ಬೆಂಗಳೂರು: ಏಳು ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗೆ ಗೌರಿ ಹಬ್ಬದಂದು (ಸೆಪ್ಟೆಂಬರ್ 6) ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಲಿದ್ದಾರೆ. ಈ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಯ ಜನರಿಗೆ ಅನುಕೂಲವಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು “ಹೆಬ್ಬನಹಳ್ಳಿ ವಿತರಣಾ ತೊಟ್ಟಿ 4 ರಿಂದ 32 ಕಿ. ಮೀ. ದೂರದಲ್ಲಿ ಎಸ್ಕೇಪ್ ಚಾನೆಲ್ ಮಾಡಿದ್ದು, ಅಲ್ಲಿಂದ ನಾಲೆ ಮೂಲಕ ವಾಣಿವಿಲಾಸ ಸಾಗರಕ್ಕೆ ನೀರು ಹರಿಸಲಾಗುವುದು. ನವೆಂಬರ್ 1 ರ ವೇಳೆಗೆ ಸುಮಾರು 5 ಟಿಎಂಸಿ ನೀರನ್ನು ಮೇಲಕ್ಕೆ ಎತ್ತಲಾಗುವುದು. ಅರಣ್ಯ ಇಲಾಖೆಯಿಂದ 502 ಎಕರೆ ಜಮೀನು ಪಡೆಯಬೇಕಾಗಿದ್ದು, ಇದಕ್ಕೆ ಬದಲಿಯಾಗಿ ನಾವು 452 ಎಕರೆ ಜಮೀನು ನೀಡಿದ್ದೇವೆ. ಮುಂದಿನ 4 ತಿಂಗಳಲ್ಲಿ ಈ ಕೆಲಸ ಮುಗಿಯಲಿದ್ದು, ಆನಂತರ ತುಮಕೂರು ಭಾಗದ ಕೆಲಸವನ್ನು ತ್ವರಿತವಾಗಿ ಮುಗಿಸಲಾಗುವುದು” ಎಂದು ಹೇಳಿದರು.
“ಯೋಜನೆಯ ಒಟ್ಟು 24 ಟಿಎಂಸಿ ನೀರನ್ನು ಕುಡಿಯುವ ನೀರು ಹಾಗೂ ಕೆರೆಗಳನ್ನು ತುಂಬಿಸಲು ಬಳಸಿಕೊಳ್ಳಲಾಗುವುದು. ರೈತರು ತಮ್ಮ ಜಮೀನುಗಳನ್ನು ನೀಡಿ ಸಹಕಾರ ನೀಡಿದ್ದಾರೆ. ನೀರನ್ನು ಎತ್ತಲು ಸಾಧ್ಯವಿಲ್ಲ ಎಂದು ಒಂದಷ್ಟು ಜನ ಅಪಸ್ವರ ಎತ್ತಿದ್ದರು. ನಾನು ಇಲಾಖೆಯ ಜವಾಬ್ದಾರಿವಹಿಸಿಕೊಂಡ ಮೇಲೆ ಕಾರ್ಯಪ್ರವೃತ್ತವಾಗಿ ಈ ಯೋಜನೆ ಪೂರ್ಣಗೊಳಿಸಲು ಮುಂದಾದೆ. ಯೋಜನೆಯ ವಿರುದ್ಧವಾಗಿ ಒಂದಷ್ಟು ಜನ ಬ್ಲಾಕ್ ಮೇಲ್ ಮಾಡುತ್ತಿದ್ದರು ಅದನ್ನು ನಿವಾರಿಸಲಾಯಿತು. ಹಿಂದಿನ ಸರ್ಕಾರವು ಸಾಕಷ್ಟು ಪ್ರಯತ್ನ ಪಟ್ಟಿತ್ತು, ಆದರೆ ಸಹಕಾರ ಸಿಕ್ಕಿರಲಿಲ್ಲ” ಎಂದು ತಿಳಿಸಿದರು.
12.05 ನಿಮಿಷಕ್ಕೆ ಲೋಕಾರ್ಪಣೆ
“ಸೆ. 6 ಶುಕ್ರವಾರದಂದು 12.05 ನಿಮಿಷಕ್ಕೆ ಯೋಜನೆಯ ಪ್ರಮುಖ ಜಾಗದಲ್ಲಿ ನೀರನ್ನು ಮೇಲಕ್ಕೆ ಎತ್ತುವ ಪಂಪ್ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡುತ್ತಾರೆ. ಒಂದಷ್ಟು ಪ್ರಮುಖ ಭಾಗಗಳಲ್ಲಿ 10.30 ಒಳಗೆ ಸಚಿವರುಗಳು ಚಾಲನೆ ನೀಡುತ್ತಾರೆ. ಗೌರಿ ಹಬ್ಬದ ಶುಭದಿನದಂದು ಗಂಗಾ ಮಾತೆಗೆ ಪೂಜೆ ಸಲ್ಲಿಸಲಾಗುವುದು” ಎಂದರು.
“ಪ್ರಾಯೋಗಿಕ ಪರೀಕ್ಷೆ ನಡೆಸುವುದಕ್ಕೆ ಮುಂಚೆ ಒಂದಷ್ಟು ಕಡೆ ನೀರು ಸೋರಿಕೆಯಾಗಿತ್ತು. ಇದನ್ನೂ ಸಹ ಸರಿಪಡಿಸಲಾಗಿದೆ. ಸಣ್ಣ, ನದಿ, ತೊರೆಗಳಿಂದ ಎತ್ತುವ ನೀರನ್ನು ಹೇಗೆ ಸದುಪಯೋಗಪಡಿಸಿಕೊಳ್ಳಬೇಕು ಎಂದು ಅಧ್ಯಯನ ಮಾಡಲು ಪ್ರತ್ಯೇಕ ತಂಡ ರಚಿಸಲಾಗಿದೆ. ಅವರು ಅಧ್ಯಯನ ನಡೆಸಿ ವರದಿ ನೀಡುತ್ತಾರೆ” ಎಂದರು.
“ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರದ ಸ್ವಲ್ಪ ಭಾಗ, ತುಮಕೂರು, ಹಾಸನ, ಹಾಗೂ ಚಿಕ್ಕಮಗಳೂರು ಸೇರಿದಂತೆ ಒಟ್ಟು 7 ಜಿಲ್ಲೆಗಳ ಜನರಿಗೆ ಅನುಕೂಲವಾಗುವುದು. ಎಲ್ಲಾ ಪಕ್ಷಗಳ ಮುಖಂಡರು ಹಾಗೂ ರೈತ ಸಂಘಟನೆಗಳ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಆಹ್ವಾನ ಪತ್ರಿಕೆ ಇಲ್ಲ ಎಂದು ಬೇಸರಿಸಬೇಡಿ ಮಾಧ್ಯಮಗಳ ಮೂಲಕ ಹಾಗೂ ಪತ್ರಿಕಾ ಜಾಹೀರಾತಿನ ಮೂಲಕ ವೈಯಕ್ತಿಕವಾಗಿ ಆಹ್ವಾನ ಮಾಡುತ್ತೇನೆ. ತೊರೆ ಕಾಡನಹಳ್ಳಿಯಿಂದ ಬೆಂಗಳೂರಿಗೆ ನೀರು ಸರಬರಾಜು ಆಗುತ್ತಿರುವುದಕ್ಕಿಂತ ಬೃಹತ್ ಪಂಪ್ ಗಳನ್ನು ಎತ್ತಿನಹೊಳೆ ಯೋಜನೆಯಲ್ಲಿ ಅಳವಡಿಸಲಾಗಿದೆ” ಎಂದರು.
ಮಂಡ್ಯದ ನಿಮಿಷಾಂಬ, ಉಕ್ಕಡ ಮಾರಮ್ಮ ದೇಗುಲಗಳಿಗೆ ‘ಸಚಿವ ರಾಮಲಿಂಗಾರೆಡ್ಡಿ’ ಭೇಟಿ
BIG UPDATE: ಜಮ್ಮು-ಕಾಶ್ಮೀರದ ವೈಷ್ಣೋ ದೇವಿ ದೇವಸ್ಥಾನದ ರಸ್ತೆಯಲ್ಲಿ ಭೂಕುಸಿತ: ಇಬ್ಬರು ಮಹಿಳೆಯರು ದುರ್ಮರಣ
BREAKING : ‘ಮನಿ ಲಾಂಡರಿಂಗ್’ ಕೇಸ್ : ‘ED’ ಯಿಂದ AAP ಶಾಸಕ ‘ಅಮಾನತುಲ್ಲಾ ಖಾನ್’ ಅರೆಸ್ಟ್!








