ಬೆಂಗಳೂರು : ಪಂಚತಂತ್ರ 2.0 ವೇದಿಕೆಯಲ್ಲಿ ಲಭ್ಯವಿರುವ 97 ಲಕ್ಷಕ್ಕೂ ಹೆಚ್ಚು ಡಿಜಿಟಲೀಕೃತ ಆಸ್ತಿಗಳಿಗೆ ಇ-ಖಾತಾಗಳನ್ನು ಆನ್ಲೈನ್ನಲ್ಲಿ ನೀಡಲು ನಿರ್ಧರಿಸಲಾಗಿದೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಕಾಯ್ದೆ 2025, ಪ್ರಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಇ-ಸ್ವತ್ತು ಕಾರ್ಯಕ್ರಮವನ್ನು ಪ್ರಾರಂಭಿಸಲಿರುವ ಹಿನ್ನೆಲೆಯಲ್ಲಿ ಎದುರಾಗಬಹುದಾದ ಸವಾಲುಗಳು ಹಾಗೂ ತಾಂತ್ರಿಕ ಸಮಸ್ಯೆಗಳ ನಿವಾರಣೆಯ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಹಲವು ನಿವಾರಣೋಪಾಯಗಳನ್ನು ಸೂಚಿಸಲಾಯಿತು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಇ-ಸ್ವತ್ತು ಮಂಜೂರಾತಿ ವ್ಯವಸ್ಥೆಯನ್ನು ಬೇಡಿಕೆ ಆಧಾರಿತ ವಿಧಾನದಿಂದ ಅಭಿಯಾನ ಆಧಾರಿತ ಮಾದರಿಗೆ ಪರಿವರ್ತನೆಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ. ಈ ವಿಚಾರವಾಗಿ ರಾಷ್ಟ್ರೀಯ ಮಾಹಿತಿ ಕೇಂದ್ರದ (NIC) ಅಧಿಕಾರಿಗಳು, ಗ್ರಾಮೀಣಾಭಿವೃದ್ಧಿ ಇಲಾಖೆಯ ಡೇಟಾ ಸೆಂಟರ್ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸತತ ಎರಡು ದಿನಗಳ ಸುದೀರ್ಘ ಚರ್ಚೆ ನಡೆಸಲಾಯಿತು.
ಇ-ಸ್ವತ್ತು ರೂಪಾಂತರದ ಭಾಗವಾಗಿ ಅರ್ಜಿಯ ಕಾರ್ಯಾಚರಣೆಯ ಸಿದ್ಧತೆಯನ್ನು ಪರಿಶೀಲಿಸಿ, ಕಾರ್ಯಕ್ರಮದ ಸುಗಮ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳುವಲ್ಲಿ ಎದುರಾಗಬಹುದಾದ ತಾಂತ್ರಿಕ ಸವಾಲುಗಳನ್ನು ನಿವಾರಿಸಲು ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ.
ಇಲಾಖೆಯು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆಗಳು, ದರಗಳು ಮತ್ತು ಶುಲ್ಕಗಳು) ನಿಯಮಗಳು, 2025 ಅನ್ನು ಸಾರ್ವಜನಿಕರಿಗೆ ತಲುಪಿಸುವ ಪ್ರಕ್ರಿಯೆಯಲ್ಲಿದೆ. ಈ ನಿಯಮಗಳಿಂದ ಪಂಚತಂತ್ರ 2.0 ವೇದಿಕೆಯಲ್ಲಿ ಲಭ್ಯವಿರುವ 97 ಲಕ್ಷಕ್ಕೂ ಹೆಚ್ಚು ಡಿಜಿಟಲೀಕೃತ ಆಸ್ತಿಗಳಿಗೆ ಇ-ಖಾತಾಗಳನ್ನು ಆನ್ಲೈನ್ನಲ್ಲಿ ನೀಡಲು ಅನುಕೂಲವಾಗುತ್ತವೆ. ಇದರಿಂದ ನಾಗರಿಕರು ಖಾತಾ ಸೇವೆಗಳಿಗಾಗಿ ಗ್ರಾಮ ಪಂಚಾಯತಿ ಕಚೇರಿಗಳಿಗೆ ಭೇಟಿ ನೀಡಬೇಕಾದ ಅನಿವಾರ್ಯತೆ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.