ಬೆಂಗಳೂರು : ಋತುಚಕ್ರ ರಜೆಗೆ ಸಂಬಂಧಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಇದೀಗ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಹೈಕೋರ್ಟ್ ಪೀಠದಿಂದ ತಡೆಯಾಜ್ಜೆ ನೀಡಲಾಗಿದೆ. ನವೆಂಬರ್ 20ರಂದು 1 ದಿನದ ಋತು ಚಕ್ರ ರಜೆ ಸಂಬಂಧ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಆದೇಶ ಪ್ರಶ್ನಿಸಿ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು.
ವಿಚಾರಣೆಯ ವೇಳೆ ಕಾಯ್ದೆಯಲ್ಲಿ ಇಲ್ಲದ ನಿಯಮವನ್ನು ಸರ್ಕಾರಿ ಆದೇಶದ ಮೂಲಕ ಜಾರಿಗೊಳಿಸಲಾಗಿದೆ. ಸರ್ಕಾರದ ಏಕಪಕ್ಷ ಆದೇಶದಿಂದ ಹೋಟೆಲ್ ಗಳಿಗೆ ಸಮಸ್ಯೆ ಆಗಿದೆ ಎಂದು ಅಸೋಸಿಯೇಷನ್ ಪರ ವಕೀಲರು ವಾದಿಸಿದರು. ಆದೇಶಕ್ಕೆ ಮುನ್ನ ಸಂಘಟನೆಗಳ ಅಭಿಪ್ರಾಯ ಪಡೆಯಲಾಗಿದೆಯ? ಎಂದು ಜಡ್ಜ್ ಪ್ರಶ್ನಿಸಿದರು.
ಈ ವೇಳೆ ಅಸೋಸಿಯೇಷನ್ ಪರ ವಕೀಲರು ಇಲ್ಲ ಎಂದು ಉತ್ತರಿಸಿದರು. ಬಳಿಕ ಹೈಕೋರ್ಟ್ ಮುಂದಿನ ವಿಚಾರಣೆಯವರೆಗೆ ಸರ್ಕಾರದ ಆದೇಶಕ್ಕೆ ತಡೆ ನೀಡಿತು. ಮಧ್ಯಂತರ ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸಲು ಸರ್ಕಾರ ಸ್ವತಂತ್ರ ಎಂದು ಇದೆ ವೇಳೆ ಹೈಕೋರ್ಟ್ ಏಕ ಸದಸ್ಯ ಪೀಠ ಅಭಿಪ್ರಾಯಪಟ್ಟಿತು.








