ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ, ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು, ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೇರಿದಂತೆ 14 ಮಂದಿ ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
17 ಎಂಎಲ್ಸಿಗಳಲ್ಲಿ 11 ಮಂದಿ ವಿಧಾನಸಭೆಯಿಂದ ಆಯ್ಕೆಯಾಗಿದ್ದರೆ, ಆರು ಮಂದಿ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಂದ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ 34, ಬಿಜೆಪಿ 29, ಜೆಡಿಎಸ್ 8, ಪಕ್ಷೇತರ 1 ಹಾಗೂ ಒಬ್ಬ ಸಭಾಪತಿ ಸದಸ್ಯರಿದ್ದಾರೆ. 75 ಸದಸ್ಯ ಬಲದ ವಿಧಾನ ಪರಿಷತ್ತಿನಲ್ಲಿ ಎರಡು ಸ್ಥಾನಗಳು ಖಾಲಿ ಇವೆ.
ಬಿಜೆಪಿ ಸದಸ್ಯರಾದ ಸಿ.ಟಿ.ರವಿ ಮತ್ತು ಎನ್.ರವಿಕುಮಾರ್ ಅವರು ಸಿದ್ದರಾಮಯ್ಯ ಅವರ ಪಾದ ಮುಟ್ಟಿ ಆಶೀರ್ವಾದ ಪಡೆದರು.
ತಮ್ಮ ಪುತ್ರ ಯತೀಂದ್ರ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸಿದ್ದರಾಮಯ್ಯ ಅವರು ಸಂತಸ ವ್ಯಕ್ತಪಡಿಸಿದ್ದರು. ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು, ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಐವನ್ ಡಿಸೋಜ, ಎ.ವಸಂತ್ ಕುಮಾರ್, ಚಂದ್ರಶೇಖರ್ ಬಸವರಾಜ್ ಪಾಟೀಲ್, ಜಯದೇವ್ ಗುತ್ತೇದಾರ್, ಡಿ.ಟಿ.ಶ್ರೀನಿವಾಸ್, ಬಿಲ್ಕಿಸ್ ಬಾನು, ಬಿಜೆಪಿ ಮುಖಂಡರಾದ ಧನಂಜಯ ಸರ್ಜಿ, ಎನ್.ಮಾರುತಿರಾವ್ ಮುಳೆ, ಜೆಡಿಎಸ್ ಮುಖಂಡರಾದ ಎಸ್.ಎಲ್.ಭೋಜೇಗೌಡ, ಕೆ.ವಿವೇಕಾನಂದ, ಟಿ.ಎನ್.ಜವರಾಯಿಗೌಡ ಅವರು ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು