ಬೆಂಗಳೂರು: ಉಪಚುನಾವಣೆಯ ಅಬ್ಬರದ ನಡುವೆಯೇ ರಾಜ್ಯ ಸರ್ಕಾರಕ್ಕೆ ಕೇಂದ್ರ ಚುನಾವಣಾ ಆಯೋಗದಿಂದ ನೋಟಿಸ್ ಜಾರಿಯಾಗಿದೆ. ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವಾಗ ಗ್ಯಾರಂಟಿ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವ ಮೂಲಕ ನಿಯಮ ಉಲ್ಲಂಘಿಸಲಾಗಿದೆ ಎಂದು ಆಯೋಗ ಆಕ್ಷೇಪ ವ್ಯಕ್ತಪಡಿಸಿದೆ.
ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಉಪಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದರೂ, ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಕೇಂದ್ರ ಚುನಾವಣಾ ಆಯೋಗದ ಕಾರ್ಯದರ್ಶಿ ಪವನ್ ದಿವಾನ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಈ ಕುರಿತು ಪತ್ರ ಬರೆದಿದ್ದು, ವಿವರಣೆ ಕೇಳಿದ್ದಾರೆ.ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಆಯೋಗದ ಪೂರ್ವಾನುಮತಿ ಇಲ್ಲದೆ ಯಾವುದೇ ಕಲ್ಯಾಣ ಯೋಜನೆಗಳ ಹಣವನ್ನು ಬಿಡುಗಡೆ ಮಾಡುವಂತಿಲ್ಲ” ಎಂದು ಆಯೋಗವು ತನ್ನ ಪತ್ರದಲ್ಲಿ ಸ್ಪಷ್ಟಪಡಿಸಿದೆ.
ಈ ಎರಡು ಜಿಲ್ಲೆಗಳಲ್ಲಿ ಐದು ಗ್ಯಾರಂಟಿ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿದ ಅಧಿಕಾರಿಯ ಹೆಸರನ್ನು ತಕ್ಷಣ ಹಂಚಿಕೊಳ್ಳಬೇಕು. ಆಯೋಗದ ಅನುಮತಿ ಇಲ್ಲದೆ ಇನ್ನು ಮುಂದೆ ಯಾವುದೇ ಹಣ ಮಂಜೂರಾತಿ ಅಥವಾ ವಿತರಣೆ ಮಾಡಬಾರದು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.








