ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ದಸರಾ ರಜೆ ಅವಧಿಯನ್ನು ವಿಸ್ತರಿಸಿ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದಂತ ಸುರಲ್ಕರ್ ವಿಕಾಸ ಕಿಶೋರ್ ಆದೇಶ ಹೊರಡಿಸಿದ್ದು, ಕರ್ನಾಟಕ ರಾಜ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ, ಸಮೀಕ್ಷೆಯನ್ನು ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸಮಯ ಮರು ನಿಗದಿ ಮಾಡಿ ಆದೇಶಿಸಲಾಗಿತ್ತು ಎಂದಿದ್ದಾರೆ.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ), ಬೆಂಗಳೂರು ರವರು ಸನ್ಮಾನ್ಯ ಮುಖ್ಯ ಮಂತ್ರಿಗಳವರಿಗೆ ನೀಡಿದ ಮನವಿ ಪತ್ರ ದಿ: 06-10-2025 ರಲ್ಲಿ ಮಾನ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಕರ್ನಾಟಕ ಸರ್ಕಾರ, ಇವರು ನಮೂದಿಸಿದ ಟಿಪ್ಪಣಿಯಲ್ಲಿ ಸದರಿ ಮನವಿ ಕುರಿತು ಮಾನ್ಯ ಮುಖ್ಯಮಂತ್ರಿಗಳು ನೀಡುವ ಸೂಚನೆಯಂತೆ ಕ್ರಮವಹಿಸಿ ಎಂದು ನಿರ್ದೇಶಿಸಿರುತ್ತಾರೆ ಎಂದು ತಿಳಿಸಿದ್ದಾರೆ.
ಸದರಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ), ಬೆಂಗಳೂರು ರವರ ಸಮೀಕ್ಷೆಯ ಕಾರ್ಯವನ್ನು ಪೂರ್ಣಗೊಳಿಸಲು ಹೆಚ್ಚಿನ ಕಾಲಾವಕಾಶ ಅವಶ್ಯಕವಿದ್ದು ಈ ಸಮೀಕ್ಷೆಯನ್ನು ಪೂರ್ಣಗೊಳಿಸಲು ಶಾಲೆಗಳಿಗೆ ಹೆಚ್ಚುವರಿ ದಸರಾ ರಜೆಗಳನ್ನು ನೀಡಿ ಸಮೀಕ್ಷೆ ಪೂರ್ಣಗೊಳಿಸಲು ಅವಕಾಶ ಕಲ್ಪಿಸಬೇಕೆಂದು ಮನವಿ ಮಾಡಿರುತ್ತಾರೆ, ಹಾಗೂ ವಿದ್ಯಾರ್ಥಿಗಳಿಗೆ ಮುಂದೆ ವಿಶೇಷ ಬೋಧನಾ ಅವಧಿಗಳನ್ನು ನಡೆಸಲಾಗುವುದು ಎಂದಿರುತ್ತಾರೆ.
ದಿನಾಂಕ: 07-10-2025 ರಂದು ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೀಡಿದ ಸೂಚನೆಗಳ ಹಿನ್ನೆಲೆಯಲ್ಲಿ ಈ ಕೆಳಕಂಡಂತೆ ಕ್ರಮವಹಿಸಲು ತಿಳಿಸಲಾಗಿದೆ.
1. ಬೆಂಗಳೂರು ನಗರ ಮತ್ತು ರಾಜ್ಯದ ಇತರ ಎಲ್ಲ ಜಿಲ್ಲೆಗಳಲ್ಲಿ ನಡೆಯುತ್ತಿರುವ ಸಮೀಕ್ಷೆ ಕಾರ್ಯವನ್ನು ಶಿಕ್ಷಕರು ಪೂರ್ಣಗೊಳಿಸುವುದಕ್ಕೆ ರಾಜ್ಯದ ರಾಜ್ಯ ಪಠ್ಯಕ್ರಮದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ದಸರಾ ರಜೆ ಅವಧಿಯನ್ನು ದಿನಾಂಕ: 18-10-2025 ರ ವರೆಗೆ ವಿಸ್ತರಿಸಲಾಗಿದೆ.
2. ಶಿಕ್ಷಕರು ಸಮೀಕ್ಷೆ ಕಾರ್ಯವನ್ನು ದಿ: 19-10-2025 ರೊಳಗೆ ಪೂರ್ಣಗೊಳಿಸಬೇಕು. ಅವಧಿಯಲ್ಲಿ ಮಕ್ಕಳ ಕಲಿಕೆಗೆ ಉಂಟಾಗುವ ಕೊರತೆಯ ಅವಧಿಯನ್ನು ರಜಾ ದಿನಗಳ ನಂತರ ವಿಶೇಷ ತರಗತಿಗಳನ್ನು ನಡೆಸುವ ಮೂಲಕ ಸರಿದೂಗಿಸುವುದು.
3.ದಿನಾಂಕ 12-010-2025ರಿಂದ ನಡೆಯಲಿರುವ ದ್ವಿತೀಯ ಪಿಯುಸಿ ಮಧ್ಯಾವಧಿ ಪರೀಕ್ಷೆ ಕಾರ್ಯದಲ್ಲಿ ತೊಡಗಿಸಿಕೊಂಡ ಉಪನ್ಯಾಸಕರನ್ನು ಸಮೀಕ್ಷಾ ಕಾರ್ಯದಿಂದ ಬಿಡುಗಡೆಗೆ ತಿಳಿಸುವುದು.
ಈ ಎಲ್ಲಾ ಅಂಶಗಳಂತೆ ರಾಜ್ಯದ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಕಾರ್ಯನಿರ್ವಹಿಸುವುದು. ಇನ್ನೂ ಕಾಲ ಕಾಲಕ್ಕೆ ಸರ್ಕಾರದಿಂದ ನೀಡುವ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದ್ದಾರೆ.
BREAKING: ‘ಜಾಲಿವುಡ್ ಸ್ಟುಡಿಯೋಸ್’ಗೆ ‘ಬೀಗ ಮುದ್ರೆ’: ಖ್ಯಾತ ಕನ್ನಡದ ‘ಬಿಗ್ ಬಾಸ್ ಶೋ’ ಸ್ಥಗಿತ? | BBK12