ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳ ಸಬಲೀಕರಣ ಮತ್ತು ಗುಣಮಟ್ಟದ ಶಿಕ್ಷಣದ ಗುರಿಯೊಂದಿಗೆ ಜೂನ್ 1ರಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ನೂತನ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ (KPS) ಕಟ್ಟಡಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.
ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು, ಪ್ರಾಂಶುಪಾಲರು, ಬಿ.ಇ.ಒ (BEO) ಹಾಗೂ ಎಸ್.ಡಿ.ಎಂ.ಸಿ (SDMC) ಸದಸ್ಯರೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ನಲ್ಲಿ ಮಾತನಾಡಿದ ಅವರು, ಇಲಾಖೆಯ ಸಾಧನೆಗಳು ಮತ್ತು ಮುಂಬರುವ ಯೋಜನೆಗಳ ಕುರಿತು ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಇಂದು ಸಮಗ್ರ ಮಾಹಿತಿ ಹಂಚಿಕೊಂಡರು.
ಜೂನ್ 1: ‘ಮಕ್ಕಳ ಹಬ್ಬ’ ಮತ್ತು ಅದ್ದೂರಿ ಸ್ವಾಗತ
ಹೊಸ ಶೈಕ್ಷಣಿಕ ವರ್ಷದ ಆರಂಭವನ್ನು ಹಬ್ಬದ ರೀತಿಯಲ್ಲಿ ಆಚರಿಸಲು ಸಚಿವರು ಕರೆ ನೀಡಿದ್ದಾರೆ.
ಮೇ 29, 30 ಮತ್ತು 31ರಂದು ಶಾಲಾ ಆವರಣವನ್ನು ಸ್ವಚ್ಛಗೊಳಿಸಿ, ಜೂನ್ 1 ರಂದು ಶಾಲೆಗೆ ಬರುವ ಮಕ್ಕಳನ್ನು ತಳಿರು ತೋರಣ ಕಟ್ಟಿ, ಹಬ್ಬದ ವಾತಾವರಣದಲ್ಲಿ (ಮಕ್ಕಳ ಹಬ್ಬ) ಸ್ವಾಗತಿಸಬೇಕು.
ಸಮುದಾಯದವರು, ಎಸ್.ಡಿ.ಎಂ.ಸಿ ಹಾಗೂ ಹಳೆಯ ವಿದ್ಯಾರ್ಥಿಗಳು ಕೈಜೋಡಿಸಿ ಮಕ್ಕಳಿಗಾಗಿ ವಿಶೇಷ ಊಟದ ವ್ಯವಸ್ಥೆ ಮಾಡುವ ಮೂಲಕ ಅವರಲ್ಲಿ ಶಾಲೆಗೆ ಬರುವ ಉತ್ಸಾಹವನ್ನು ಹೆಚ್ಚಿಸಬೇಕು.
ರಾಜ್ಯಾದ್ಯಂತ ಒಟ್ಟು 1,000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (KPS) ಆರಂಭಿಸುವ ಗುರಿಯನ್ನು ಸರ್ಕಾರ ಹೊಂದಿದೆ.
ನಮ್ಮ ಶಾಲೆ ನಮ್ಮ ಜವಾಬ್ದಾರಿ: ದಾನಿಗಳಿಗೆ ಮುಕ್ತ ಆಹ್ವಾನ
ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಕೇವಲ ಸರ್ಕಾರದ ಅನುದಾನವನ್ನೇ ಕಾಯದೆ, ಸಾರ್ವಜನಿಕರು ಕೈಜೋಡಿಸಬೇಕೆಂದು ಸಚಿವರು ಮನವಿ ಮಾಡಿದರು.
ರಾಜ್ಯದಲ್ಲಿ 46,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿದ್ದು, ಹಳೆಯ ವಿದ್ಯಾರ್ಥಿಗಳು, ಉದ್ಯಮಿಗಳು ಹಾಗೂ ದಾನಿಗಳು ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಯೋಜನೆಯಡಿ ಆರ್ಥಿಕ ನೆರವು ನೀಡಬಹುದು.
ದಾನಿಗಳು 500 ರೂಪಾಯಿಯಿಂದ ಹಿಡಿದು ಕೋಟ್ಯಂತರ ರೂಪಾಯಿವರೆಗೂ ದೇಣಿಗೆ ನೀಡುತ್ತಿದ್ದಾರೆ. ಈ ಅನುದಾನವನ್ನು ಶಾಲೆಗಳಿಗೆ ಸ್ಮಾರ್ಟ್ ಟಿವಿ, ಆರ್.ಓ (RO) ಪ್ಲಾಂಟ್, ಶೌಚಾಲಯ ನಿರ್ಮಾಣ, ಫ್ಯಾನ್ ಮತ್ತು ಲ್ಯಾಬ್ ಉಪಕರಣಗಳನ್ನು ಒದಗಿಸಲು ಬಳಸಿಕೊಳ್ಳಲಾಗುತ್ತಿದೆ.
ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸಲು ಒತ್ತು:
ಅತ್ಯುತ್ತಮ ಶಿಕ್ಷಕರು: ಖಾಸಗಿ ಶಾಲೆಗಳಿಗಿಂತ ಅತ್ಯುತ್ತಮ ಹಾಗೂ ನುರಿತ ಶಿಕ್ಷಕರು ಸರ್ಕಾರಿ ಶಾಲೆಗಳಲ್ಲಿದ್ದಾರೆ ಎಂಬುದನ್ನು ಪೋಷಕರಿಗೆ ಮನವರಿಕೆ ಮಾಡಿ, ದಾಖಲಾತಿ (Admission Drive) ಹೆಚ್ಚಿಸಬೇಕು.
ಪೌಷ್ಟಿಕ ಆಹಾರ: ವಿದ್ಯಾರ್ಥಿಗಳು ಪೌಷ್ಟಿಕಾಂಶ ಹೆಚ್ಚಿಸಲು ಅಜೀಂ ಪ್ರೇಮ್ಜಿ ಫೌಂಡೇಶನ್ ನೆರವಿನೊಂದಿಗೆ ಪ್ರತಿದಿನ ಮೊಟ್ಟೆ ಅಥವಾ ಬಾಳೆಹಣ್ಣು ವಿತರಿಸಲಾಗುತ್ತಿದೆ.
ಉಚಿತ ವಿದ್ಯುತ್: ಶಾಲೆಗಳಲ್ಲಿ ವಿಶೇಷ ತರಗತಿಗಳನ್ನು ನಡೆಸಲು ಅನುಕೂಲವಾಗುವಂತೆ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯವನ್ನು ಒದಗಿಸಲಾಗಿದೆ.
“ಶಿಕ್ಷಣ ಎಂಬುದು ಯಾರಿಂದಲೂ ಕದಿಯಲಾಗದ ಏಕೈಕ ಸಂಪತ್ತು. ನಮ್ಮ ಮಕ್ಕಳ ಭವಿಷ್ಯವನ್ನು ರೂಪಿಸುವ ಈ ಮಹತ್ಕಾರ್ಯದಲ್ಲಿ ಶಿಕ್ಷಕರು, ಪೋಷಕರು, ಎಸ್.ಡಿ.ಎಂ.ಸಿ ಸದಸ್ಯರು ಹಾಗೂ ಸಮುದಾಯ ಒಟ್ಟಾಗಿ ಶ್ರಮಿಸೋಣ” ಎಂದು ಸಚಿವ ಮಧು ಬಂಗಾರಪ್ಪ ತಮ್ಮ ಭಾಷಣವನ್ನು ಮುಕ್ತಾಯಗೊಳಿಸಿದರು.
ಉಜಿರೆಯ ರುಡ್ಸೆಟ್ ಸಂಸ್ಥೆಯಿಂದ ಉಚಿತ ‘ಕೋಳಿ ಸಾಕಾಣಿಕೆ’ ತರಬೇತಿಗೆ ಅರ್ಜಿ ಆಹ್ವಾನ








