ಬೆಂಗಳೂರು : ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ್ದು, ರಾಜ್ಯ ಸರ್ಕಾರ ಜಿಎಸ್ಟಿ ಸಂಗ್ರಹದಲ್ಲಿ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು.
ಜಂಟಿ ಅಧಿವೇಶನದ ಕುರಿತು ರಾಜ್ಯಪಾಲರು ಭಾಷಣ ಆರಂಭಿಸಿದರು. ಸರ್ಕಾರ ಕಟ್ಟ ಕಡೆಯ ವ್ಯಕ್ತಿಯವರೆಗೂ ಯೋಜನೆ ತಲುಪಿಸಿದೆ. ಗ್ಯಾರೆಂಟಿಯಿಂದ ದಿವಾಳಿ ಆಗುತ್ತದೆ ಎಂದು ಹೇಳಿದ್ದರು. ಆದರೆ ಈ ಎಲ್ಲ ಆರೋಪಗಳನ್ನು ಸರ್ಕಾರ ಸುಳ್ಳು ಎಂದು ಸಾಬೀತು ಮಾಡಿದೆ. ಜಿಎಸ್ಟಿ ಸಂಗ್ರಹದಲ್ಲೂ ರಾಜ್ಯ ಮಂಚೂಣಿಯಲ್ಲಿದೆ ಎಂದು ತಿಳಿಸಿದರು.
ಹೀಗಿದೆ ರಾಜ್ಯಪಾಲರ ಭಾಷಣದ ಮುಖ್ಯಾಂಶಗಳು
1. ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ತಮ್ಮೆಲ್ಲರಿಗೂ ನಾನು ಹಾರ್ದಿಕ ಸ್ವಾಗತವನ್ನು ಕೋರುತ್ತೇನೆ. ಕರ್ನಾಟಕ ವಿಧಾನ ಮಂಡಲದ ಮತ್ತೊಂದು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ನನಗೆ ಅತೀವ ಹರ್ಷವಾಗುತ್ತಿದೆ. ನನ್ನ ಸರ್ಕಾರ ರಾಜ್ಯದ ಅಭಿವೃದ್ಧಿಯ ವೇಗವನ್ನು ಚುರುಕುಗೊಳಿಸುವುದರಲ್ಲಿ ಮತ್ತು ಸರಕಾರದ ಹಣಕಾಸು ವ್ಯವಸ್ಥೆಯನ್ನು ಇನ್ನಷ್ಟು ಸದೃಢಗೊಳಿಸುವಲ್ಲಿ ಯಶಸ್ವಿಯಾಗಿದೆ ಎಂದು ಹೆಮ್ಮೆಯಿಂದ ತಿಳಿಸ ಬಯಸುತ್ತೇನೆ. ಮಹಾತ್ಮಾ ಗಾಂಧಿಯವರು ಹೇಳಿದಂತೆ ಆಡಳಿತವನ್ನು ಅಂತಿಮ ವ್ಯಕ್ತಿಯ ಕಣ್ಣೀರು ಒರೆಸುವ ಅವಕಾಶವೆಂಬಂತೆ ಬಳಸಿಕೊಳ್ಳಲು ನನ್ನ ಸರ್ಕಾರ ಕಟಿಬದ್ಧವಾಗಿದೆ. ಸರ್ಕಾರ ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೆಯ ಕಲ್ಯಾಣ ಯೋಜನೆಗಳಿಂದಾಗಿ ರಾಜ್ಯ ಅಭಿವೃದ್ಧಿಯಲ್ಲಿ ಹಿಂದೆ ಬೀಳುತ್ತದೆ ಮತ್ತು ರಾಜ್ಯದ ಹಣಕಾಸು ವ್ಯವಸ್ಥೆ ಹದಗೆಡುತ್ತದೆ ಎಂದು ಹಲವರು ಭವಿಷ್ಯ ನುಡಿದಿದ್ದರು. ಆ ಭವಿಷ್ಯವನ್ನು ಸರಕಾರ ಸುಳ್ಳು ಮಾಡಿದೆ. ಪ್ರತಿಯೊಂದು ವಲಯದಲ್ಲೂ ರಾಜ್ಯವು ಉತ್ತಮವಾದ ಸಾಧನೆಗಳನ್ನು ದಾಖಲಿಸಿದೆ. ರಾಜ್ಯದ ಆದಾಯ ಹೆಚ್ಚುತ್ತಿದೆ. ರಾಜ್ಯಕ್ಕೆ ಖಾಸಗಿ ಬಂಡವಾಳ ದಾಖಲೆ ಪ್ರಮಾಣದಲ್ಲಿ ಹರಿದು ಬರುತ್ತಿದೆ. ಕಲ್ಯಾಣ . ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನದಿಂದಾಗಿ ಅಸಮಾನತೆಯ ತೀವ್ರತೆ ಕಡಿಮೆಯಾಗುತ್ತಿದೆ. ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಜಿಎಸ್ಟಿ ಬೆಳವಣಿಗೆ ದರ ಉತ್ತಮವಾಗಿದೆ.
2. 2024-25ನೇ ಸಾಲಿನ ಬಜೆಟ್ನಲ್ಲಿ ಆದೇಶ ಹೊರಡಿಸಬೇಕಾಗಿದ್ದ 344 ಘೋಷಣೆಗಳ ಪೈಕಿ 331 ಘೋಷಣೆಗಳಿಗೆ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಘೋಷಣೆ ಮಾಡಿದ್ದ ಕಾರ್ಯಕ್ರಮಗಳೂ ಸಹ ಸಮರ್ಪಕವಾಗಿ ಅನುಷ್ಠಾನವಾಗುತ್ತಿವೆ. ಘೋಷಣೆಗಳೂ ಆದೇಶ ಹೊರಡಿಸುವ ಹಂತದಲ್ಲಿವೆ. ಇನ್ನುಳಿದ
3. ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ತೀವುರೂಪದ ಅತಿವೃಷ್ಟಿ ಅನಾವೃಷ್ಟಿಗಳಿಲ್ಲದ ಕಾರಣ ರೈತರ ಕೈಗೆ ಉತ್ತಮ ಫಸಲು ಸಿಕ್ಕಿದೆ. ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಂದ ಸುಮಾರು 149 ಲಕ್ಷ ಟನ್ನುಗಳಷ್ಟು ಕೃಷಿ ಉತ್ಪಾದನೆ ನಿರೀಕ್ಷಿಸಲಾಗಿದೆ. ಸರ್ಕಾರವು ತೆಗೆದುಕೊಂಡ ಕಲ್ಯಾಣ ಕಾರ್ಯಕ್ರಮಗಳಿಂದ ರಾಜ್ಯದ ರೈತ ಕುಟುಂಬಗಳಲ್ಲಿ ಆತ್ಮಹತ್ಯೆಗಳ ಪ್ರಮಾಣವು ಗಣನೀಯವಾಗಿ ಕಡಿಮೆಯಾಗಿದೆ. ನನ್ನ ಸರ್ಕಾರವು ರಚನೆಯಾದಾಗಿಂದಲೂ ತೊಗರಿ ಮತ್ತು ಕೊಬ್ಬರಿಗೆ ಬೆಲೆಗಳು ಕುಸಿದಾಗ ರೈತರ ನೆರವಿಗೆ ನಿಂತು ಪ್ರೋತ್ಸಾಹ ಧನವನ್ನು ನೀಡಿದೆ. ಕೃಷಿಭಾಗ್ಯ ಯೋಜನೆಯನ್ನು ಮುಂದುವರೆಸುವ ಮೂಲಕ ಅಗತ್ಯ ಇರುವ ಕಡೆಗಳಲ್ಲೆಲ್ಲಾ ಕೃಷಿ ಹೊಂಡಗಳನ್ನು ನಿರ್ಮಿಸಲಾಗುತ್ತಿದೆ.
4. ಕರ್ನಾಟಕವು ಹಾಲಿನ ಉತ್ಪಾದನೆಯಲ್ಲಿ ದಾಖಲೆ ಬರೆದಿದೆ. ಕೆಎಂಎಫ್ ಈ ಬಾರಿ ದಿನವೊಂದಕ್ಕೆ 1 ಕೋಟಿ ಲೀಟರ್ಗಳಷ್ಟು ಹಾಲನ್ನು ಸಂಗ್ರಹಿಸಿದೆ. ಹೈನೋದ್ಯಮಕ್ಕೆ ನೀಡುತ್ತಿರುವ ಪ್ರೋತ್ಸಾಹದ ಕಾರಣಕ್ಕಾಗಿಯೇ ಈ ಸಾಧನೆ ಸಾಧ್ಯವಾಗಿದೆ. ಸರ್ಕಾರವು ಇದುವರೆಗೆ ರೂ.ಗಳಷ್ಟು 1500 ಪ್ರೋತ್ಸಾಹಧನ ನೀಡಿದೆ. ಸರ್ಕಾರವು ಪಶುಪಾಲಕರ ನೆರವಿಗಾಗಿ ಅನುಗ್ರಹ ಯೋಜನೆಯನ್ನು ಮುಂದುವರೆಸಿದೆ. ಪ್ರಸಕ್ತ ಸಾಲಿನಲ್ಲಿ ಆಕಸ್ಮಿಕವಾಗಿ ಮರಣ ಹೊಂದಿದ 24934 ರಾಸುಗಳು ಹಾಗೂ 33373 ಕುರಿ ಮತ್ತು ಮೇಕೆಗಳಿಗೆ 26.60 ಕೋಟಿ ರೂಪಾಯಿಗಳನ್ನು ಪರಿಹಾರವನ್ನು ನೀಡಿದೆ.
5. ಸಮಾಜವು ಸೋಷಿಯಲ್ ಡಾರ್ವಿನಿಸಂ ಹೋಗಬಾರದೆಂದು ನಮ್ಮ ಹಿರಿಯರು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೂಲಕ ಈ ದೇಶಕ್ಕೆ ಅತ್ಯಂತ ಮಾನವೀಯವಾದ ಸಂವಿಧಾನವನ್ನು ಕೊಟ್ಟಿದ್ದಾರೆ. ಸಂವಿಧಾನವು ಅಸಮಾನತೆಯನ್ನು ತಗ್ಗಿಸಿ ಆದಾಯದ ನ್ಯಾಯಯುತ ಪಾಲನ್ನು ಜನರಿಗೆ ಖಾತರಿಪಡಿಸಬೇಕೆಂದು ಹೇಳುತ್ತದೆ. ಈ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇದಕ್ಕಾಗಿ ವರ್ಷಕ್ಕೆ 52 ಸಾವಿರ ಕೋಟಿಗಳಿಗೂ ಹೆಚ್ಚಿನ ಸಂಪನ್ಮೂಲಗಳನ್ನು ಒದಗಿಸುತ್ತಿದೆ. ನನ್ನ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ 5 ಗ್ಯಾರಂಟಿ ಯೋಜನೆಗಳಿಗಾಗಿ 70000 ಕೋಟಿ ರೂಪಾಯಿಗಳನ್ನು ನೇರವಾಗಿ ಜನರ ಖಾತೆಗಳಿಗೆ ವರ್ಗಾಯಿಸಿದೆ.
6. ಕಲ್ಯಾಣ ಕಾರ್ಯಕ್ರಮಗಳಿಗಾಗಿ ವರ್ಷಕ್ಕೆ ಒಟ್ಟಾರೆ 90 ಸಾವಿರ ಕೋಟಿ ರೂಪಾಯಿಗಳಿಗೂ ಹೆಚ್ಚಿನ ಹಣವನ್ನು ಖರ್ಚು ಮಾಡಲಾಗುತ್ತಿದೆ. ಸಾಮಾಜಿಕ ಪಿಂಚಣಿಗಳು, ರೈತರ ಪಂಪು ಸೆಟ್ಟುಗಳಿಗೆ ಉಚಿತ ವಿದ್ಯುತ್, ಕೃಷಿ-ತೋಟಗಾರಿಕೆ, ರೇಷ್ಮೆ, ಪಶುಪಾಲನೆ, ಮೀನುಗಾರಿಕೆ, ಆಹಾರ ಮತ್ತು ನಾಗರಿಕ ಸರಬರಾಜು, ಕೈಮಗ್ಗ ಮತ್ತು ಜವಳಿ, ವಸತಿ, ಶಿಕ್ಷಣ, ಕೈಗಾರಿಕೆ, ಕೌಶಲ್ಯಾಭಿವೃದ್ಧಿ, ಹಿಂದುಳಿದ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತ, ಮಹಿಳಾ ಮತ್ತು ಮಕ್ಕಳ ಕಲ್ಯಾಣಸೇರಿದಂತೆ ಹಲವಾರು ಇಲಾಖೆಗಳ ವತಿಯಿಂದ ನೀಡುವ ನೇರ ನಗದು ಯೋಜನೆಗಳು ಮತ್ತು ಸಬ್ಸಿಡಿ, ಪ್ರೋತ್ಸಾಹ ಧನಗಳಿಂದ ಸುಮಾರು 1.25 ಕೋಟಿಗೂ ಹೆಚ್ಚು ಕುಟುಂಬಗಳು ಅನುಕೂಲ ಪಡೆಯುತ್ತಿವೆ. ಅಭಿವೃದ್ಧಿಯಲ್ಲಿ ಕರ್ನಾಟಕದ ವಿಶಿಷ್ಟ ಮಾದರಿಯನ್ನು ಸರ್ಕಾರವು ರೂಪಿಸುತ್ತಿದೆ.
7. ಕರ್ನಾಟಕ ಮಾದರಿ ಅಭಿವೃದ್ಧಿಯೆಂದರೆ ಜನಕೇಂದ್ರಿತ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಆಡಳಿತವನ್ನು ರೂಪಿಸುವುದು ಎಂದರ್ಥ. ಹಸಿರು ಇಂಧನ, ಮಹಿಳಾ ಸಬಲೀಕರಣ ಮುಂತಾದವುಗಳೂ ಇದರಲ್ಲಿ ಸೇರುತ್ತವೆ. ಕರ್ನಾಟಕದ ಮಾದರಿಯನ್ನು ಜಗತ್ತಿನ ಅನೇಕ ಅರ್ಥಶಾಸ್ತ್ರಜ್ಞರು ಮತ್ತು ವಿಶ್ವವಿದ್ಯಾಲಯಗಳು ಅಧ್ಯಯನ ಮಾಡುತ್ತಿವೆ. ಆಕ್ಸ್ಫರ್ಡ್ ವಿಶ್ವವಿದ್ಯಾಲಯವು ಹೂಮನ್ ರೈಟ್ಸ್ ಹಬ್ನ ಬ್ಲಾಗ್ನಲ್ಲಿ “ಶೈನಿಂಗ್ ಎ ಲೈಟ್ ಇನ್ ದ ಡಾರ್ಕ್ನೆಸ್” ಎಂದು ಮತ್ತು “ಎ ಬ್ಲೂ ಪ್ರಿಂಟ್ ಫಾರ್ ದ ವರ್ಲ್ಡ್” ಎಂದು ಈ ಮಾದರಿಯನ್ನು ವ್ಯಾಖ್ಯಾನಿಸಿವೆ. ಈ ಪ್ರಮೇಯದ ಕುರಿತು ತಿಳಿದುಕೊಳ್ಳಲು ವಿಶ್ವಸಂಸ್ಥೆಯ ಮುಖ್ಯಸ್ಥರೆ ರಾಜ್ಯಕ್ಕೆ ಬಂದು ನಮ್ಮ ಯೋಜನೆಗಳನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.
8. ಶಿಕ್ಷಣ ಕ್ಷೇತ್ರಕ್ಕಾಗಿ ಅಪಾರ ಪ್ರಮಾಣದ ಸಂಪನ್ಮೂಲವನ್ನು ವಿನಿಯೋಗಿಸಲಾಗುತ್ತಿದೆ. ಶಿಕ್ಷಣ ಇಲಾಖೆಯಲ್ಲಿ 13000 ಕ್ಕೂ ಹೆಚ್ಚಿನ ಪದವೀಧರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಉನ್ನತ ಶಿಕ್ಷಣ ಇಲಾಖೆಯಲ್ಲಿ 1088 ಸಹಾಯಕ ಪ್ರಾಧ್ಯಾಪಕರಿಗೆ ನೇಮಕಾತಿ ಆದೇಶ ನೀಡಸಲಾಗಿದೆ. 8,311 ಸಂಖ್ಯೆಯ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿದೆ. ವಿವೇಕ ಯೋಜನೆ ಹಾಗೂ ವಿಶೇಷ ಅನುದಾನದಡಿ 5349 ಶಾಲಾ ಕೊಠಡಿಗಳ ಕಾಮಗಾರಿ ಪೂರ್ಣಗೊಂಡಿವೆ. ಪ್ರಸ್ತುತ 784 ಕೊಠಡಿ ಕಾಮಗಾರಿಗಳು ಪ್ರಗತಿಯಲ್ಲಿವೆ. 522 ಕೆಪಿಎಸ್ ಶಾಲೆಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯದ 1953 ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳನ್ನು ಪ್ರಾರಂಭಿಸಿ ನರ್ಸರಿ ಶಾಲೆಗಳನ್ನು ತೆರೆಯಲಾಗಿದೆ. ಇದಷ್ಟೇ ಅಲ್ಲದೆ, ಮಕ್ಕಳಿಗೆ ರಜಾ ದಿನಗಳನ್ನು ಹೊರತುಪಡಿಸಿ ವಾರದ ಎಲ್ಲಾ ದಿನಗಳಂದು ಸರ್ಕಾರ ಹಾಗೂ ಅಜೀಂ ಪ್ರೇಮ್ ಜಿ ಫೌಂಡೇಶನ್ನುಗಳು ಸೇರಿ ಮೊಟ್ಟೆಯನ್ನು ನೀಡುತ್ತಿವೆ.
9. ಪ್ರಾದೇಶಿಕ ಅಸಮಾನತೆಯನ್ನು ಹೋಗಲಾಡಿಸುವ ದೃಷ್ಟಿಯಿಂದ 2002 ರಲ್ಲಿ ಡಾ. ಡಿ.ಎಂ.ನಂಜುಂಡಪ್ಪನವರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಿತ್ತು. ಸಮಿತಿಯ ವರದಿಯನ್ನು ಆಧರಿಸಿ ಇದುವರೆಗೆ 37,662 ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಇಲ್ಲಿಯವರೆಗೆ ಈ ದಿಶೆಯಲ್ಲಿ ಖರ್ಚು ಮಾಡಿದ ಸಂಪನ್ಮೂಲಗಳ ಪರಿಣಾಮ ಹಾಗೂ ಮುಂದುವರಿದ ಪ್ರಾದೇಶಿಕ ಅಸಮತೋಲನದ ಕುರಿತು ಅಧ್ಯಯನ ಮಾಡಿ ವರದಿ ಸಲ್ಲಿಸಲು ಆರ್ಥಿಕ ತಜ್ಞರಾದ ಡಾ.ಗೋವಿಂದರಾವ್ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯು ಈ ವರ್ಷವೇ ತನ್ನ ವರದಿಯನ್ನು ಸಲ್ಲಿಸಲಿದೆ. ವರದಿಯನ್ನು ಆಧರಿಸಿ ಮುಂದಿನ ದಿನಗಳಲ್ಲಿ ಅಭಿವೃದ್ಧಿಯಲ್ಲಿ ಸಮತೋಲನವನ್ನು ಸಾಧಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು.
10. ನನ್ನ ಸರ್ಕಾರವು ಇತ್ತೀಚೆಗೆ ತಾನೆ ಜಾಗತಿಕ ಹೂಡಿಕೆದಾರರ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸಿದೆ. ವಿಶ್ವದ 19 ಪ್ರಮುಖ ದೇಶಗಳು ಈ ಸಮ್ಮೇಳನದಲ್ಲಿ ಭಾಗವಹಿಸಿದ್ದವು. ಈ ಸಮ್ಮೇಳನವು ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ಹೂಡಿಕೆಯಲ್ಲಿ ಹೊಸ ದಾಖಲೆಯನ್ನ ಬರೆದಿದೆ 10.27 ಲಕ್ಷ ಕೋಟಿ ರೂ.ಗಳಷ್ಟು ಮೊತ್ತವನ್ನು ಹೂಡಿಕೆ ಮಾಡಲು ಒಡಂಬಡಿಕೆಗಳಾಗಿವೆ. ಈ ಬಾರಿ ಬಿಯಾಂಡ್ ಬೆಂಗಳೂರು ಪರಿಕಲ್ಪನೆಯಡಿ ಬೆಂಗಳೂರು ವ್ಯಾಪ್ತಿಯಿಂದ ಹೊರಗೆ ಶೇ.75ಕ್ಕೂ ಹೆಚ್ಚಿನ ಪ್ರಮಾಣದ ಹೂಡಿಕೆ ಒಪ್ಪಂದಗಳಾಗಿವೆ. ಉತ್ತರ ಕರ್ನಾಟಕದಲ್ಲಿ ಶೇ.45ರಷ್ಟು ಹೂಡಿಕೆ ಮಾಡಲು ಉದ್ದಿಮೆದಾರರು ಮುಂದೆ ಬಂದಿದ್ದಾರೆ. ಇದರಿಂದ ರಾಜ್ಯದ ನಿರುದ್ಯೋಗ ಸಮಸ್ಯೆಯನ್ನು ನಿಯಂತ್ರಿಸಲು ನೆರವಾಗುತ್ತದೆ.
11. ಮೂಲಭೂತ ಸೌಕರ್ಯಗಳನ್ನು ಒದಗಿಸುವುದರಲ್ಲೂ ಕರ್ನಾಟಕವು ಇಡೀ ದೇಶದಲ್ಲಿ ಮುಂಚೂಣಿ ರಾಜ್ಯವಾಗಿದೆ. ರಾಜ್ಯವು ತನ್ನ 2024-25 ರ ಬಜೆಟ್ನ ಶೇ.15.01ರಷ್ಟು ಸಂಪತ್ತನ್ನು ಬಂಡವಾಳ ವೆಚ್ಚಗಳಿಗಾಗಿ ವಿನಿಯೋಗಿಸುತ್ತಿದೆ. ಇದು ಮಹಾರಾಷ್ಟ್ರ ತಮಿಳುನಾಡು ಮತ್ತು ತೆಲಂಗಾಣ ಮುಂತಾದ ಪ್ರಗತಿಪರ ರಾಜ್ಯಗಳಿಗಿಂತ ಹೆಚ್ಚಿನ ಪ್ರಮಾಣದ್ದಾಗಿದೆ.
12. ನನ್ನ ಸರ್ಕಾರವು ಆಡಳಿತದಲ್ಲಿ ಪಾರದರ್ಶಕತೆ ತರಲು ನಿರಂತರವಾಗಿ ಪ್ರಯತ್ನಿಸುತ್ತಿದೆ. ಈ ಕಾರಣದಿಂದಲೇ ಕಂದಾಯ, ಗ್ರಾಮೀಣಾಭಿವೃದ್ಧಿ, ಅಬಕಾರಿ, ಅರಣ್ಯ ಮುಂತಾದ ಇಲಾಖೆಗಳಲ್ಲಿ ಅಧಿಕಾರಿ ನೌಕರರ ವರ್ಗಾವಣೆಗಳಿಗಾಗಿ ಕೌನ್ಸೆಲಿಂಗ್ ವ್ಯವಸ್ಥೆ ಜಾರಿಗೆ ತಂದಿದೆ. ಜನರಿಗೆ ನೀಡುವ ಸವಲತ್ತುಗಳನ್ನು ಮಧ್ಯವರ್ತಿ ರಹಿತವಾಗಿ ನೀಡಲು ಕ್ರಮವಹಿಸಲಾಗಿದೆ. ಹಿಂದೆ ನಡೆದಿದ್ದ ಭ್ರಷ್ಟಾಚಾರದ ಪ್ರಕರಣಗಳ ತನಿಖೆಗಳು ತಾರ್ಕಿಕ ಅಂತ್ಯ ಕಾಣುವ ಹಂತಕ್ಕೆ ಬಂದಿವೆ.
13. ಕರ್ನಾಟಕದ ಆರ್ಥಿಕತೆಯನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ರೂಪಿಸಲು ಸಮಗ್ರ ಹಾಗೂ ಸಮರ್ಥ ಪ್ರಯತ್ನವನ್ನು ಮಾಡಲಾಗುತ್ತಿದೆ. ಇದರ ಜೊತೆಯಲ್ಲಿ ಜನರಿಗೆ ಆರೋಗ್ಯ, ಶಿಕ್ಷಣ, ನೈರ್ಮಲ್ಯ ಹಾಗೂ ಸುಸ್ಥಿರ ಕೃಷಿ ವ್ಯವಸ್ಥೆಯುಳ್ಳ ರಾಜ್ಯವನ್ನಾಗಿ ರೂಪಿಸಲು ಸರ್ವ ಪ್ರಯತ್ನಗಳನ್ನು ಮಾಡುತ್ತಿದೆ.
14. ನನ್ನ ಸರ್ಕಾರವು 2024-25ನೇ ಸಾಲಿನಲ್ಲಿ ರಾಜ್ಯದ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವುದರೊಂದಿಗೆ ವಿತ್ತೀಯ ನಿರ್ವಹಣೆಯನ್ನು ಉತ್ತಮವಾಗಿ ನಿರ್ವಹಿಸಿದೆ. 2024-25ರ ಆರ್ಥಿಕ ವರ್ಷದ ಮೊದಲ ಮೂರು ತ್ರೈಮಾಸಿಕದಲ್ಲಿ ರಾಜ್ಯದ ರಾಜಸ್ವ ಸಂಗ್ರಹಣೆಯು 1,81,908 ಕೋಟಿ ರೂ.ಗಳಿಗೆ ತಲುಪಿರುತ್ತದೆ. ಕಳೆದ ಸಾಲಿಗೆ ಹೋಲಿಸಿದರೆ, ಡಿಸೆಂಬರ್ ತಿಂಗಳ ಅಂತ್ಯದವರೆಗೆ ರಾಜ್ಯದ ರಾಜಸ್ಥ ಸ್ವೀಕೃತಿಯು ಶೇಕಡ 13 ರಷ್ಟು ಬೆಳವಣಿಗೆ ಸಾಧಿಸಿದೆ. ರಾಜ್ಯಗಳಿಂದ ಸ್ವೀಕೃತವಾಗುವ ಒಟ್ಟು ಜಿ.ಎಸ್.ಟಿ ತೆರಿಗೆಯಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲಿಯೇ 2ನೇ ಸ್ಥಾನದಲ್ಲಿದ್ದು, ಪ್ರಸಕ್ತ ವರ್ಷದ ಡಿಸೆಂಬರ್ ಅಂತ್ಯದವರೆಗೆ ರಾಜ್ಯದ ಜಿ.ಎಸ್.ಟಿ ತೆರಿಗೆಯು ಶೇ.12ರಷ್ಟು ವರ್ಷವಾರು ಬೆಳವಣಿಗೆ ಸಾಧಿಸಿದೆ.
15. ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಮಾಜದ ಆರ್ಥಿಕ ದುರ್ಬಲ ವರ್ಗದ ಜನತೆಯಿಂದ ಸಾಲ ವಸೂಲಾತಿಯಲ್ಲಿ ಕಿರುಕುಳ, ಹಿಂಸೆ ಮತ್ತು ಒತ್ತಡದ ಹಲವಾರು ಘಟನೆಗಳು ಬೆಳಕಿಗೆ ಬಂದಿವೆ. ಕರ್ನಾಟಕ ರಾಜ್ಯದಲ್ಲಿ ಕಿರು ಸಾಲ ಮತ್ತು ಸಣ್ಣ ಸಾಲ ವಸೂಲಾತಿಯಲ್ಲಿ ಕಿರುಕುಳ, ಹಿಂಸೆ ಮತ್ತು ಒತ್ತಡ ತಡೆಯುವ ನಿಟ್ಟಿನಲ್ಲಿ ಪರಿಣಾಮಕಾರಿಯಾದ ಗಂಭೀರ ಕ್ರಮಗಳನ್ನು ಕೈಗೊಳ್ಳಲು, ಕಿರುಕುಳ ನೀಡುವ ವ್ಯಕ್ತಿಗಳಿಗೆ ಕನಿಷ್ಠ 6 ತಿಂಗಳು ಮತ್ತು ಗರಿಷ್ಠ 10 ವರ್ಷಗಳ ವರೆಗೆ ವಿಸ್ತರಿಸಬಹುದಾದ ಶಿಕ್ಷೆ ಹಾಗೂ 5 ಲಕ್ಷ ರೂಪಾಯಿ ವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸುವ ಸುಗ್ರೀವಾಜ್ಞೆಯನ್ನು ನನ್ನ ಅನುಷ್ಠಾನಗೊಳಿಸಿದೆ. ಕಿರು ಸರ್ಕಾರ ಸಾಲ ವಸೂಲಾತಿಯ ಕಿರುಕುಳವನ್ನು ತಡೆಯುವ ನಿಟ್ಟಿನಲ್ಲಿ ಶಾಸನಾತ್ಮಕವಾದ ಕ್ರಮಗಳಿಗೆ ಸರ್ಕಾರ ಮುಂದಾಗಿದೆ.