ಮಂಗಳೂರು: ಜುಲೈ 3ನೇ ವಾರದಲ್ಲಿ ರಾಜ್ಯದ ವಿವಿಧ ಚಾರಣ ಪಥಗಳಿಗೆ ಆನ್ ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಮಂಗಳೂರಿನ ಪಡೀಲ್ ನಲ್ಲಿರುವ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಜನವರಿ 26ರಂದು ಕುಮಾರಪರ್ವತಕ್ಕೆ ಸಾವಿರಾರು ಚಾರಣಿಗರು ಒಂದೇ ದಿನ ಲಗ್ಗೆ ಇಟ್ಟು ಗೊಂದಲ ಉಂಟಾದ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾದ ಚಾರಣಕ್ಕೆ ಈ ಆಗಸ್ಟ್ ನಿಂದ ಮರು ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ಸಾಮಾನ್ಯವಾಗಿ ಮಳೆಗಾಲದಲ್ಲಿ ಯಾವುದೇ ಚಾರಣ ಪಥಕ್ಕೆ ಪ್ರವೇಶ ನಿರಾಕರಿಸಲಾಗುತ್ತದೆ. ಕಾರಣ ಚಾರಣಿಗರು ಅಪಾಯಕ್ಕೆ ಈಡಾಗುವ ಸಂಭವ ಹೆಚ್ಚಾಗಿರುತ್ತದೆ, ಜೊತೆಗೆ ಇಲ್ಲಿನ ಜೀವರಾಶಿ ಮತ್ತು ಮೊಳಕೆಯೊಡೆಯುವ ಸಸ್ಯರಾಶಿಗೂ ತೊಂದರೆ ಆಗುತ್ತದೆ ಹೀಗಾಗಿ ಆಗಸ್ಟ್ ನಿಂದ ಚಾರಣಕ್ಕೆ ಮರು ಚಾಲನೆ ನೀಡುವುದಾಗಿ ತಿಳಿಸಿದರು.

ಈಗಾಗಲೇ ರಾಜ್ಯದ ಹಲವು ಚಾರಣ ಪಥಗಳನ್ನು ಪರಿಸರ ಪ್ರವಾಸೋದ್ಯಮ ವಿಭಾಗ ನಿರ್ವಹಿಸುತ್ತಿದ್ದು, ಆನ್ ಲೈನ್ ಟಿಕೆಟ್ ವ್ಯವಸ್ಥೆ ಮಾಡಿದೆ. ಆದೇ ರೀತಿ ಕುದುರೆಮುಖ ಶಿಖರ, ನೇತ್ರಾವತಿ ಶಿಖರ, ಕೊಡಚಾದ್ರಿ, ಕುರಿಂಜಲ್, ಕಂಗಡಿಕಲ್, ನರಸಿಂಹ ಪರ್ವತಗಳಲ್ಲಿ ಅರಣ್ಯ ಇಲಾಖೆ ಆನ್ ಲೈನ್ ಟಿಕೆಟ್ ವ್ಯವಸ್ಥೆ ಮಾಡಿದೆ. ಇದಲ್ಲದೆ ಎತ್ತಿನಭುಜ ಸೇರಿದಂತೆ ಕೆಲವು ಕಡೆಗಳಲ್ಲಿ ಆನ್ ಲೈನ್ ಟಿಕೆಟ್ ವ್ಯವಸ್ಥೆ ಇರುವುದಿಲ್ಲ. ಈ ಎಲ್ಲ ಚಾರಣ ಪಥಗಳಿಗೂ ಒಂದೇ ವೆಬ್ ಸೈಟ್ ನಲ್ಲಿ ಟಿಕೆಟ್ ಬುಕ್ ಮಾಡಿಸಲು ಅವಕಾಶ ಕಲ್ಪಿಸಲಾಗುವುದು ಎಂದರು.

ಚಾರಣಿಗರ ಸಂಖ್ಯೆಗೆ ಮಿತಿ:

ಕೆಲವು ಪ್ರವಾಸಿ ಸಂಸ್ಥೆಗಳು (ಟೂರ್ ಆಪರೇಟರ್ ಗಳು) ಚಾರಣಪಥಗಳ ಬಗ್ಗೆ ಯುವಜನರಲ್ಲಿ ಅತಿಯಾದ ಆಸಕ್ತಿ ಕೆರಳಿಸುತ್ತಿದ್ದು, ಇದರ ಪರಿಣಾಮವಾಗಿ ಚಾರಣಪಥಗಳಲ್ಲಿ ವಾರಾಂತ್ಯದಲ್ಲಿ ದಟ್ಟಣೆ ಹೆಚ್ಚುತ್ತಿದೆ. ಪ್ಲಾಸ್ಟಿಕ್ ತ್ಯಾಜ್ಯದ ರಾಶಿಯೂ ಸಮಸ್ಯೆಯಾಗಿ ಪರಿಣಮಿಸಿದೆ. ಪ್ರಕೃತಿ, ಪರಿಸರ ಉಳಿಸಲು ಕೆಲವು ಕಠಿಣ ಕ್ರಮ ಅತ್ಯಗತ್ಯ ಎಂದು ಹೇಳಿದರು.

ಪ್ರತಿಯೊಂದು ಚಾರಣ ಪಥದಲ್ಲೂ ಅದರ ವಿಸ್ತಾರ, ಅಲ್ಲಿರುವ ಗೈಡ್ ಮತ್ತು ಇತರ ಮೂಲಭೂತ ಸೌಲಭ್ಯವನ್ನು ಗಮನದಲ್ಲಿಟ್ಟುಕೊಂಡು ಚಾರಣಿಗರ ಸಂಖ್ಯೆಗೆ ಮಿತಿ ವಿಧಿಸಲಾಗುವುದು. ಯಾವುದೇ ಚಾರಣಪಥದಲ್ಲಿ ಸೀಮಿತ ಸಂಖ್ಯೆಗಿಂತ ಹೆಚ್ಚಿನ ಚಾರಣಿಗರಿಗೆ ಅವಕಾಶವಾಗದಂತೆ ತಂತ್ರಜ್ಞಾನದ ಬಳಕೆ ಮಾಡಿಕೊಳ್ಳಲಾಗುವುದು ಎಂದರು.

ಮೂರನೆ ವ್ಯಕ್ತಿ ತಪಾಸಣೆ

ಒಂದೊಮ್ಮೆ ಯಾವುದೇ ಚಾರಣ ಪಥದಲ್ಲಿ ಹೆಚ್ಚಿನ ಸಂಖ್ಯೆಯ ಚಾರಣಿಗರಿಗೆ ಅವಕಾಶ ನೀಡಲಾಗುತ್ತಿದೆ ಎಂದು ದೂರು ಬಂದರೆ, ಈ ಬಗ್ಗೆ ಮೂರನೇ ವ್ಯಕ್ತಿ (ಥರ್ಡ್ ಪಾರ್ಟಿ) ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಒಂದೇ ವೆಬ್ ಸೈಟ್ ನಲ್ಲಿ ವಿವಿಧ ಚಾರಣ ಪಥಗಳಿಗೆ ಮುಂಗಡ ಟಿಕೆಟ್ ಕಾಯ್ದಿರಿಸಲು ಅವಕಾಶ ಇರುವ ಕಾರಣ, ಒಂದು ಚಾರಣ ಪಥದಲ್ಲಿ ಟಿಕೆಟ್ ಸಿಗದಿದ್ದರೆ ಮತ್ತೊಂದಕ್ಕೆ ಟಿಕೆಟ್ ಕಾಯ್ದಿರಿಸುವ ಅವಕಾಶವೂ ಇರುತ್ತದೆ ಎಂದು ಸಚಿವ ಈಶ್ವರ ಖಂಡ್ರೆ ವಿವರಿಸಿದರು.

ಮಂಗಳೂರು ವೃತ್ತವನ್ನು ಅರಣ್ಯ ಒತ್ತುವರಿ ಮುಕ್ತ ವಲಯವಾಗಿ ಘೋಷಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಕಳೆದ ವರ್ಷ ಮಂಗಳೂರು ವೃತ್ತದಲ್ಲಿ ಸುಮಾರು 26.5 ಲಕ್ಷ ಸಸಿಗಳನ್ನು ನೆಡಲಾಗಿತ್ತು, ಈ ಬಾರಿ 12.5 ಲಕ್ಷ ಸಸಿಗಳನ್ನು ನೆಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ, ಇದರ ಜೊತೆಗೆ ಕಳೆದ ವರ್ಷ ನೆಟ್ಟ ಸಸಿಗಳ ಪಾಲನೆ ಪೋಷಣೆ ಮಾಡಲಾಗುವುದು ಎಂದು ಈಶ್ವರ ಖಂಡ್ರೆ ವಿವರಿಸಿದರು.

ನಾಳೆ ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ವನಮಹೋತ್ಸವ ಮತ್ತು ವಿಶ್ವ ಪರಿಸರ ದಿನ ಆಚರಿಸಲಾಗುತ್ತಿದ್ದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಸರ ಮತ್ತು ಜೀವವೈವಿಧ್ಯ ಪ್ರಶಸ್ತಿ ಪ್ರದಾನ ಮಾಡುವರು ಎಂದು ತಿಳಿಸಿದರು.

Watch Video: ‘ವಿಪಕ್ಷ ನಾಯಕ ರಾಹುಲ್ ಗಾಂಧಿ’ ಒಬ್ಬ ‘ಚೈಲ್ಡ್’ ಇದ್ದಂತೆ: ಪ್ರಧಾನಿ ಮೋದಿ | PM Modi

ಹಿಂದೂ ವಿರೋಧಿ ಹೇಳಿಕೆಗೆ ಕ್ಷಮೆಯಾಚಿಸಲು ನಿರಾಕರಿಸಿದ ರಾಹುಲ್ ಗಾಂಧಿ

Share.
Exit mobile version