ಬೆಂಗಳೂರು : ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಪ್ರಮುಖ ಆರೋಪಿ ನಟಿ ರನ್ಯಾ ರಾವ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇದೀಗ ನಟಿ ರನ್ಯಾ ರಾವ್ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ವೇಳೆ ರನ್ಯಾ ರಾವ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ನ್ಯಾಯಪೀಠ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು DRI ಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಏಪ್ರಿಲ್ 17ಕ್ಕೆ ಮುಂದೂಡಿದೆ.
ಚಿನ್ನ ಕಳ್ಳಸಾಗಣೆ ಆರೋಪ ಪ್ರಕರಣದಲ್ಲಿ ಮಾರ್ಚ್ 3ರಂದು ರಾತ್ರಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ಯಾ ಅವರನ್ನು ಬಂಧಿಸಿ, 14 ಕೆ.ಜಿ. ಚಿನ್ನವನ್ನು ಡಿಆರ್ಐ ಅಧಿಕಾರಿಗಳು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ವಹಿಸಿದ್ದರು.