ದಾವಣಗೆರೆ:ಚನ್ನಗಿರಿ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿ ಪೊಲೀಸ್ ವಾಹನಗಳಿಗೆ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 25 ಜನರನ್ನು ಬಂಧಿಸಲಾಗಿದೆ.
ಐಪಿಸಿ ಸೆಕ್ಷನ್ 353 ಮತ್ತು 307 ರ ಅಡಿಯಲ್ಲಿ ಪೊಲೀಸ್ ಠಾಣೆ, ಸಿಬ್ಬಂದಿ ಮತ್ತು ಆಸ್ತಿಗಳ ಮೇಲೆ ಗುಂಪು ದಾಳಿಗೆ ಸಂಬಂಧಿಸಿದಂತೆ ಪೊಲೀಸರು 25 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಘಟನೆಯಲ್ಲಿ 11 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಕೆಲವು ಪೊಲೀಸ್ ವಾಹನಗಳು ಜಖಂಗೊಂಡಿದ್ದು, ಆರೋಪಿಗಳನ್ನು ಬಂಧಿಸಲು ಐದು ತಂಡಗಳನ್ನು ರಚಿಸಲಾಗಿದೆ ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.
ಈ ಪ್ರಕರಣದ ಬಗ್ಗೆ ಸಿಐಡಿ ತನಿಖೆಗೆ ಗೃಹ ಸಚಿವರು ಆದೇಶಿಸಿದ್ದಾರೆ ಎಂದು ಎಸ್ಪಿ ಹೇಳಿದರು.
ಶುಕ್ರವಾರ ತಡರಾತ್ರಿ ನಡೆದ ಘಟನೆಗಳ ಬಗ್ಗೆ ವಿವರಿಸಿದ ಪೊಲೀಸ್ ವರಿಷ್ಠಾಧಿಕಾರಿ, “ಜೂಜಾಟ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಕ್ಕಾಗಿ ವಿಚಾರಣೆ ನಡೆಸಿದಾಗ ಆದಿಲ್ (30) ಹೃದಯಾಘಾತದಿಂದ ನಿಧನರಾದರು. ಆದಿಲ್ ಕಸ್ಟಡಿಯಲ್ಲಿ ಮೃತಪಟ್ಟಿದ್ದಾನೆ ಎಂದು ಆರೋಪಿಸಿ, ಚನ್ನಗಿರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಮುದಾಯದ ಹೆಚ್ಚಿನ ಸಂಖ್ಯೆಯ ಜನರು ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ಕಲ್ಲು ತೂರಾಟ ನಡೆಸಿದರು” ಎಂದರು.