ಬೆಂಗಳೂರು : ಈಗಾಗಲೇ ಕರ್ನಾಟಕ ರಾಜ್ಯಕ್ಕೆ ಹಳದಿ ಮತ್ತು ಕೆಂಪು ಮಿಶ್ರಿತ ನಾಡ ಧ್ವಜ ಹೊಂದಲಾಗಿದೆ. ಹೀಗಿದ್ದರೂ ಕೂಡ ರಾಜ್ಯಕ್ಕೆ ಪ್ರತ್ಯೇಕ ಧ್ವಜ ಹೊಂದುವ ಕುರಿತು ಪ್ರಾಧಿಕಾರಗಳಿಗೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಕರ್ನಾಟಕ ಹೈಕೋರ್ಟ್ ಇಂದು ವಜಾ ಮಾಡಿದೆ.
ಹೌದು ಈ ಕುರಿತಂತೆ ಬೆಳಗಾವಿಯ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ್ ಎಂಬುವವರು ಕರ್ನಾಟಕಕ್ಕೆ ಪ್ರತ್ಯೇಕ ಧ್ವಜಕ್ಕಾಗಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಎನ್.ವಿ. ಅಂಜಾರಿಯಾ ಮತ್ತು ನ್ಯಾಕೆ ವಿ ಅರವಿಂದ್ ಅವರ ವಿಭಾಗೀಯ ಪೀಠ ಪಿಐಎಲ್ ವಜಾಗೊಳಿಸಿ ಆದೇಶಿಸಿದೆ.
ಕಳೆದ 6 ವರ್ಷಗಳ ಹಿಂದೆ ಅಂದರೆ 2018 ಮಾರ್ಚ್ 8ರಂದು ಸಿಎಂ ಸಿದ್ದರಾಮಯ್ಯ ಅವರು ಹಳದಿ, ಬಿಳಿ ಮತ್ತು ಕೆಂಪು ವರ್ಣಗಳ ನಡುವೆ ಗಂಡಭೇರುಂಡ ಚಿಹ್ನೆ ಹೊಂದಿರುವ ಧ್ವಜವನ್ನು ಸಾರ್ವಜನಿಕವಾಗಿ ಅನಾವರಣಗೊಳಿಸಿದ್ದರು. ಈ ಧ್ವಜಕ್ಕಾಗಿ ಕೇಂದ್ರ ಸರ್ಕಾರದಿಂದ ಮಾನ್ಯತೆಗೆ ಕೋರಲಾಗಿತ್ತು.
ಪ್ರತ್ಯೇಕ ನಾಡ ಧ್ವಜ ವಿಚಾರ ಕೋರ್ಟ್ ವ್ಯಾಪ್ತಿಗೆ ಒಳಪಡಲ್ಲ. ತಪ್ಪಾಗಿ ಅರ್ಥೈಸಿಕೊಂಡು ಪಿಐಎಲ್ ಸಲ್ಲಿಕೆ ಮಾಡಲಾಗಿದೆ. ಆದ್ದರಿಂದ ಈ ಅರ್ಜಿಯನ್ನು ವಜಾ ಮಾಡಲಾಗಿದೆ. ಮನವಿಯ ಊರ್ಜಿತತ್ವಕ್ಕೆ ಸಂಬಂಧಿಸಿ ಕೋರ್ಟ್ ಅಭಿಪ್ರಾಯವನ್ನು ವ್ಯಕ್ತಪಡಿಸಿಲ್ಲ ಎಂದಿರುವ ಪೀಠವು ಅರ್ಜಿಯನ್ನು ವಜಾಗೊಳಿಸಿದೆ.