ಬೆಂಗಳೂರು: ರಾಜ್ಯದ ಐದು ಹುಲಿ ಸಂರಕ್ಷಿತ ಪ್ರದೇಶ ಹಾಗೂ ವನ್ಯಜೀವಿಧಾಮಗಳ ಸಫಾರಿಯಲ್ಲಿ ತೆರೆದ ಕ್ಯಾಂಪರ್ ಬದಲಿಗೆ ಸುರಕ್ಷಿತ ಬಸ್ ಬಳಕೆ ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.
ದುಬಾರೆ ಆನೆ ಶಿಬಿರದಲ್ಲಿ ನಿನ್ನೆ ಎರಡು ಸಾಕಾನೆಗಳ ಕಾಳಗದ ವೇಳೆ ಪ್ರವಾಸಿ ಮಹಿಳೆ ಮೃತಪಟ್ಟ ಆಘಾತಕಾರಿ ಘಟನೆ ಹಿನ್ನೆಲೆಯಲ್ಲಿ ಸಫಾರಿಗಳಲ್ಲಿ ಪ್ರವಾಸಿಗರ ಸುರಕ್ಷತೆಗೂ ಹೆಚ್ಚಿನ ಗಮನ ಹರಿಸುವಂತೆ ಅರಣ್ಯ ಸಚಿವರು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ಬಂಡೀಪುರ, ನಾಗರಹೊಳೆ, ಕಾಳಿ, ಬಿಳಿಗಿರಿರಂಗನಬೆಟ್ಟ ಮತ್ತು ಭದ್ರಾ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಮಲೆ ಮಹದೇಶ್ವರ ಬೆಟ್ಟ, ದಾಂಡೇಲಿ, ಕೆ.ಗುಡಿ ಸೇರಿದಂತೆ ರಾಜ್ಯದ ವಿವಿಧ ವನ್ಯಜೀವಿಧಾಮ ಮತ್ತು ಕಾನನಗಳಲ್ಲಿ ಸಫಾರಿ ನಡೆಯುತ್ತಿದ್ದು, ರಾಜ್ಯದ ಮೂಲೆಮೂಲೆಗಳಿಂದ ಅಷ್ಟೇ ಅಲ್ಲದೆ ದೇಶ ವಿದೇಶಗಳಿಂದಲೂ ಪ್ರವಾಸಿಗರು, ವನ್ಯಜೀವಿ ಪ್ರಿಯರು ಇಲ್ಲಿಗೆ ಆಗಮಿಸುತ್ತಾರೆ. ಅದೃಷ್ಟವಶಾತ್ ಈವರೆಗೆ ಸಫಾರಿ ಪ್ರದೇಶಗಳಲ್ಲಿ ಆನೆಗಳು, ಹುಲಿಗಳು ಸೇರಿದಂತೆ ಯಾವುದೇ ವನ್ಯಮೃಗಗಳು ಸಫಾರಿ ವಾಹನಗಳ ಮೇಲೆ ದಾಳಿ ಮಾಡಿ ಜೀವಹಾನಿ ಮಾಡಿದ ಘಟನೆಗಳು ಸಂಭವಿಸಿರುವುದಿಲ್ಲ. ಆದಾಗ್ಯೂ ಅನಾಹುತ ಸಂಭವಿಸುವ ಮೊದಲೇ ಎಚ್ಚೆತ್ತುಕೊಳ್ಳುವ ಅಗತ್ಯವಿದೆ ಎಂದು ಸೂಚನೆಯಲ್ಲಿ ತಿಳಿಸಿದ್ದಾರೆ.
ಸಫಾರಿ, ಆನೆ ಶಿಬಿರದ ಸನಿಹದಲ್ಲಿ ಆಂಬುಲೆನ್ಸ್ ಖಾತ್ರಿಗೂ ಸೂಚನೆ:
ಸಫಾರಿಗೆ ಬರುವ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಇನ್ನು ಮುಂದೆ ತೆರೆದ ಕ್ಯಾಂಪರ್ ವಾಹನಗಳ ಬದಲಿಗೆ ಸಂಪೂರ್ಣ ಸುರಕ್ಷಿತವಾದ ಬಸ್ ಸಫಾರಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಮತ್ತು ಹಾಲಿ ಬಳಕೆಯಲ್ಲಿರುವ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳುಗಳಿಂದ ಕೂಡಿದ ಜಾಲರಿಗಳನ್ನು ಅಥವಾ ಒಡೆಯಲಾಗದ ಗಾಜು ಅಳವಡಿಸಿ ಬಳಸುವ ಬಗ್ಗೆ ಕ್ರಮವಹಿಸಲು, ಯಾವುದೇ ಪ್ರವಾಸಿಗರು ಅರಣ್ಯದೊಳಗೆ ಇಳಿಯಲು ಅವಕಾಶ ನೀಡದಂತೆ ಮತ್ತು ಪ್ರತಿ ಸಫಾರಿ ವಾಹನದಲ್ಲಿ ಪ್ರಥಮ ಚಿಕಿತ್ಸೆಯ ಕಿಟ್ ಹಾಗೂ ಸಫಾರಿ ಕೇಂದ್ರಗಳಿಗೆ ಸಮೀಪದಲ್ಲಿ ಆಂಬುಲನ್ಸ್ ವಾಹನ ಇರುವುದನ್ನು ಖಾತ್ರಿಪಡಿಸಿಕೊಳ್ಳುವಂತೆಯೂ ಸೂಚಿಸಿದ್ದಾರೆ.








