಿರುವ ಯುವಕ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ.
ಫೇಸ್ಬುಕ್ ನಲ್ಲಿ ಈ ಒಂದು ಪೋಸ್ಟ್ ಹರಿದಾಡುತ್ತಿದ್ದಂತೆ, ಸತೀಶ್ ಕುಮಾರ್ ಎನ್ನುವವರು ದೂರು ನೀಡಿದ್ದಾರೆ. ಇವರ ದೂರಿನ ಮೇರೆಗೆ ಇದೀಗ ಪೊಲೀಸರು BNS ಸೆಕ್ಷನ್ 192, 352 (1) (b) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಪೋಸ್ಟ್ ಹಂಚಿಕೊಂಡಿದ್ದ ಕಿಡಿಗೇಡಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.