ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ನೇರಲಗುಂಟೆ ಗ್ರಾಮದ ಬಳಿ ಶುಕ್ರವಾರ ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ನಡೆದ ಡಿಕ್ಕಿಯಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.
ಮೃತರನ್ನು ಪ್ರಜ್ವಲ್ (22) ಮತ್ತು ಅಭಿಷೇಕ್ (18) ಎಂದು ಗುರುತಿಸಲಾಗಿದೆ. ಈ ಯುವಕರು ಪ್ರಸಿದ್ಧ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಜಾತ್ರೆ ಮುಗಿಸಿಕೊಂಡು ತಮ್ಮ ಸ್ವಗ್ರಾಮಕ್ಕೆ ಬೈಕ್ನಲ್ಲಿ ಹಿಂತಿರುಗುತ್ತಿದ್ದರು. ಈ ವೇಳೆ ನೇರಲಗುಂಟೆ ಗ್ರಾಮದ ಬಳಿ ವೇಗವಾಗಿ ಬಂದ ಕೆಎಸ್ಆರ್ಟಿಸಿ (KSRTC) ಬಸ್ ಇವರ ಬೈಕ್ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಯುವಕರಿಬ್ಬರು ರಸ್ತೆಗೆ ಎಸೆಯಲ್ಪಟ್ಟು, ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
ಜಾತ್ರೆ ಸಂಭ್ರಮದ ನಡುವೆ ಕವಿದ ಶೋಕ
ನಾಯಕನಹಟ್ಟಿ ಜಾತ್ರೆಗೆ ಹೋಗಿದ್ದ ಯುವಕರು ಅತಿ ಸಂಭ್ರಮದಿಂದಲೇ ಮರಳುತ್ತಿದ್ದರು. ಆದರೆ ವಿಧಿಯಾಟ ಬೇರೆಯೇ ಇತ್ತು. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಾಯಕನಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.
ಜಾತ್ರೆ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕರ ಸಾವು ಅವರ ಕುಟುಂಬಸ್ಥರಲ್ಲಿ ಆಕ್ರಂದನ ತರಿಸಿದೆ. ವೇಗದ ಚಾಲನೆಯೇ ಈ ಘಟನೆಗೆ ಕಾರಣವಿರಬಹುದು ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ.
ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಬಸ್ ಚಾಲಕನನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
BREAKING: ಬೆದರಿಕೆ, ನಿಂದನೆ ಆರೋಪದಡಿ ಬಿಗ್ ಬಸ್ ಕನ್ನಡದ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR ದಾಖಲು







