ಬೆಂಗಳೂರು : ಹಾವೇರಿ: ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದೆ. ಈ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ನೀಡಲಾಗಿದೆ. ಟಿಕೆಟ್ ನಿರೀಕ್ಷೆಯಲ್ಲಿದ್ದಂತ ಅಜ್ಜಂಪೀರ್ ಖಾದ್ರಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿರಲಿಲ್ಲ. ಹೀಗಾಗಿ ಬಂಡಾಯ ಅಭ್ಯರ್ಥಿಯಾಗಿ ಅಜ್ಜಂಪೀರ್ ಖಾದ್ರಿ ನಾಮಪತ್ರ ಸಲ್ಲಿಕೆ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಬಂಡಾಯ ಶಮನ ಮಾಡಲು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಅಜ್ಜಂಪೀರ್ ಖಾದ್ರಿ ಅವರನ್ನು ಸಿಎಂ ಸಿದ್ದರಾಮಯ್ಯ ಬಳಿಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಅರ್ಧ ಗಂಟೆ ಸಿಎಂ ಸಿದ್ದರಾಮಯ್ಯ ಖಾದ್ರಿ ಜೊತೆಗೆ ಚರ್ಚೆ ನಡೆಸಿದ್ದು, ನಾಮಪತ್ರ ವಾಪಸ್ ಪಡೆಯುವಂತೆ ಸೂಚನೆ ನೀಡಿದ್ದಾರೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಬೇಕು. ಬಿಜೆಪಿ ಸೋಲಿಸಬೇಕು. ಹೀಗಾಗಿ ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ. ಈ ಮೂಲಕ ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಬಂಡಾಯ ಶಮನವಾಗಿದೆ.
ನಿನ್ನೆಯಷ್ಟೇ ನಾಮಪತ್ರ ಸಲ್ಲಿಸಲು ಕೊನೆಯ 13 ನಿಮಿಷದ ವೇಳೆಯಲ್ಲಿ ಓಡೋಡಿ ಬಂದು ಅಜ್ಜಂಪೀರ್ ಖಾದ್ರಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ.