ಮಂಡ್ಯ : ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಕೆ ಆರ್ ಎಸ್ ಜಲಾಶಯ ಭರ್ತಿಯಾಗಿದ್ದು, ಹಾಗಾಗಿ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ. ಈ ಮೂಲಕ ಇಂದು ಸಿಎಂ ಸಿದ್ದರಾಮಯ್ಯ ಜೂನ್ ತಿಂಗಳಲ್ಲಿ ಕೆ ಆರ್ ಎಸ್ ಜಲಾಶಯ ಬರ್ತೀಯಾಗಿದ್ದಕ್ಕೆ ಬಾಗಿನ ಅರ್ಪಿಸುವ ಮೂಲಕ ಹೊಸ ದಾಖಲೆ ಬರೆಯಲಿದ್ದಾರೆ.
ಹೌದು ಜೂನ್ 28ರ ಶನಿವಾರವೇ ಡ್ಯಾಂ ಭರ್ತಿಯಾಗಿದೆ. ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಾಗಿನ ಅರ್ಪಿಸಲಿದ್ದಾರೆ. ವೇದಬ್ರಹ್ಮ ಡಾ.ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಗಳು ನಡೆಯಲಿವೆ. ಬೆಳಗ್ಗೆ 11:30ರ ಅಭಿಜಿನ್ ಮೂಹೂರ್ತದಲ್ಲಿ ಬಾಗಿನ ಅರ್ಪಣೆ ಕಾರ್ಯಕ್ರಮ ನಡೆಯಲಿದೆ.
ಜೂನ್ ಆರಂಭದಿಂದ ಅಬ್ಬರಿಸುತ್ತಿರುವ ಮುಂಗಾರು ಮಳೆಯಿಂದಾಗಿ ಜೂನ್ ತಿಂಗಳಲ್ಲೇ ಕೆಆರ್ಎಸ್ ಭರ್ತಿಯಾಗಿದೆ. ಜಲಾಶಯ ಭರ್ತಿಯಾದ ಹಿನ್ನೆಲೆ ಇಂದು ಕಾವೇರಿ ಬಾಗಿನ ಅರ್ಪಿಸುವ ಮೂಲಕ ಜೂನ್ನಲ್ಲಿ ಬಾಗಿನ ಅರ್ಪಿಸಿದ ಮೊದಲ ಸಿಎಂ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರರಾಗಲಿದ್ದಾರೆ.
ಬಾಗಿನ ಅರ್ಪಣೆ ಕಾರ್ಯಕ್ರಮ ಹಿನ್ನೆಲೆ ಕೆಆರ್ಎಸ್ ಮಧುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಅಣೆಕಟ್ಟಿನ ಗೋಡೆಗಳಿಗೆ ಸುಣ್ಣಬಣ್ಣ ಬಳಿದಿದ್ದು, ಎಲ್ಲಡೆ ಕನ್ನಡ ಬಾವುಟಗಳು ರಾರಾಜಿಸುತ್ತಿವೆ. ಬಾಗಿನ ಅರ್ಪಿಸುವ ಜಾಗದಲ್ಲಿ ರೆಡ್ ಕಾರ್ಪೆಟ್ ಹಾಕಿ ವೇದಿಕೆ ಸಜ್ಜುಗೊಳಿಸಲಾಗಿದೆ. ಬಾಗಿನ ಅರ್ಪಣೆ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹಲವು ಸಚಿವರು ಹಾಗೂ ಶಾಸಕರು ಉಪಸ್ಥಿತರಿರಲಿದ್ದಾರೆ.