ಬೆಂಗಳೂರು : ತಮಿಳುನಾಡಿಗೆ ಜುಲೈ 31 ರವರೆಗೆ ಪ್ರತಿನಿತ್ಯ 1 ಟಿಎಂಸಿ ನೀರು ಹರಿಸಬೇಕೆಂಬ ಕಾವೇರಿ ನಿಯಂತ್ರಣ ಸಮಿತಿ ಆದೇಶ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಹಿರಿಯ ಅಧೀಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದರು. ಈ ಸಭೆಯಲ್ಲಿ ಸುಧೀರ್ ವಾರದ ಚರ್ಚೆ ಬಳಿಕ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಹರಿಸಲ್ಲ ಎಂದು ತಿಳಿಸಿದರು.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನೀರು ಬಿಡುವುದಕ್ಕೆ ಆಗುವುದಿಲ್ಲ. ಈ ಆದೇಶದ ವಿರುದ್ಧ ಅಪೀಲ್ ಹಾಕಬೇಕು ಎನ್ನುವ ಅಭಿಪ್ರಾಯಕ್ಕೆ ಬಂದಿದ್ದೇವೆ. ನಾನು ಹಾಗೂ ಎಲ್ಲಾ ಸಚಿವರು ಈ ನಿರ್ಧಾರ ಕೈಗೊಂಡಿದ್ದೇವೆ. ಜುಲೈ 14ರಂದು ಸರ್ವಪಕ್ಷಗಳ ಸಭೆ ಕರೆಯಲು ನಿರ್ಧರಿಸಲಾಗಿದ್ದು, ಒಟ್ಟಾಗಿ ಇದರ ವಿರುದ್ದ ನಿಲ್ಲಬೇಕಾಗಿದೆ ಎಂದು ಹೇಳಿದರು.
CWRC ಮುಂದೆ ನಮ್ಮ ನಿಲುವು ಹೇಳಿದ್ದೇವೆ. ಜೊತೆಗೆ ಯಾವುದೇ ತೀರ್ಮಾನ ಮಾಡಕೂಡುದು ಅಂತಾನೂ ಹೇಳಿದ್ದೀವಿ. ಜುಲೈ ಅಂತ್ಯದವರೆಗೂ ಕಾಯಬೇಕು ಎಂದು ಹೇಳಿದ್ದೀವಿ. ಆದರೂ ಕಾವೇರಿ ಸಮಿತಿಯವರು ಜುಲೈ 12ರಿಂದ ಪ್ರತಿ ದಿನ ಒಂದು ಟಿಎಂಸಿ ನೀರು ಬಿಡಬೇಕು ಎಂದು ಹೇಳಿದ್ದಾರೆ. ಆದ್ರೆ, ನಾವು ನೀರು ಬಿಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಕರ್ನಾಟಕದ ನೀರಿನ ವಿಚಾರದಲ್ಲಿ ಎಲ್ಲ ಪಕ್ಷದವರೂ ಒಟ್ಟಾಗಿದ್ದೇವೆ. ಆದ್ದರಿಂದ ಸರ್ವಪಕ್ಷ ಸಭೆ ನಡೆಸಲಾಗುವುದು ಎಂದರು.ಕೇಂದ್ರ ಮಂತ್ರಿಗಳು, ಕಾವೇರಿ ಭಾಗದ ಲೋಕಸಭೆ, ರಾಜ್ಯಸಭೆ ಸದಸ್ಯರು ಮತ್ತು ಶಾಸಕರನ್ನು ಸಹ ಸಭೆಗೆ ಆಹ್ವಾನಿಸಲಾಗುವುದು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರದ ಮುಂದಿನ ಹೆಜ್ಜೆಯನ್ನು ತೀರ್ಮಾನಿಸಲಾಗುವುದು ಎಂದರು.