ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ರಾಜಕಾರಣದಲ್ಲಿ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಮುಂಬರುವ ಮೇ ತಿಂಗಳಲ್ಲಿ ಚಿತ್ರದುರ್ಗದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ಈ ಕಾರ್ಯಕ್ರಮಕ್ಕೆ ‘ಅಭಿಮಾನೋತ್ಸವ’ ಎಂದು ಹೆಸರಿಡಲಾಗಿದ್ದು, ಸುಮಾರು 10 ಲಕ್ಷ ಜನರನ್ನು ಸೇರಿಸುವ ಗುರಿ ಹೊಂದಲಾಗಿದೆ.
ಬುಧವಾರ ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ನಾಯಕರು ಸಭೆ ನಡೆಸಿ, ಕಾರ್ಯಕ್ರಮದ ಯಶಸ್ಸಿಗಾಗಿ ಪೂರ್ವಸಿದ್ಧತೆಗಳ ಬಗ್ಗೆ ಚರ್ಚಿಸಿದರು.ಈ ಬೃಹತ್ ಸಮಾವೇಶಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ರಾಷ್ಟ್ರಮಟ್ಟದ ನಾಯಕರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ.
ಸಮಯ ಮತ್ತು ಗುರಿ
ಕಾರ್ಯಕ್ರಮವನ್ನು ಮೇ 20ರ ಒಳಗಾಗಿ ನಡೆಸಲು ಯೋಜಿಸಲಾಗಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಜನರನ್ನು ಕರೆತರಲು ಜಿಲ್ಲಾ ಮಟ್ಟದ ಸಮಿತಿಗಳನ್ನು ರಚಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಸಭೆಯಲ್ಲಿ ಪಕ್ಷದ ಅನೇಕ ಹಿರಿಯ ನಾಯಕರು ಪಾಲ್ಗೊಂಡು ಕಾರ್ಯಕ್ರಮದ ಆಯೋಜನೆ ಮತ್ತು ಸಿದ್ಧತೆಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.








