ದಾವಣಗೆರೆ : ರಾಜ್ಯದ ಆರ್ಥಿಕ ಅಭಿವೃದ್ಧಿ, ಜನಕಲ್ಯಾಣ ಹಾಗೂ ಮೂಲಸೌಕರ್ಯ ವಿಸ್ತರಣೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ 2026–27ನೇ ಸಾಲಿನಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕರ್ನಾಟಕ ಬಜೆಟ್ ಮಂಡಿಸಿದ್ದಾರೆ ಎಂದು ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.
ಬಜೆಟ್ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಅವರು ಬಜೆಟ್ನಲ್ಲಿ ದಾವಣಗೆರೆ ಜಿಲ್ಲೆಗೆ ಪ್ರಮುಖ ಯೋಜನೆಗಳನ್ನು ಘೋಷಿಸಲಾಗಿರುವುದು ಸಂತಸ ತಂದಿದೆ ಎಂದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತರು ಹೆಚ್ಚಿಗೆ ವಾಸಿಸುತ್ತಿರುವ ವಿವಿಧ ಭಾಗಗಳ ಮೂಲಸೌಕರ್ಯ ಅಭಿವೃದ್ಧಿಗಾಗಿ ರೂ.100.00 ಕೋಟಿ ಅನುದಾನ ನೀಡಲಾಗಿದೆ. ಹೊನ್ನಾಳಿ ತಾಲ್ಲೂಕಿನಲ್ಲಿ 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಶೀತಗೃಹ ಸ್ಥಾಪನೆ, ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸಲಾಗಿದೆ ಎಂದಿದ್ದಾರೆ.
ದಾವಣಗೆರೆಯಲ್ಲಿ ಮತ್ಸ್ಯ ದರ್ಶಿನಿ ಮೀನು ಮಾರಾಟ ಕೇಂದ್ರ ಹಾಗೂ ಹಿಂದುಳಿದ ವರ್ಗಗಳ ಪೋಸ್ಟ್-ಮ್ಯಾಟ್ರಿಕ್ ವಿದ್ಯಾರ್ಥಿ ನಿಲಯ ನಿರ್ಮಾಣ ಮಾಡಲಾಗುತ್ತಿದೆ. ಚನ್ನಗಿರಿ ತಾಲ್ಲೂಕಿನ ಕಗತೂರು ಹಳ್ಳಕ್ಕೆ ಚೆಕ್ಡ್ಯಾಂ ನಿರ್ಮಾಣ. ದಾವಣಗೆರೆ ತಾಲ್ಲೂಕಿನ ಆನಗೋಡಿನಲ್ಲಿ ಹೊಸ ಪೊಲೀಸ್ ಠಾಣೆ ಸ್ಥಾಪನೆ ಮಾಡಲಾಗುತ್ತಿದೆ. ತುಮಕೂರು-ದಾವಣಗೆರೆ ರೈಲ್ವೇ ಮಾರ್ಗಗಳಿಗೆ ಭೂಸ್ವಾಧೀನ ಹಾಗೂ ನಿರ್ಮಾಣ ಕಾಮಗಾರಿಗೆ ಅನುದಾನ ಮೀಸಲಿಡಲಾಗಿದೆ.ಚನ್ನಗಿರಿ ತಾಲ್ಲೂಕಿನ 41 ಕೆರೆಗಳನ್ನು ತುಂಬುವ ಯೋಜನೆ, ಹೊನ್ನನಾಯಕನಹಳ್ಳಿ ಕೆರೆ ಹಾಗೂ ಹಳ್ಳ ಅಭಿವೃದ್ಧಿಗೆ ಅನುಮೋದನೆ ಮಾಡಲಾಗಿದೆ ಎಂದರು.
ಉಳಿದಂತೆ 2025–26ರಲ್ಲಿ ಕರ್ನಾಟಕ ರಾಜ್ಯವು 8.1% ಆರ್ಥಿಕ ಬೆಳವಣಿಗೆ ಸಾಧಿಸಿದ್ದು, ಇದು ದೇಶದ ಸರಾಸರಿ ಬೆಳವಣಿಗೆ ದರವಾದ 7.4% ಕ್ಕಿಂತ ಹೆಚ್ಚಾಗಿದೆ ಎಂದಿದ್ದಾರೆ. ಕ್ಷೇತ್ರವಾರು ಬೆಳವಣಿಗೆಯಲ್ಲಿ ಕೃಷಿ ಕ್ಷೇತ್ರದಲ್ಲಿ 9.1%, ಕೈಗಾರಿಕಾ ಕ್ಷೇತ್ರದಲ್ಲಿ 6.7% ಮತ್ತು ಸೇವಾ ಕ್ಷೇತ್ರದಲ್ಲಿ 8.1% ಬೆಳವಣಿಗೆ ಕಂಡುಬಂದಿದೆ. ರಾಜ್ಯವು 9.4 ಬಿಲಿಯನ್ ಡಾಲರ್ ವಿದೇಶಿ ನೇರ ಹೂಡಿಕೆ (FDI) ಆಕರ್ಷಿಸಿದ್ದು, ಇದು ಭಾರತದ ಒಟ್ಟು ಹೂಡಿಕೆಯ 26.7% ಆಗಿದೆ. 2026-27ನೇ ಸಾಲಿನಲ್ಲಿ ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 63.135 ಕೋಟಿ ರೂ. ಮತ್ತು ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 94,663 ಕೋಟಿ ರೂ. ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ.
ಮೂಲಸೌಕರ್ಯ ಮತ್ತು ಉದ್ಯೋಗಕ್ಕೆ ಉತ್ತೇಜನ ನೀಡಲಾಗಿದೆ.ರಾಜ್ಯದಲ್ಲಿ ಉದ್ಯೋಗ ಸೃಷ್ಟಿ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. 56,432 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಗೊಂಡಿದ್ದು, ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮದಡಿ ₹8,600 ಕೋಟಿ ಮೌಲ್ಯದ ಕಾಮಗಾರಿಗಳು ಕೈಗೊಳ್ಳಲಾಗುತ್ತಿವೆ. ಎರಡನೇ ಹಂತದಲ್ಲಿ ಹೆಚ್ಚುವರಿ ₹4,000 ಕೋಟಿ ಕಾಮಗಾರಿಗಳನ್ನು ಕೈಗೊಳ್ಳಲು ಯೋಜನೆ ರೂಪಿಸಲಾಗಿದೆ ಎಂದಿದ್ದಾರೆ.
ಕೃಷಿ ಕ್ಷೇತ್ರಕ್ಕೆ ವಿಶೇಷ ಗಮನ ನೀಡಲಾಗಿದ್ದು ಕೃಷಿ ಮತ್ತು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಲು “Farm-to-Fork” ತಂತ್ರವನ್ನು ಸರ್ಕಾರ ಮುಂದಿಟ್ಟಿದೆ. ಇದರಡಿ ರೈತರಿಗೆ ವೈಜ್ಞಾನಿಕ ಕೃಷಿ ಮಾರ್ಗದರ್ಶನ, ಆರ್ಥಿಕ ನೆರವು, ಗುಣಮಟ್ಟದ ಕೃಷಿ ಒಳಾಂಶಗಳು ಹಾಗೂ ಮಾರುಕಟ್ಟೆ ಸಂಪರ್ಕ ವ್ಯವಸ್ಥೆ ಒದಗಿಸಲಾಗುತ್ತದೆ. ಈಗಾಗಲೇ 83 ಲಕ್ಷ ರೈತರಿಗೆ ₹70,000 ಕೋಟಿ ಬೆಳೆ ಸಾಲ ನೀಡಲಾಗಿದೆ ಎಂದು ಹೇಳಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ 15,000 ಶಿಕ್ಷಕರ ಹುದ್ದೆಗಳ ಭರ್ತಿ, 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ಸ್ ಆಗಿ ಮೇಲ್ದರ್ಜೆಗೆ ತರುವ ಯೋಜನೆ ಹಾಗೂ 12.28 ಲಕ್ಷ ವಿದ್ಯಾರ್ಥಿಗಳಿಗೆ ಎಐ ಆಧಾರಿತ ಡಿಜಿಟಲ್ ಟ್ಯೂಟರ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ₹900 ಕೋಟಿ ಮೀಸಲಿಟ್ಟು, ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಗೆ ಹೆಚ್ಚುವರಿ ₹400 ಕೋಟಿ ಅನುದಾನ ನೀಡಲಾಗಿದೆ. ಜೊತೆಗೆ ಆರೋಗ್ಯ ಇಲಾಖೆಯಲ್ಲಿ 2,500 ಹುದ್ದೆಗಳ ಭರ್ತಿಗೂ ಕ್ರಮ ಕೈಗೊಳ್ಳಲಾಗಿದೆ. ಸಾಮಾಜಿಕ ಕಲ್ಯಾಣಕ್ಕೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂದಿದ್ದಾರೆ.
ಈ ಬಜೆಟ್ನಲ್ಲಿ ರಾಜ್ಯ ಸರ್ಕಾರ “11G ಆರ್ಥಿಕ ಅಭಿವೃದ್ಧಿ ಮಾದರಿ”ಯನ್ನು ಮುಂದಿಟ್ಟಿದ್ದು, ಗ್ಯಾರಂಟಿ ಆರ್ಥಿಕತೆ, ಉತ್ತಮ ಶಿಕ್ಷಣ, ಉತ್ತಮ ಆರೋಗ್ಯ, ಗ್ರಾಮೀಣ ಆರ್ಥಿಕತೆ, ಉತ್ತಮ ಆಡಳಿತ, ಗಿಗ್ ಆರ್ಥಿಕತೆ, ಭೌಗೋಳಿಕ ಸಮಾನತೆ, ಜಾಗತಿಕ ವ್ಯಾಪಾರ, ಪ್ರವಾಸೋದ್ಯಮ, ಹಸಿರು ಆರ್ಥಿಕತೆ ಹಾಗೂ ನಗರ ಆರ್ಥಿಕ ಬೆಳವಣಿಗೆಗೆ ಒತ್ತು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಒಟ್ಟಾರೆ 69,488 ಕೋಟಿ ರೂ. ಮೊತ್ತದ ಕಾಮಗಾರಿಗಳು ಅನುಮೋದನೆಯಾಗಿದ್ದು, ಇದರಲ್ಲಿ ಕೇಂದ್ರ ಸರ್ಕಾರದ ಪಾಲು 30,888 ಕೋಟಿ ರೂ.ಗಳಾಗಿದ್ದು, ರಾಜ್ಯ ಸರ್ಕಾರದ `ಪಾಲು 38.600 ಕೋಟಿ ರೂ.ಗಳಾಗಿರುತ್ತದೆ. ಕೇಂದ್ರ ಸರ್ಕಾರದಿಂದ ಇದುವರೆಗೆ ಕೇವಲ 11,786 ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆ ಮಾಡಿದ್ದು, ಇನ್ನೂ 19.102 ಕೋಟಿ ರೂ.ಗಳನ್ನು ಕೇಂದ್ರ ಮಾಡಬೇಕಾಗಿರುತ್ತದೆ. ರಾಜ್ಯ ಸರ್ಕಾರದಿಂದ ಒದಗಿಸಬೇಕಾದ ಅನುದಾನದಲ್ಲಿ ಈಗಾಗಲೇ 27.098 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, 11,502 ರೂ.ಗಳನ್ನು ಮಾತ್ರ ಬಿಡುಗಡೆ ಮಾಡಬೇಕಾಗಿರುತ್ತದೆ. ಕೇಂದ್ರ ಸರ್ಕಾರ 2025-26ನೇ ಸಾಲಿನಲ್ಲಿ ಯಾವುದೇ ಅನುದಾನ ಬಿಡುಗಡೆ ಮಾಡದಿದ್ದರೂ ಸಹ ಈ ಯೋಜನೆಯ ಹಿತದೃಷ್ಟಿಯಿಂದ ರಾಜ್ಯ ಸರ್ಕಾರದಿಂದ ಒಟ್ಟಾರೆ 15,500 ಕೋಟಿ ರೂ.ಗಳಷ್ಟು ಅನುದಾನವನ್ನು ಹೆಚ್ಚುವರಿಯಾಗಿ ಬಿಡುಗಡೆ ಮಾಡಿದೆ ಹಾಗೂ 2026-27ನೇ ಸಾಲಿನಲ್ಲಿ ಈ ಯೋಜನೆಗಾಗಿ 10,433 ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿದೆ ಅಂತ ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸೆದೆ – ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.
ಸಿಎಂ ಸಿದ್ಧರಾಮಯ್ಯ ಬಜೆಟ್ ನಲ್ಲಿ ಖಾಲಿ ಚೊಂಬನ್ನು ಜನತೆಗೆ ನೀಡಿದ್ದಾರೆ: ವಿಪಕ್ಷ ನಾಯಕ ಆರ್.ಅಶೋಕ್
ಸಾಗರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಚುರುಕು; 6,000 ಮತದಾರರ ಹೆಸರು ಕೈಬಿಡಲು ಕ್ರಮ








