ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿರುವ ನಾಯಕತ್ವ ಬದಲಾವಣೆ ಪ್ರಕ್ರಿಯೆ ಬೆನ್ನಲ್ಲೇ, ಮುಂದಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ಡಿ.ಕೆ. ಶಿವಕುಮಾರ್ ಅವರ ಸಂಪುಟ ಸೇರಲಿರುವ ಸಚಿವರ ಪಟ್ಟಿ ವಿಮಾನದಲ್ಲೇ ಸಿದ್ಧವಾಗಿದೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಮುಂದಿನ ರಾಜಕೀಯ ವಿದ್ಯಮಾನಗಳು ಹಾಗೂ ಹೈಕಮಾಂಡ್ ಭೇಟಿಗೆ ದೆಹಲಿಗೆ ಪ್ರಯಾಣಿಸುವ ಸಂದರ್ಭದಲ್ಲಿಯೇ ಡಿ.ಕೆ. ಶಿವಕುಮಾರ್ ಅವರು ಈ ಹೈಕಮಾಂಡ್ ಮಟ್ಟದ ಸಂಪುಟ ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ.
ವಿಮಾನ ಪ್ರಯಾಣದಲ್ಲೇ ಸಿದ್ಧವಾಯ್ತು ಲೀಸ್ಟ್!
ಬೆಂಗಳೂರಿನಿಂದ ದೆಹಲಿಗೆ ತೆರಳುವ ವಿಶೇಷ ವಿಮಾನದಲ್ಲೇ ಕೂತು ಭಾವಿ ಸಿಎಂ ಡಿ.ಕೆ. ಶಿವಕುಮಾರ್ ಅವರು ತಮ್ಮ ನೂತನ ಸಂಪುಟದ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗುವ ಮುನ್ನವೇ, ತಮ್ಮ ಬಣದ ಪ್ರಮುಖರು ಹಾಗೂ ಹೊಸ ಸಂಪುಟದಲ್ಲಿ ಯಾರಿಗೆಲ್ಲಾ ಸ್ಥಾನ ನೀಡಬೇಕು ಎಂಬ ಹೋಮ್ವರ್ಕ್ ಅನ್ನು ಅವರು ವಿಮಾನದಲ್ಲೇ ಮುಗಿಸಿದ್ದಾರೆ ಎನ್ನಲಾಗಿದೆ.
ಡಿಕೆಶಿ ಕ್ಯಾಬಿನೆಟ್ನಲ್ಲಿ ಯಾರಿಗೆಲ್ಲಾ ಚಾನ್ಸ್?
ಡಿ.ಕೆ. ಶಿವಕುಮಾರ್ ಅವರ ಹೊಸ ಕ್ಯಾಬಿನೆಟ್ನಲ್ಲಿ “ತಮ್ಮವರು” ಯಾರು ಯಾರು ಇರಬೇಕು ಮತ್ತು ಪಕ್ಷಕ್ಕೆ ನಿಷ್ಠರಾಗಿರುವ ಹಿರಿಯ ಹಾಗೂ ಯುವ ನಾಯಕರಿಗೆ ಹೇಗೆ ಆದ್ಯತೆ ನೀಡಬೇಕು ಎಂಬ ಬಗ್ಗೆ ಈ ಪಟ್ಟಿಯಲ್ಲಿ ಸ್ಪಷ್ಟ ನೀಲಿ ನಕ್ಷೆ ಸಿದ್ಧಪಡಿಸಲಾಗಿದೆ ಎಂದು ತಿಳಿದುಬಂದಿದೆ.
ಸಿದ್ದರಾಮಯ್ಯ ಅವರ ರಾಜೀನಾಮೆಯಿಂದಾಗಿ ಸದ್ಯ ಇಡೀ ಸಂಪುಟ ರದ್ದಾಗಿದ್ದು, ಶಾಸಕಾಂಗ ಪಕ್ಷದ (CLP) ಸಭೆಯ ಬಳಿಕ ಹೊಸ ಸಚಿವರ ಪ್ರಮಾಣ ವಚನ ಪ್ರಕ್ರಿಯೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಮುಂದೆ ಇಡಲು ವಿಮಾನದಲ್ಲೇ ಈ ಪಟ್ಟಿ ಸಿದ್ಧಪಡಿಸಲಾಗಿದೆ ಎಂಬ ಚರ್ಚೆಗಳು ಮುನ್ನೆಲೆಗೆ ಬಂದಿವೆ.








