ಬೆಂಗಳೂರು : ರಾಜ್ಯದಲ್ಲಿ ವಾಣಿಜ್ಯ ಇಲಾಖೆ ಸಣ್ಣ ಸಣ್ಣ ವ್ಯಾಪಾರಿಗಳಿಗೆ ಟ್ಯಾಕ್ಸ್ ಕಟ್ಟುವಂತೆ ನೋಟಿಸ್ ನೀಡಿದ್ದು, ಈ ವಿಚಾರವಾಗಿ ನಿನ್ನೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ನೀಡಿದ್ರು ತೆರಿಗೆ ವಸೂಲಿ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ಸಭೆ ನಡೆಸಿದ್ದು, ತೆರಿಗೆ ಇಲಾಖೆಯ ಅಧಿಕಾರಿಗಳು, ವರ್ತಕ ಸಂಘದ ಪ್ರತಿನಿಧಿಗಳ ಜೊತೆ ಮಹತ್ವದ ಮಾತುಕತೆ ನಡೆಸಿದರು. ಬಳಿಕ ಸುದ್ದಿಗೋಷ್ಠಿ ನಡೆಸಿದ ಸಿಎಂ, ನೋಟಿಸ್ ನೀಡಿದ ವರ್ತಕರಿಂದ ಬಾಕಿ ತೆರಿಗೆಯನ್ನು ವಸೂಲಿ ಮಾಡುವುದಿಲ್ಲ. ಆದರೆ ವರ್ತಕರು ಜಿಎಸ್ ಟಿ ನೋಂದಣಿ ಮಾಡಿಕೊಳ್ಳಬೇಕು. ಈಗ ಕೊಟ್ಟಿರುವ ನೋಟೀಸ್ ಮೇಲೆ ವಸೂಲಾತಿ, ಕ್ರಮ ಕೈಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ನೀಡಲಾಗಿದ್ದು, ಅಂತಹ ವ್ಯಾಪಾರಿಗಳಿಗೆ ನೊಟೀಸ್ ಕೊಟ್ಟಿದ್ದರೂ, ಅವರಿಂದ ತೆರಿಗೆ ವಸೂಲಿ ಮಾಡುವುದಿಲ್ಲ. ಆದರೆ ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ಕಟ್ಟಬೇಕು. ನೊಟೀಸ್ ನೀಡಲಾಗಿರುವ ಹಳೆಯ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಅದನ್ನು ಸರ್ಕಾರ ವಸೂಲು ಮಾಡುವುದಿಲ್ಲ. ಆದರೆ ಅವರೆಲ್ಲರೂ ಕಡ್ಡಾಯವಾಗಿ ಜಿಎಸ್ಟಿ ನೋಂದಣಿ ಮಾಡಬೇಕು ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಸಣ್ಣ ವ್ಯಾಪಾರಿಗಳಲ್ಲಿ ಇದ್ದ ಟ್ಯಾಕ್ಸ್ ಗೊಂದಲಗಳಿಗೆ ತೆರೆ ಎಳೆದರು.