ನವದೆಹಲಿ : ಹಾಲಿ ಇರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಪದ್ಧತಿಯಲ್ಲಿ ಮಹತ್ವದ ಬದಲಾವಣೆ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರೋತ್ಸವ ಭಾಷಣದಲ್ಲಿ ಘೋಷಿಸಿದ್ದಾರೆ. ‘ಮುಂದಿನ ತಲೆಮಾರಿನ ಜಿಎಸ್ಟಿ ಸುಧಾರಣೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ಈ ಕ್ರಮ ಜನಸಾಮಾನ್ಯರ ಮೇಲಿನ ತೆರಿಗೆ ಹೊರೆಯನ್ನು ಸಾಕಷ್ಟು ಕಡಿಮೆ ಮಾಡಲಿದೆ. ಇದು ಜನಸಾಮಾನ್ಯರಿಗೆ ಕೇಂದ್ರ ದಿಂದನೀಡುವದೀಪಾವಳಿ ಕೊಡುಗೆಯಾಗಿದೆ ಎಂದು ಹೇಳಿದ್ದಾರೆ.
ಹೌದು 79ನೇ ಸ್ವಾತಂತ್ರೋತ್ಸವ ಹಿನ್ನೆಲೆಯಲ್ಲಿ ದೆಹಲಿಯ ಕೆಂಪುಕೋಟೆಯಲ್ಲಿ ಸಂಪ್ರದಾಯ ದಂತೆ ದೇಶವನ್ನುದ್ದೇಶಿಸಿ ಮಾತನಾಡಿದ ಮೋದಿ ಅವರು, ‘ಸರಕು-ಸೇವಾ ತೆರಿಗೆ ಜಾರಿಗೆ ಬಂದು 8 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಮಹತ್ವದ ಸುಧಾರಣೆ ತರುವ ಕಾಲ ಸನ್ನಿಹಿತವಾಗಿದೆ. ನಾವು ರಾಜ್ಯಗಳ ಜತೆಗೆ ಈ ಸಂಬಂಧ ಮಾತುಕತೆ ನಡೆಸಿದ್ದೇವೆ. ಮುಂದಿನ ತಲೆಮಾರಿನ ಜಿಎಸ್ಟಿ ಸುಧಾರಣೆ ದೀಪಾವಳಿ ಹೊತ್ತಿಗೆ ಸಿದ್ದವಾಗಲಿದ್ದೇವೆ ಎಂದರು.
ಇದು ದೇಶವಾಸಿಗಳ ಪಾಲಿನ ದೀಪಾವಳಿ ಗಿಫ್ಟ್ ಆಗಿರಲಿದೆ. ಜನಸಾಮಾನ್ಯನ ಮೇಲಿನ ತೆರಿಗೆ ಹೊರೆ ಸಾಕಷ್ಟು ಕಡಿಮೆಯಾಗಲಿದೆ. ನಮ್ಮ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಇದರಿಂದ ಹೆಚ್ಚಿನ ಅನುಕೂಲ ಆಗಲಿದೆ. ದಿನಬಳಕೆ ವಸ್ತುಗಳ ಬೆಲೆಗಳೂ ಕಡಿಮೆಯಾಗಲಿವೆ’ ಎಂದ ಮೋದಿ, ದೇಶದ ಆರ್ಥಿಕತೆಗೂ ಇದು ಚೈತನ್ಯ ನೀಡಲಿದೆ ಎಂದರು.ಇದೇ ವೇಳೆ, ಜನರಿಗೆ ಅನುಕೂಲವಾಗುವ ರೀತಿ ಕೇಂದ್ರ ಸರ್ಕಾರ ಈಗಾಗಲೇ ಹಲವು ಮಹತ್ವದ ತೆರಿಗೆ ಸುಧಾರಣೆ ಕೈಗೊಂಡಿದೆ. 12 ಲಕ್ಷ ರು.ವರೆಗೆ ಆದಾಯ ತೆರಿಗೆ ವಿನಾಯ್ತಿ ನೀಡಿದೆ ಎಂದೂ ಹೇಳಿದರು.
ಇದರ ಬೆನ್ನಲ್ಲೇ ಕೇಂದ್ರ ಹಣಕಾಸು ಸಚಿವಾ ಲಯ ಹೇಳಿಕೆ ನೀಡಿದ್ದು, ದೇಶದಲ್ಲಿ ಇದೀಗ ಶೇ.5, ಶೇ.12, ಶೇ.18 ಮತ್ತು ಶೇ.28 – ಹೀಗೆ 4 ಸ್ತರಗಳಲ್ಲಿ ಜಿಎಸ್ಟಿ ವಿಧಿಸಲಾಗುತ್ತಿದೆ. ಇದನ್ನು 2 ಸ್ತರಗಳಿಗೆ ಇಳಿಸಲು ಸಚಿವಾಲಯ ಶಿಫಾರಸು ಮಾಡಿದೆ’ ಎಂದಿದೆ. ಅರ್ಥಾತ್ ಈ 4 ಸ್ತರಗಳ ಜಿಎಸ್ಟಿಗಳ ಪೈಕಿ 2 ಸ್ತರಗಳು ರದ್ದಾಗಲಿವೆ.
ಇದೇ ವೇಳೆ ಮಾಹಿತಿ ನೀಡಿರುವ ಮೂಲಗಳು, ಶೇ.18 ಹಾಗೂ ಶೇ.5 ಸ್ಟ್ರಾಬ್ ಮಾತ್ರ ಉಳಿವ ಸಾಧ್ಯತೆ ಇದೆ. ಶೇ.12ರ ಸ್ಟ್ರಾಬ್ ನಲ್ಲಿರುವ ಶೇ.99 ವಸ್ತುಗಳು ಶೇ.5ರ ಸ್ಟ್ರಾಬ್ ಗೆ ಇಳಿಕೆ ಆಗುವ ಸಾಧ್ಯತೆ ಇದೆ. ಶೇ.28ರ ಫ್ಲ್ಯಾಬ್ನಲ್ಲಿರುವ ಶೇ.90ರಷ್ಟು ವಸ್ತುಗಳ ಜಿಎಸ್ಟಿ ಶೇ.18ಕ್ಕೆ ಇಳಿಯಲಿದೆ. ಈವರೆಗೆ ಶೇ.28ರಷ್ಟು ಜಿಎಸ್ಟಿಯಲ್ಲಿದ್ದ ಮದ್ಯ, ಸಿಗರೇಟ್ನಂಥ ಉತ್ಪನ್ನಕ್ಕೆ (ಸಿನ್ ಗೂಡ್) ಶೇ.40ರಷ್ಟು ಜಿಎಸ್ಟಿ ಹಾಕುವ ಯೋಚನೆ ಇದೆ ಎಂದು ಹೇಳಿವೆ.