ಬೆಂಗಳೂರು : ಒಂದು ಕಡೆ ಸಿಎಂ ಸಿದ್ದರಾಮಯ್ಯ 10 ವರ್ಷ ಸಿಎಂ ಆಗಿರಲಿ ಎಂದು ಕೆಲ ನಾಯಕರು ಹೇಳುತ್ತಿದ್ದರೆ, ಇನ್ನೊಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ನೀಡಿದಂತೆ ನಮಗೂ ಕೆಪಿಸಿಸಿ ಅಧ್ಯಕ್ಷ ಮತ್ತು ಸಚಿವ ಸ್ಥಾನ ಕೊಟ್ಟರೆ ನಿಭಾಯಿಸುತ್ತೇವೆ ಎಂದು ಕೆಲ ನಾಯಕರು ಹೇಳಿಕೆ ನೀಡಿದ್ದಾರೆ. ಇದರ ಮಧ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರು ಇಂದು ದೆಹಲಿಗೆ ದಿಢೀರ್ ಎಂದು ಪ್ರಯಾಣ ಬೆಳೆಸಿದ್ದು, ಕಾಂಗ್ರೆಸ್ ನಲ್ಲಿ ಬಣ ರಾಜಕೀಯದ ನಡುವೆ ಇದೀಗ ಗೃಹ ಸಚಿವರ ಈ ಒಂದು ನಡೆ ತೀವ್ರ ಕುತೂಹಲ ಮೂಡಿಸಿದೆ.
ಹೌದು ಇಂದು ಬೆಂಗಳೂರಿನಿಂದ ದೆಹಲಿಗೆ ತೆರಳಿದ ಗೃಹ ಸಚಿವ ಜಿ ಪರಮೇಶ್ವರ್ ಅವರು, ಕೆಂಪೇಗೌಡ ವಿಮಾನ ನಿಲ್ದಾಣದಿಂದ ಗೃಹ ಸಚಿವ ಜಿ.ಪರಮೇಶ್ವರ್ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಈ ಮೂಲಕ ತೆರೆಮರೆಯಲ್ಲಿದ್ದ ಕಾಂಗ್ರೆಸ್ ಪಕ್ಷದ ಬಣ ಬಡಿದಾಟ ಇದೀಗ ಹೊರಬೀಳುತ್ತಿದೆ.
ನಾಯಕತ್ವ ಬದಲಾವಣೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಶೋಷಿತರ ಸಮಾವೇಶ ಕುರಿತು ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಬಣಗಳ ನಡುವೆ ಬಹಿರಂಗವಾಗಿ ಆರೋಪ-ಪ್ರತ್ಯಾರೋಪಗಳು ನಡೆಯುತ್ತಲೇ ಇವೆ. ಇದರ ನಡುವೆ ಡಾ. ಪರಮೇಶ್ವರ್ ಅವರು ಹೈಕಮಾಂಡ್ ಭೇಟಿಗಾಗಿ ಮಂಗಳವಾರ ದೆಹಲಿಗೆ ತೆರಳಿದ್ದಾರೆ.
ಪರಮೇಶ್ವರ್ ಅವರು ಫೆ.9 ರಂದು ಭಾನುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅವರ ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿ 45 ನಿಮಿಷಗಳ ಕಾಲ ಚರ್ಚೆ ನಡೆಸಿದ್ದರು. ಫೆ.12 ರಂದು ದೆಹಲಿಗೆ ಹೋಗಲು ದಿನಾಂಕ ನಿಗದಿಯಾಗಿತ್ತಾದರೂ ಅಂತಿಮ ಕ್ಷಣದಲ್ಲಿ ರದ್ದಾಗಿತ್ತು. ಇದೀಗ ದೆಹಲಿಗೆ ತೆರಳುತ್ತಿರುವುದರಿಂದ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಕುತೂಹಲ ಮೂಡಿದೆ.
ಪರಮೇಶ್ವರ್ ಅವರು ಶೋಷಿತರ ಸಮಾವೇಶ ನಡೆಸಲು ಅನುಮತಿ ಕೋರಿ ಆಹ್ವಾನ ನೀಡುವ ಸಾಧ್ಯತೆಯಿದೆ. ಇದೇ ವೇಳೆ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ನಿಂದ ಸ್ಪಷ್ಟನೆ ನೀಡಬೇಕು. ಬದಲಾವಣೆ ಉದ್ದೇಶವಿದ್ದರೆ ತಮ್ಮನ್ನು ಕೂಡ ಪರಿಗಣಿಸಬೇಕು ಎಂಬ ವಾದವನ್ನು ಹೈಕಮಾಂಡ್ ಮುಂದಿಡುವ ಪ್ರಯತ್ನ ಮಾಡಲಿದ್ದಾರೆ ಎಂದು ಪರಮೇಶ್ವರ್ ಆಪ್ತ ಮೂಲಗಳು ತಿಳಿಸಿವೆ.