ಬೆಂಗಳೂರು : “ನನ್ನ ಬಳಿ ಯಾವ ಬಣವೂ ಇಲ್ಲ. ನಾನು ಯಾವುದೇ ಬಣದ ನಾಯಕನಲ್ಲ. ನಾನು 140 ಶಾಸಕರ ಅಧ್ಯಕ್ಷ. 140 ಶಾಸಕರೂ ನನಗೆ ಮುಖ್ಯ. ಗುಂಪುಗಾರಿಕೆ ನನ್ನ ರಕ್ತದಲ್ಲೇ ಇಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು.
ಕೆಲವು ಶಾಸಕರು, ಮಂತ್ರಿಗಳು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ, ಮತ್ತೊಂದೆಡೆ ಡಿನ್ನರ್ ಮೀಟಿಂಗ್ ನಡೆಯುತ್ತಿದೆ ಎಂದು ಕೇಳಿದಾಗ, “ಯಾವ ಗುಂಪನ್ನು ದೆಹಲಿಗೆ ಕರೆದುಕೊಂಡು ಹೋಗಲು ನನಗೆ ಇಚ್ಛೆ ಇಲ್ಲ. ನಾನು ಗುಂಪುಗಾರಿಕೆ ಮಾಡುವುದಿಲ್ಲ. ಮಾನ್ಯ ಮುಖ್ಯಮಂತ್ರಿಗಳು ಸಚಿವ ಸಂಪುಟ ಪುನಾರಚನೆ ಮಾಡುವುದಾಗಿ ಘೋಷಿಸಿದ್ದಾರೆ. ಹೀಗಾಗಿ ಮಂತ್ರಿ ಸ್ಥಾನದ ಆಕಾಂಕ್ಷೆ ಇರುವವರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ದಿಲ್ಲಿಗೆ ಹೋಗುವುದು ಸಹಜ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಹಕ್ಕು ಅವರಿಗೆ ಇದೆ. ನಾನು ಯಾರನ್ನೂ ಕರೆದುಕೊಂಡು ಹೋಗಿಲ್ಲ. ಕೆಲವರು ಮುಖ್ಯಮಂತ್ರಿಗಳ ಜೊತೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದರೆ, ಮತ್ತೆ ಕೆಲವರು ತಾವಾಗಿಯೇ ಹೋಗಿದ್ದಾರೆ. ಇದರಲ್ಲಿ ತಪ್ಪೇನಿದೆ? ನಾವು ಯಾರನ್ನೂ ತಡೆಯಲು ಸಾಧ್ಯವಿಲ್ಲ” ಎಂದು ತಿಳಿಸಿದರು.
ಸಿಎಂಗೆ ಆಲ್ ದಿ ಬೆಸ್ಟ್
“ಒಂದು ಪಕ್ಷದ ಶಾಸಕರು ಮಂತ್ರಿ, ಮುಖ್ಯಮಂತ್ರಿ ಆಗಲು ಅರ್ಹರಿರುತ್ತಾರೆ. ಮಾನ್ಯ ಮುಖ್ಯಮಂತ್ರಿಗಳು ಐದು ವರ್ಷ ತಾವೇ ಸಿಎಂ ಆಗಿ ಇರುವುದಾಗಿ ಹೇಳಿದ್ದಾರೆ. ಐ ವಿಶ್ ಹಿಮ್ ಆಲ್ ದ ಬೆಸ್ಟ್ (ಅವರಿಗೆ ಶುಭ ಕೋರುತ್ತೇನೆ”) ಎಂದರು.
ಯಾರೇ ಆದರೂ ಆಡಿದ ಮಾತು ಮುಖ್ಯ ಅಲ್ಲವೇ ಎಂದು ಕೇಳಿದಾಗ, “ಸಿಎಂ ತಮ್ಮ ವಿಚಾರಧಾರೆ ಹೇಳಿದ್ದಾರೆ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ನಾನುಂಟು ಹೈಕಮಾಂಡ್ ಉಂಟು. ಹೈಕಮಾಂಡ್ ಹೇಳಿದಂತೆ ಕೇಳುವುದಾಗಿ ಸಿಎಂ ಹೇಳಿದ್ದಾರೆ. ನಾನೂ ಹೇಳಿದ್ದೇನೆ. ಅದಕ್ಕೆ ನಾವು ಬದ್ಧ. ಅಷ್ಟು ಬಿಟ್ಟರೆ ಬೇರೇನೂ ಇಲ್ಲ ಎಂದರು.
ಎರಡೂವರೆ ವರ್ಷಗಳಿಂದ ಡಿನ್ನರ್ ಮೀಟಿಂಗ್ ಆಗುತ್ತಲೇ ಇವೆ
ಸತೀಶ್ ಜಾರಕಿಹೊಳಿ ಅವರು ಡಿನ್ನರ್ ಸಭೆ ಮಾಡಿರುವ ಬಗ್ಗೆ ಕೇಳಿದಾಗ, “ನನಗೆ ಡಿನ್ನರ್ ಸಭೆಗಳ ಬಗ್ಗೆ ಗೊತ್ತಿಲ್ಲ. ನಾಲ್ಕೈದು ಡಿಸಿಎಂ ಮಾಡಬೇಕು, ಅಧ್ಯಕ್ಷರ ಬದಲಾವಣೆ ಮಾಡಬೇಕು ಎಂದು ಎರಡೂವರೆ ವರ್ಷಗಳಿಂದ ಡಿನ್ನರ್ ಸಭೆಗಳನ್ನು ಮಾಡುತ್ತಲೇ ಇದ್ದಾರೆ. ಇನ್ನು ಹೆಚ್ಚು ಸಭೆಗಳನ್ನು ಮಾಡಲಿ” ಎಂದು ತಿಳಿಸಿದರು.
WATCH VIDEO: ದುಬೈ ಏರ್ ಶೋ ವೇಳೆ ತೇಜಸ್ ಯುದ್ಧ ವಿಮಾನ ಪತನ: ಇಲ್ಲಿದೆ ಆಘಾತಕಾರಿ ವೀಡಿಯೋ
ಇಂದಿನಿಂದ ದೇಶಾದ್ಯಂತ ನೂತನ ಕಾರ್ಮಿಕ ಸಂಹಿತೆಗಳು ಜಾರಿ: ಅನುಕೂಲಗಳೇನು? ಇಲ್ಲಿದೆ ಮಾಹಿತಿ | Four New Labour Codes








