ಬೆಂಗಳೂರು: ಗ್ರೇಟರ್ ಬೆಂಗಳೂರು ಜಾತ್ಯತೀತ ಜನತಾದಳ ಪಕ್ಷದ ಅಧ್ಯಕ್ಷರಾಗಿ ಮಾಜಿ ಶಾಸಕ ಹೆಚ್.ಎಂ. ರಮೇಶ್ ಗೌಡ ಅವರನ್ನು ಮಾಜಿ ಪ್ರಧಾನಿಗಳು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ತಮ್ಮ ನೇಮಕದ ಆದೇಶ ಪತ್ರವನ್ನು ರಮೇಶ್ ಗೌಡ ಅವರು ಬುಧವಾರ ರಾಷ್ಟ್ರೀಯ ಅಧ್ಯಕ್ಷರಾದ ದೇವೇಗೌಡರು ಹಾಗೂ ರಾಜ್ಯಾಧ್ಯಕ್ಷರಾದ ಹೆಚ್.ಡಿ. ದೇವೇಗೌಡ ಅವರಿಂದ ಸ್ವೀಕರಿಸಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಬೆಂಗಳೂರು ಕೇಂದ್ರ, ಉತ್ತರ, ದಕ್ಷಿಣ, ಪಶ್ಚಿಮ, ಮತ್ತು ಪೂರ್ವ ಐದು ಭಾಗಗಳಾಗಿ ವಿಂಗಡಿಸಿದ್ದು, ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಪಕ್ಷದ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ರಮೇಶ್ ಗೌಡ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಷ್ಟ್ರೀಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಕ್ಷದ ಸಂಘಟನೆ ಐದು ವಿಭಾಗವಾರು ಪಾಲಿಕೆಗಳನ್ನು ವ್ಯವಸ್ಥಿತವಾಗಿ ಮುನ್ನಡೆಸುವ ಹಿನ್ನೆಲೆಯಲ್ಲಿ ನಿಮ್ಮ ಜವಾಬ್ದಾರಿ ಹೆಚ್ಚಿದೆ. ಆದ್ದರಿಂದ ನೀವು ಈ ಐದು ಕ್ಷೇತ್ರಗಳ ಅಧ್ಯಕ್ಷರುಗಳ ಕರ್ತವ್ಯ ನಿರ್ವಹಣೆಯಲ್ಲಿ ಏನಾದರೂ ಪಕ್ಷಕ್ಕೆ ಹಾನಿಯಾಗುವ ಘಟನೆಗಳು ಜರುಗಿದಲ್ಲಿ ಅದನ್ನು ಸರಿಪಡಿಸುವ ಜವಾಬ್ದಾರಿ ನಿಮ್ಮ ಮೇಲೆ ಇರುತ್ತದೆ ಎಂದು ಆದೇಶ ಪತ್ರದಲ್ಲಿ ನೂತನ ಅಧ್ಯಕ್ಷರಿಗೆ ರಾಷ್ಟ್ರೀಯ ಅಧ್ಯಕ್ಷರು ಸೂಚಿಸಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿವಿಧ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ನೇಮಕ ಮಾಡುವ ಅಧೀಕಾರವನ್ನು ನೂತನ ಅಧ್ಯಕ್ಷರಿಗೆ ನೀಡಿದ್ದು, ಈ ಘಟಕಗಳ ನೇಮಕಾತಿ ವಿಚಾರವನ್ನು ಜಾತ್ಯತೀತ ಜನತಾದಳದ ರಾಷ್ಟ್ರೀಯ ಹಾಗೂ ರಾಜ್ಯಾಧ್ಯಕ್ಷರ ಗಮನಕ್ಕೆ ತರಬೇಕು ಎಂದು ನೇಮಕಾತಿ ಆದೇಶ ಪತ್ರದಲ್ಲಿ ತಿಳಿಸಲಾಗಿದೆ.
ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ ಇರುವುದರಿಂದ ನೀವು ಈ ಐದು ವಿಭಾಗದ ಅಧ್ಯಕ್ಷರುಗಳನ್ನು ಕನಿಷ್ಠ ಹತ್ತು ದಿನಗಳಿಗೊಮ್ಮೆ ಕಡ್ಡಾಯವಾಗಿ ಸಭೆ ನಡೆಸಿ ಪಕ್ಷದ ಕಾರ್ಯ ಚಟುವಟಿಕೆಗಳ ಬಗ್ಗೆ ವಿಮರ್ಶೆ ಮಾಡಿ ಮುಂಬರುವ ಚುನಾವಣೆ ಎದುರಿಸಲಿಕ್ಕೆ ಸರ್ವ ಪ್ರಯತ್ನಗಳನ್ನು ಮಾಡಬೇಕು ಎಂದು ದೇವೇಗೌಡರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.








