ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೀಸಲಾತಿಗೆ ಸಂಬಂಧಿಸಿ ಬಹುವರ್ಷಗಳ ನೆನೆಗುದಿಗೆ ಬಿದ್ದ ಬೇಡಿಕೆಯನ್ನು ಈಡೇರಿಸಿದ್ದಾರೆ. ಒಳ ಮೀಸಲಾತಿ ವಿಚಾರದಲ್ಲೂ ಸಮರ್ಪಕ ನಿರ್ಣಯ ಕೈಗೊಂಡಿದ್ದಾರೆ. ಇದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಅಭಿನಂದಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಎಲ್ಲ ಸಮಾಜಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡ ಪ್ರಾಮಾಣಿಕ, ಜನಪರ, ಕಾಮನ್ ಮ್ಯಾನ್ ಮುಖ್ಯಮಂತ್ರಿಗಳು, ಕರ್ನಾಟಕದ ಸುಮಾರು ಏಳು ಕೋಟಿ ಜನರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಮಹತ್ವದ ತೀರ್ಮಾನಗಳನ್ನು ಕೈಗೊಂಡಿದ್ದಾರೆ. ಇದಕ್ಕಾಗಿ ಅವರಿಗೆ ಮತ್ತು ಸಚಿವ ಸಂಪುಟದ ಎಲ್ಲ ಸಚಿವರಿಗೆ ಧನ್ಯವಾದಗಳು ಎಂದು ಅವರು ತಿಳಿಸಿದ್ದಾರೆ.
ಹಲವಾರು ದಶಕಗಳಿಂದ ಅನೇಕ ಬೇಡಿಕೆಗಳನ್ನು ವಿವಿಧ ಸಮುದಾಯದವರು ಮುಂದಿಟ್ಟಿದ್ದರು. ನಾವು ನ್ಯಾಯ ಕೊಡುವ ದೃಷ್ಟಿಯಿಂದ ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ಅಸೆಂಬ್ಲಿಯಲ್ಲಿ ಕಾನೂನು ಮಾಡಿ ಅನುಷ್ಠಾನ ಮಾಡಲಾಗುತ್ತಿದೆ. ಅದೇ ಆಧಾರದಲ್ಲಿ ನೇಮಕಾತಿ ಆಗಲಿದೆ ಎಂಬ ಮುಖ್ಯಮಂತ್ರಿಯವರ ಹೇಳಿಕೆ ಅತ್ಯಂತ ಸ್ವಾಗತಾರ್ಹ ಎಂದು ಅವರು ತಿಳಿಸಿದ್ದಾರೆ.
ಒಳ ಮೀಸಲಾತಿ ಕುರಿತಂತೆ ನಿರ್ಧರಿಸಲು ಸಚಿವ ಮಾಧುಸ್ವಾಮಿ ಅವರ ನೇತೃತ್ವದಲ್ಲಿ ಕ್ಯಾಬಿನೆಟ್ ಉಪ ಸಮಿತಿ ರಚಿಸಲಾಗಿತ್ತು. ಅದರ ಶಿಫಾರಸಿನಡಿ ನಿರ್ಣಯಗಳನ್ನು ಕೈಗೊಂಡಿದ್ದು, ಸಾಮಾಜಿಕ ನ್ಯಾಯ ನೀಡುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಹೊರಬಿದ್ದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕೆಲವು ಹಿಂದುಳಿದ ವರ್ಗದಲ್ಲಿ ಕೆಲವು ಸಮುದಾಯಗಳಿವೆ. ಅವುಗಳನ್ನು ಯಾವ ಪಟ್ಟಿಯಲ್ಲಿ ಸೇರಿಸಬೇಕೆಂಬ ವಿಷಯದಲ್ಲಿ ಮುಂದಿನ ದಿನಗಳಳ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಅಲ್ಲದೆ, ಕೆಲವು ಸಮುದಾಯಗಳನ್ನು ಎಸ್ಸಿಗೆ ಸೇರಿಸಲು ಬೇಡಿಕೆ ಇದೆ. ಇದನ್ನು ಕೇಂದ್ರಕ್ಕೆ ಶಿಫಾರಸು ಮಾಡಬೇಕಿದೆ. ಅದನ್ನು ಇಲಾಖೆಯ ಶಿಫಾರಸಿನಂತೆ ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದು, ಅದನ್ನು ಸ್ವಾಗತಿಸುವುದಾಗಿ ಹೇಳಿದ್ದಾರೆ.
ಪಿಂಜಾರ ಸಮುದಾಯಕ್ಕೆ ಪ್ರತ್ಯೇಕ ನಿಗಮ ಸ್ಥಾಪನೆ ಮಾಡಲು ತೀರ್ಮಾನ ಮಾಡಿರುವುದು ಸಮರ್ಪಕ ಕ್ರಮ ಎಂದು ಅವರು ತಿಳಿಸಿದ್ದು, ಮುಖ್ಯಮಂತ್ರಿ ಮತ್ತು ಸಚಿವಸಂಪುಟದ ಎಲ್ಲ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದ್ದಾರೆ.