ಮಂಡ್ಯ: ಕಳೆದ ಹಲವು ತಿಂಗಳಿಂದ ವೇತನ ಇಲ್ಲದೆ ಸಂಕಷ್ಟದಲ್ಲಿ ಸಿಲುಕಿರುವ ನಗರದ ಐತಿಹಾಸಿಕ ಮೈಷುಗರ್ ಶಾಲೆಯ ಶಿಕ್ಷಕರ ನೆರವಿಗೆ ಧಾವಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಲೋಕಸಭೆ ಸದಸ್ಯನಾಗಿ ತಮ್ಮ ಈವರೆಗಿನ ವೇತನವನ್ನು ಶಿಕ್ಷಕರ ವೇತನ ಪಾವತಿಸಲು ಕೊಡುವುದಾಗಿ ಘೋಷಿಸಿದರು.
ಮೈಷುಗರ್ ಶಾಲೆಯ ಆವರಣದಲ್ಲಿ ಗುರುವಾರ ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ಸಿಎಸ್ ಆರ್ ನಿಧಿಯಿಂದ ಅತ್ಯಾಧುನಿಕ ಶಾಲಾ ವಾಹನವನ್ನು ಮೈಷುಗರ್ ಶಾಲೆಯ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಿದ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವರು ಮಾತನಾಡಿದರು.
ಶಿಕ್ಷಕರು ವೇತನವಿಲ್ಲದೆ ಕೆಲಸ ಮಾಡುತ್ತಿರುವುದು ಬಹಳ ನೋವಿನ ವಿಚಾರ. ಈವರೆಗೂ ಸುಮಾರು ₹20 ಲಕ್ಷ ಬಾಕಿ ವೇತನವಿದೆ. ಹೀಗಾಗಿ ನನ್ನ ವೇತನದ ಮೊತ್ತವನ್ನೇ ದೇಣಿಗೆಯಾಗಿ ನೀಡುತ್ತಿದ್ದೇನೆ. ಅನೇಕ ತಿಂಗಳಿಂದ ಶಿಕ್ಷಕರಿಗೆ ವೇತನ ನೀಡದಿರುವ ವ್ಯಕ್ತಿಗಳು ನನ್ನ ಬಗ್ಗೆ ಲಘುವಾಗಿ ಮಾತನಾಡುವುದು ಬೇಡ. ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡುವ ಅಗತ್ಯವಿಲ್ಲ. ಮಾಧ್ಯಮಗಳ ಮುಂದೆಯೂ ಮಾತನಾಡುವ ಅಗತ್ಯವಿಲ್ಲ. ನಾನು ಈ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾಗ 13 ತಿಂಗಳಿಂದ ಶಿಕ್ಷಕರಿಗೆ ವೇತನ ನೀಡಲಾಗಿಲ್ಲ ಎನ್ನುವ ಮಾಹಿತಿ ಸಿಕ್ಕಿತು. ಸಿಎಸ್ ಆರ್ ನಿಧಿಯಿಂದ ವೇತನ ಕೊಡುವ ಅವಕಾಶ ಇಲ್ಲ ಎಂದು ಸಚಿವರು ಮಾಹಿತಿ ನೀಡಿದರು.
ನನ್ನ ಆರೋಗ್ಯದ ಕಾರಣದಿಂದ ಜಿಲ್ಲೆಗೆ ಭೇಟಿ ನೀಡುವುದು ಕೊಂಚ ತಡವಾಯಿತು. ಆದರೂ ನನ್ನ ಕಚೇರಿಯ ತಂಡವನ್ನು ಕಳಿಸಿ ಶಾಲೆಯಲ್ಲಿ ಆಗಬೇಕಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಹಾಗೂ ಶಿಕ್ಷಕರ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಳ್ಳುವಂತೆ ಸೂಚನೆ ನೀಡಿದ್ದೆ. ಅದರಂತೆ ನನ್ನ ಕಚೇರಿ ಸಿಬ್ಬಂದಿ ಶಾಲೆಯ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡಿದ್ದಾರೆ. ಅದರ ಅನ್ವಯ ₹10 ಕೋಟಿ ಅಂದಾಜು ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ತೀರ್ಮಾನ ಮಾಡಲಾಗಿದೆ. ಯಾವ ಯಾವ ಕಾಮಗಾರಿಗೆ ಎಷ್ಟು ಮೊತ್ತ ವೆಚ್ಚ ಮಾಡಲಾಗುವುದು ಎಂಬ ಬಗ್ಗೆ ನಿರ್ಧಾರ ಮಾಡಲಾಗುವುದು. ಈ ಬಗ್ಗೆ ಜಿಲ್ಲಾಡಳಿತ ಮತ್ತು ಶಾಲೆಯ ಟ್ರಸ್ಟ್ ಸದಸ್ಯರ ಜತೆ ಚರ್ಚೆ ನಡೆಸಲಾಗಿದೆ. ಈ ₹10 ಕೋಟಿ ಹಣವನ್ನು ಅದಷ್ಟು ಬೇಗ ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಸಚಿವರು ಘೋಷಿಸಿದರು.
ಮೈಷುಗರ್ ಶಾಲೆಯ ಅಭಿವೃದ್ಧಿ ಬಗ್ಗೆ ಶಾಲೆಯ ಟ್ರಸ್ಟ್ ನವರು ಈವರೆಗೂ ನನ್ನೊಂದಿಗೆ ಕೊನೇಪಕ್ಷ ಒಂದು ಸಭೆಯನ್ನು ನಡೆಸಿಲ್ಲ. ಆ ಟ್ರಸ್ಟ್ ನಲ್ಲಿ ಯಾರು ಯಾರಿದ್ದಾರೆ ಅನ್ನುವ ಮಾಹಿತಿ ಕೂಡ ನನಗೆ ಇಲ್ಲ. ಸಂಸದನಾಗಿ ನಾನು ಕೂಡ ಒಬ್ಬ ಟ್ರಸ್ಟಿ ಇದ್ದೇನೆ. ಆದರೂ ಸಭೆ ಕರೆದಿಲ್ಲ ಯಾಕೆ? ಶಿಕ್ಷಕರಿಗೆ ಇಷ್ಟು ದೊಡ್ಡ ಮೊತ್ತದ ವೇತನ ಬಾಕಿ ಇಟ್ಟುಕೊಂಡು ಕೆಲವರು ನನ್ನ ಬಗ್ಗೆ ಕೆಟ್ಟದ್ದಾಗಿ ಮಾತನಾಡುತ್ತಿದ್ದಾರೆ. ಅವರಿಗೆ ಯಾವ ನೈತಿಕತೆ ಇದೆ? ಎಂದು ಸಚಿವರು ಕಿಡಿಕಾರಿದರು.
ನನ್ನ ವೇತನದ ಹಣವನ್ನು ಶಿಕ್ಷಕರಿಗೆ ಕೊಡುತ್ತಿದ್ದೇನೆ. ಇದು ಪಾಪದ ಹಣವಲ್ಲ. ನಾನೇನು ಕಮಿಶನ್ ತೆಗೆದುಕೊಂಡಿಲ್ಲ. ವರ್ಗಾವಣೆಯಿಂದ ಹೊಡೆದುಕೊಂಡ ಹಣವಲ್ಲ. ನನ್ನ ಬಗ್ಗೆ ಮಾತನಾಡುವಾಗ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು. ನನ್ನ ಬಗ್ಗೆ ಯಾರೇ ಏನೇ ಹೇಳಿಕೆ ಕೊಟ್ಟರು ಕೂಡ ನಾನು ಗಂಭೀರವಾಗಿ ಪರಿಗಣಿಸುತ್ತೇನೆ ಎಂಬುದು ಗೊತ್ತಿಲ್ಲವೇ? ನನ್ನ ಕೈಯಲ್ಲಿ ಆಗುವಷ್ಟು ಅಭಿವೃದ್ಧಿಪರ ಕೆಲಸಗಳನ್ನು ಮಾಡುತ್ತಿದ್ದೇನೆ ಎಂದು ಕೇಂದ್ರ ಸಚಿವರು ಖಾರವಾಗಿ ನುಡಿದರು.
ಶಾಲೆಯ ಅಭಿವೃದ್ಧಿ ಬಗ್ಗೆ ನನಗೂ ಕಾಳಜಿ ಇದೆ. ಟ್ರಸ್ಟ್ ನವರು ಜವಾಬ್ದಾರಿ ತೆಗೆದುಕೊಂಡರೆ ಹಂತ ಹಂತವಾಗಿ ಸರ್ವ ರೀತಿಯಲ್ಲಿಯೂ ಶಾಲೆಯ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ. ಶಾಲೆಯ ಬಗ್ಗೆ ನಾನು ಟ್ರಸ್ಟ್ ಸದಸ್ಯರನ್ನು ಬಿಟ್ಟು ಬೇರೆಯವರ ಜತೆ ಚರ್ಚಿಸಲು ತಯಾರಿಲ್ಲ. ಏಕೆಂದರೆ, ಇಂತಹ ಉತ್ತಮ ಶಾಲೆಯ ವಿಶ್ವದಲ್ಲಿ ರಾಜಕೀಯ ತರೋದು ಅನಗತ್ಯ ಎಂದು ಕೇಂದ್ರ ಸಚಿವರು ನೇರವಾಗಿ ಹೇಳಿದರು.
ಕಾರ್ಯಕ್ರದಲ್ಲಿ ಶಾಲೆಯ ಮಕ್ಕಳ ಜೊತೆಗೆ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು, ಮಾಜಿ ಶಾಸಕರಾದ ಕೆ.ಟಿ. ಶ್ರೀಕಂಠೇಗೌಡ, ಶಿವಕುಮಾರ್ ಹಾಗೂ ಶಾಲಾ ಸಿಬ್ಬಂದಿ, ಟ್ರಸ್ಟ್ ಸದಸ್ಯರು ಹಾಗೂ ಜೆಡಿಎಸ್ ನಾಯಕರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು
ಶಂಕರಪುರ ಸರಕಾರಿ ಶಾಲೆ ಅಭಿವೃದ್ಧಿಗೆ ₹ 1.4 ಕೋಟಿ:
ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮಂಡ್ಯ ನಗರದ ಶಂಕರಪುರ ಸರಕಾರಿ ಶಾಲೆ ಅಭಿವೃದ್ಧಿಗೆ ಕೊನೆಗೂ ಸಮಯ ಕೂಡಿ ಬಂದಿದೆ.
ಈ ಕುರಿತು ಮಾಧ್ಯಮಗಳಲ್ಲಿ ಪ್ರಸಾರವಾದ ವರದಿಗಳನ್ನು ಗಮನಿಸಿ ಗುರುವಾರ ಶಾಲೆಗೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಸುಮಾರು ₹1.4 ಕೋಟಿಗೂ ಅಧಿಕ ವೆಚ್ಚದಲ್ಲಿ ಶಾಲೆಯ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.
ಶಾಲೆಯಲ್ಲಿ ಆರು ಹೊಸ ಕೊಠಡಿ ಹಾಗೂ ಎಂಟು ಶೌಚಾಲಯಗಳನ್ನು ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಅದಷ್ಟು ಶೀಘ್ರವೇ ಹಣವನ್ನು ಬಿಡುಗಡೆ ಮಾಡಲಾಗುವುದು. ಹಾಗೆಯೇ ಹಳೆಯ ಕಟ್ಟಡವನ್ನು ನವೀಕರಣ ಮಾಡಲಾಗುವುದು ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು.
ಅಲ್ಲದೆ, ತುರ್ತು ದುರಸ್ತಿ ಕಾರ್ಯ ಕೈಗೊಳ್ಳಲು ಈಗಾಗಲೇ ಐದು ಕೋಟಿ ಮೊತ್ತವನ್ನು ಶಾಲೆಗೆ ಬಿಡುಗಡೆ ಮಾಡಲಾಗಿದೆ. ನಗರದ ಪ್ರಮುಖ ಶಾಲೆಗಳಲ್ಲಿ ಒಂದಾಗಿರುವ ಈ ಶಾಲೆಯ ನವೀಕರಣವನ್ನು ಸಮಗ್ರವಾಗಿ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಶಾಲಾ ಸಿಬ್ಬಂದಿ ಹಾಗೂ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ; ಗಿರೀಶ್ ರಾಜ್, ಮಂಡ್ಯ
ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಸ್ಥಳ ಕೇಳಿ ಮುಖ್ಯಮಂತ್ರಿಗೆ ಪತ್ರ ಬರೆದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ








