ದಾವಣಗೆರೆ: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿರುವುದನ್ನು ನೆನೆದು ಅವರ ಸಂಪುಟದಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದ ಎಂ.ಸಿ. ಸುಧಾಕರ್ ಅವರು ಮಾಧ್ಯಮಗಳ ಮುಂದೆ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಳೆದ ಎರಡು-ಮೂರು ದಿನಗಳಿಂದ ಸಿದ್ದರಾಮಯ್ಯನವರನ್ನು ಆ ಸ್ಥಿತಿಯಲ್ಲಿ ನೋಡಲು ಸಾಧ್ಯವಾಗುತ್ತಿಲ್ಲ. ಎಲ್ಲಾ ವರ್ಗಗಳನ್ನು ಸಮಾನವಾಗಿ ತೆಗೆದುಕೊಂಡು ಹೋಗಿ, ಯಾವುದೇ ಒಂದು ಜಾತಿಗೆ ಸೀಮಿತವಾಗದೆ ಇಡೀ ಸಮಾಜಕ್ಕೆ ಸಮಾನತೆ ನೀಡಿದ ನಾಯಕ ಸಿದ್ದರಾಮಯ್ಯ. ಅಂತಹ ವ್ಯಕ್ತಿಯನ್ನು ಈ ಪರಿಸ್ಥಿತಿಯಲ್ಲಿ ನೋಡಲು ಕಷ್ಟವಾಗುತ್ತಿದೆ” ಎಂದು ಕಣ್ತುಂಬಿಕೊಂಡರು.
ರಾಜಕಾರಣಕ್ಕೆ ಸಿದ್ದರಾಮಯ್ಯ ಮೇಲ್ಪಂಕ್ತಿ: “ಸಿದ್ದರಾಮಯ್ಯನವರು ರಾಜಕಾರಣದಲ್ಲಿ ಒಂದು ಉತ್ತಮ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ. ಒಬ್ಬ ರಾಜಕಾರಣಿಯ ವ್ಯಕ್ತಿತ್ವ ಹೇಗಿರಬೇಕು ಎಂಬುದನ್ನು ಅವರು ತೋರಿಸಿಕೊಟ್ಟಿದ್ದಾರೆ. ಅವರಿಂದಾಗಿ ಕಾಂಗ್ರೆಸ್ ಪಕ್ಷದ ವರ್ಚಸ್ಸು ಹೆಚ್ಚಾಗಿದೆ. ಅಧಿಕಾರ ಯಾರಿಗೂ ಶಾಶ್ವತವಲ್ಲ ಎಂಬುದನ್ನು ಅವರ ಅನುಭವ ನಮಗೆಲ್ಲ ಪಾಠ ಮಾಡಿದೆ. ಮುಖ್ಯಮಂತ್ರಿಗಳು ರಾಜೀನಾಮೆ ನೀಡಿರುವುದರಿಂದ ಇಡೀ ಸಂಪುಟ ಈಗ ಅಸ್ತಿತ್ವದಲ್ಲಿಲ್ಲ, ನಾವೆಲ್ಲರೂ ಸದ್ಯ ಮಾಜಿ ಸಚಿವರಾಗಿದ್ದೇವೆ” ಎಂದು ಸುಧಾಕರ್ ತಿಳಿಸಿದರು.
ಮುಂದಿನ ಸಿಎಂ ಆಗಿ ಡಿ.ಕೆ. ಶಿವಕುಮಾರ್: ಮುಂದಿನ ರಾಜಕೀಯ ವಿದ್ಯಮಾನಗಳ ಕುರಿತು ಮಾತನಾಡಿದ ಅವರು, “ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಳ್ಳಲು ಯಾವುದೇ ಅಡ್ಡಿ-ಆತಂಕಗಳಿಲ್ಲ. ಶಾಸಕಾಂಗ ಪಕ್ಷದ ಸಭೆಯ ಬಳಿಕ ಇದು ಅಧಿಕೃತವಾಗಲಿದೆ. ಪಕ್ಷಕ್ಕಾಗಿ ಡಿಕೆಶಿ ಸಾಕಷ್ಟು ದುಡಿದಿದ್ದಾರೆ. ಹೀಗಾಗಿ ಹೈಕಮಾಂಡ್ ಅವರಿಗೆ ಅವಕಾಶ ನೀಡಿದೆ. ಇದಕ್ಕೆ ಸ್ವತಃ ಸಿದ್ದರಾಮಯ್ಯನವರೇ ಬೆಂಬಲ ಸೂಚಿಸಿದ್ದು, ಯಾರ ವಿರೋಧವೂ ಇಲ್ಲ. ಇನ್ನು ದಲಿತ ಸಿಎಂ ವಿಚಾರಕ್ಕೆ ಬಂದರೆ, ಮುಂದಿನ ದಿನಗಳಲ್ಲಿ ಎಲ್ಲರಿಗೂ ಅವಕಾಶ ಸಿಗಲಿದೆ. ನಾವೆಲ್ಲರೂ ಒಟ್ಟಾಗಿ ಶ್ರಮಿಸಿ 2028ರಲ್ಲಿ ಮತ್ತೆ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರುತ್ತೇವೆ” ಎಂದರು.
ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಾಗಲು ಯೋಗ್ಯರು: ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷರಾಗುವ ಕುರಿತು ಪ್ರತಿಕ್ರಿಯಿಸಿದ ಅವರು, “ಸತೀಶ್ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಸಾರಥ್ಯ ವಹಿಸುವ ಎಲ್ಲಾ ಸಾಮರ್ಥ್ಯ ಹಾಗೂ ಯೋಗ್ಯತೆ ಇದೆ. ಅವರದ್ದು ಆಡಂಬರದ ಸಂಘಟನೆಯಲ್ಲ, ಅತ್ಯಂತ ಸೈಲೆಂಟ್ ಆಗಿ ಕೆಲಸ ಮಾಡಿ ಯಶಸ್ಸು ಕಾಣುವ ಶೈಲಿ. ಅವರು ಅಧ್ಯಕ್ಷರಾದರೆ ಪಕ್ಷ ಮತ್ತಷ್ಟು ಬಲಿಷ್ಠವಾಗುತ್ತದೆ. ಆದರೆ ಮುಂದಿನ ಸಂಪುಟದಲ್ಲಿ ಯಾರು ಸಚಿವರಾಗಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನಿಸಲಿದೆ” ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ, “ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯನವರನ್ನು ಕೆಟ್ಟದಾಗಿ ನಡೆಸಿಕೊಂಡಿದೆ” ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಹೇಳಿಕೆಗೆ ಟಾಂಗ್ ನೀಡಿದ ಸುಧಾಕರ್, “ಕೆಲ ತಿಂಗಳುಗಳ ಹಿಂದೆ ಸಿದ್ದರಾಮಯ್ಯನವರ ಬಗ್ಗೆ ಜೋಷಿ ಅವರು ಏನೆಲ್ಲಾ ಮಾತನಾಡಿದ್ದರು ಎಂಬುದು ಎಲ್ಲರಿಗೂ ಗೊತ್ತಿದೆ. ಈಗ ಅವರು ತೋರುತ್ತಿರುವ ಅನುಕಂಪ ಕೇವಲ ರಾಜಕೀಯ ಉದ್ದೇಶದ್ದು ಅಷ್ಟೇ” ಎಂದು ಟೀಕಿಸಿದರು.








