ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಜೊತೆಗೆ ರಾಜ್ಯ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಈ ಸಭೆಯ ಪ್ರಮುಖ ಮುಖ್ಯಾಂಶಗಳನ್ನು ಮುಂದೆ ಓದಿ.
1. ಜಿಲ್ಲೆಗಳಲ್ಲಿ DC, CEO ಮತ್ತು SP ಈ ಮೂರು ಹುದ್ದೆಗಳು ಅತ್ಯಂತ ಮುಖ್ಯವಾದ ಹುದ್ದೆಗಳು. ಈ ಅಧಿಕಾರಿಗಳು ತಮ್ಮ ಇಗೊ (Ego) ಬಿಟ್ಟು ಸರ್ಕಾರ ಮತ್ತು ಜನರ ನಡುವೆ ಸೇತುವೆಯಂತೆ ಕೆಲಸ ಮಾಡಬೇಕು. ಈ ಮೂವರ ನಡುವೆ ಸಮನ್ವಯತೆ ಇದ್ದರೆ ಮಾತ್ರ ಜಿಲ್ಲೆಯ ಅಭಿವೃದ್ಧಿ ಸಾಧ್ಯ.
2. ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಬಡವರು, ಶೋಷಿತರು, ರೈತರು, ಮಹಿಳೆಯರು ತಮ್ಮ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಬರುತ್ತಾರೆ. ಇಂತಹ ದುರ್ಬಲ ವರ್ಗದವರ ಬಗ್ಗೆ ಡಿಸಿ, ಸಿಇಒಗಳು ಸಹಾನುಭೂತಿಯಿಂದ ಅವರ ಸಮಸ್ಯೆಗಳನ್ನು ಆಲಿಸಿ ಅದನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲು ಸೂಚನೆ ನೀಡಿದ್ದೇನೆ.
3. ಕಾನೂನು ಸುವ್ಯವಸ್ಥೆಗೂ, ಅಭಿವೃದ್ಧಿಗೂ ನೇರ ಸಂಬಂಧವಿದೆ. ಎಲ್ಲಾ ಜಿಲ್ಲೆಗಳಲ್ಲಿಯೂ ಕಾನೂನು, ವ್ಯವಸ್ಥೆ ಸರಿಯಾಗಿರಬೇಕು. ಸಂವಿಧಾನದ ಆಶಯ ಮತ್ತು ಧ್ಯೇಯೋದ್ದೇಶಗಳಿಗೆ ಭಂಗ ತರುವ ಶಕ್ತಿಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಲು ಡಿಸಿ ಮತ್ತು ಎಸ್ಪಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ.
4. ದ್ವೇಷ ಭಾಷಣದ ಬಗ್ಗೆ ಸುಪ್ರೀಂಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದ್ದರೂ, ಯಾಕೆ ಜಿಲ್ಲೆಗಳಲ್ಲಿ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ? ತಕ್ಷಣ ದೂರು ದಾಖಲಿಸಿ ಕಾನೂನು ಪ್ರಕಾರ ಕ್ರಮ ಜರುಗಿಸಬೇಕು. ಇದೇ ರೀತಿ ಸರ್ಕಾರದ ಯೋಜನೆಗಳ ಬಗ್ಗೆ, ಕೈಗೊಂಡಿರುವ ಕ್ರಮಗಳ ಬಗ್ಗೆ ಸುಳ್ಳು ಸುದ್ದಿಗಳನ್ನು, ಮಾಹಿತಿಗಳನ್ನು ಹರಡುವ ಪ್ರಕರಣಗಳಲ್ಲಿ ತಕ್ಷಣ ಕ್ರಮ ಕೈಗೊಳ್ಳಲು ಸ್ಪಷ್ಟ ಸೂಚನೆ ನೀಡಲಾಗಿದೆ.
5. DC ಮತ್ತು CEO ಗಳು ಕಲ್ಯಾಣ ಕಾರ್ಯಕ್ರಮಗಳ ಜೊತೆಗೆ, ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಬೇಕು. ಆಯಾ ಜಿಲ್ಲೆಯ ಭೌಗೋಳಿಕ ಹಿನ್ನೆಲೆಯನ್ನು ಗಮನದಲ್ಲಿರಿಸಿಕೊಂಡು ಭವಿಷ್ಯದಲ್ಲಿ ಜಿಲ್ಲೆಯನ್ನು ಕಟ್ಟಿ ಮುನ್ನಡೆಸುವುದು ಹೇಗೆ ಎಂಬ ಪ್ಲಾನ್ ಸಿದ್ಧಪಡಿಸಿಕೊಂಡು ಕೆಲಸ ಮಾಡಲು ಸೂಚನೆ ನೀಡಿದ್ದೇವೆ.
6. ಜನರ ಆರೋಗ್ಯ, ಶಿಕ್ಷಣ, ಕುಡಿಯುವ ನೀರು, ರೋಗ ಮುಕ್ತ ವಾತಾವರಣ ನಿರ್ಮಾಣ, ಮೂಲ ಭೂತ ಸೌಕರ್ಯಗಳಿಗೆ ಆದ್ಯತೆ ನೀಡಬೇಕೆಂದು ಸೂಚಿಸಲಾಗಿದೆ
7. ನಮ್ಮ ರಾಜ್ಯದಲ್ಲಿ ಗ್ರಾಮವು ಆಡಳಿತದ ಮೂಲ ಘಟಕ. ಕಂದಾಯ, ಗ್ರಾಮೀಣಾಭಿವೃದ್ಧಿ ಇಲಾಖೆಗಳಲ್ಲಿ ಪಿಡಿಓ ಮತ್ತು ವಿಲೇಜ್ ಅಕೌಂಟೆಂಟ್ ಗಳು ಸರಿಯಾಗಿ ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಶಾಂತಿ ಮತ್ತು ಸುವ್ಯವಸ್ಥೆ ಸೇರಿದಂತೆ ಹಲವು ಸಮಸ್ಯೆಗಳನ್ನು ಪರಿಹರಿಸಬಹುದಾಗಿದೆ. ಈ ನಿಟ್ಟಿನಲ್ಲಿ ಕ್ರಮವಹಿಸಬೇಕೆಂದು ಸೂಚಿಸಿದ್ದೇನೆ.
8. ರಾಜ್ಯದಲ್ಲಿ ಈ ಬಾರಿ ಮುಂಗಾರು ಅವಧಿಗೆ ಮುನ್ನವೇ ಕ್ರಿಯಾಶೀಲವಾಗಿದೆ. ಎಲ್ಲಾ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ. ರಾಜ್ಯದಲ್ಲಿ ಕಳೆದ ವರ್ಷ ದಾಖಲೆ ಮಟ್ಟದಲ್ಲಿ ಆಹಾರ ಧಾನ್ಯಗಳ ಉತ್ಪಾದನೆಯಾಗಿದೆ. ಈ ವರ್ಷ ಕೂಡ ಕೃಷಿ ಚಟುವಟಿಕೆಗಳು ಚೆನ್ನಾಗಿ ಆರಂಭವಾಗಿದೆ. ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಯಾವುದೇ ಕಾರಣಕ್ಕೂ ಕೊರತೆಯಾಗದಂತೆ ದಾಸ್ತಾನು ಮಾಡಿ ವಿತರಿಸಲು ಸೂಚನೆ ನೀಡಿದ್ದೇನೆ.
9. ರಾಜ್ಯದಲ್ಲಿ ನಾವೆಲ್ಲರೂ ಗಾಬರಿ ಪಡಬೇಕಾದ ಸಂಗತಿಯಿದೆ. ಏಕ ಬೆಳೆ ಪದ್ಧತಿ, ಅತಿಯಾದ ರಾಸಾಯನಿಕಗಳ ಬಳಕೆ ಮುಂತಾದ ಕಾರಣದಿಂದ ರಾಜ್ಯದ ಶೇ. 43 ಕ್ಕೂ ಹೆಚ್ಚಿನ ಕೃಷಿ ಭೂಮಿಯಲ್ಲಿ ಸಾವಯವ ಇಂಗಾಲ ಕಡಿಮೆಯಾಗಿದೆ. ಇದರಿಂದ ಭೂಮಿ ವೇಗವಾಗಿ ಮರುಭೂಮಿಯಾಗುತ್ತಿದೆ. ಕೃತಕ ರಸಗೊಬ್ಬರ ಬಳಕೆ, ರಾಸಾಯನಿಕಗಳ ಬಳಕೆ ಹೆಚ್ಚಾಗುತ್ತದೆ. ಉತ್ಪಾದನೆ ಕಡಿಮೆಯಾಗುತ್ತದೆ. ಇದರಿಂದ ಹಲವು ಸಮಸ್ಯೆಗಳುಂಟಾಗುತ್ತವೆ. ಇದನ್ನು ನಿಭಾಯಿಸಲು, ಮಣ್ಣನ್ನು ಮತ್ತೆ ಜೀವಂತಗೊಳಿಸಲು ಆಕ್ಷನ್ ಪ್ಲಾನ್ ಸಿದ್ಧ ಪಡಿಸಲು ಸೂಚಿಸಲಾಗಿದೆ. ಈ ಕುರಿತು ರೈತರಿಗೆ ಶಿಕ್ಷಣ ನೀಡಲು ಸೂಚಿಸಲಾಗಿದೆ.
10. ಹಿಂದಿನ ವರ್ಷಗಳಿಗೆ ಹೋಲಿಸಿದರೆ ರೈತರ ಆತ್ಮಹತ್ಯೆಗಳು ಕಡಿಮೆಯಾಗಿವೆ. ನಮ್ಮ ಉದ್ದೇಶ ಒಂದೂ ಆತ್ಮಹತ್ಯೆ ಯಾಗದಂತೆ ಗಮನ ಹರಿಸಬೇಕು. ಇದಕ್ಕೋಸ್ಕರ ಈಗಾಗಲೆ ಗ್ರಾಮ ಮಟ್ಟದಲ್ಲಿ ತಂಡಗಳನ್ನು ಮಾಡಲಾಗಿದೆ. ಈ ತಂಡಗಳನ್ನು ಇನ್ನಷ್ಟು ಆಕ್ಟಿವೇಟ್ ಮಾಡಬೇಕು. ಖಾಸಗಿ ಲೇವಾದೇವಿಗಾರರನ್ನು, ಮೈಕ್ರೋ ಫೈನಾನ್ಸ್ ಗಳನ್ನು ನಿಯಂತ್ರಿಸಲು ಜಿಲ್ಲಾ ಮಟ್ಟದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
11. ರಾಜ್ಯದಲ್ಲಿ ಬಾಲ್ಯ ವಿವಾಹ, ಬಾಲ ಗರ್ಭಿಣಿಯರು, ಪೋಕ್ಸೊ ಪ್ರಕರಣಗಳು, ಗರ್ಭಿಣಿಯರು, ಮುಟ್ಟಾದ ಹೆಣ್ಣು ಮಕ್ಕಳನ್ನು ಮನೆಯಿಂದ ಹಾಕುವುದು, ಬಾಲ ಕಾರ್ಮಿಕರ ಸಮಸ್ಯೆ ಮುಂತಾದವುಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಬೇಕು. ಒಂದೂ ಪ್ರಕರಣ ನಡೆಯದಂತೆ ಕ್ರಮವಹಿಸಬೇಕೆಂದು ಸೂಚಿಸಲಾಗಿದೆ. ಇಂತಹ ಪ್ರಕರಣಗಳು ನಡೆದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಶಿಸ್ತು ಕ್ರಮ ಜರುಗಿಸಲು ಸೂಚನೆ ನೀಡಿದ್ದೇನೆ.
12. ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳು ಕೇವಲ ಕಚೇರಿಯಲ್ಲಿ ಮಾತ್ರ ಕಾರ್ಯನಿರ್ವಹಿಸದೆ, ಶಾಲೆ, ಕಾಲೇಜು, ಆಸ್ಪತ್ರೆ, ವಸತಿ ಶಾಲೆಗಳಿಗೆ ನಿರಂತರ ಭೇಟಿ ನೀಡಿ ಪರಿಶೀಲಿಸಲು ಸೂಚನೆ ನೀಡಿದ್ದೇನೆ. ಯಾವುದೇ ಮುನ್ಸೂಚನೆ ಇಲ್ಲದೇ ಇಂತಹ ಭೇಟಿಯನ್ನು ಪ್ರತಿ ತಿಂಗಳು ಕಡ್ಡಾಯವಾಗಿ ನಡೆಸಬೇಕೆಂದು ಸೂಚಿಸಲಾಗಿದೆ.
13. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನಾವು ಕಾಟಾಚಾರಕ್ಕೆ ನೇಮಕ ಮಾಡಿಲ್ಲ. ಅವರು ತಿಂಗಳಲ್ಲಿ ಕನಿಷ್ಟ ಎರಡು ಬಾರಿ ಆಯಾ ಜಿಲ್ಲೆಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಬೇಕು. ಅದರೊಂದಿಗೆ ಶಾಲೆ, ಹಾಸ್ಟೆಲ್, ಆಸ್ಪತ್ರೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ವರದಿಯನ್ನು ಮುಖ್ಯ ಕಾರ್ಯದರ್ಶಿಯವರಿಗೆ ಸಲ್ಲಿಸಬೇಕು ಎಂದು ನಿರ್ದೇಶನ ನೀಡಲಾಗಿದೆ.
14. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಗಳಲ್ಲಿ ಕೆಲವು ಜಿಲ್ಲೆಗಳ ಫಲಿತಾಂಶ ಬಹಳ ಕಡಿಮೆ ಇದೆ. ಶೇ. 60 ಕ್ಕಿಂತ ಕಡಿಮೆ ಉತ್ತೀರ್ಣರಾಗಿರುವ ಜಿಲ್ಲೆಗಳ ಡಿಡಿಪಿಐ/ ಡಿಡಿಪಿಯು/ ಬಿಇಓಗಳಿಗೆ ನೋಟೀಸು ಜಾರಿ ಮಾಡಿ ಶಿಸ್ತು ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದೇನೆ.
15. ಸರ್ಕಾರಿ ಶಾಲೆಗಳಿಗೆ ಸೇರುವ ಮಕ್ಕಳ ಪ್ರಮಾಣ ಕಡಿಮೆಯಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ವರ್ಷ ವರ್ಷವೂ ಒಂದೂವರೆ ಲಕ್ಷದಿಂದ ಎರಡು ಲಕ್ಷದಷ್ಟು ದಾಖಲಾತಿ ಕಡಿಮೆ ಆಗುತ್ತಿದ್ದು, ಇದನ್ನು ತಡೆಯಲು ಪೋಷಕರೊಂದಿಗೆ ನಿಯಮಿತ ಸಭೆಗಳನ್ನು ನಡೆಸಬೇಕು. ಬಿಇಒ ಗಳು ನಿಯಮಿತವಾಗಿ ಶಾಲೆಗಳಿಗೆ ಭೇಟಿ ನೀಡಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿ ಕ್ರಮಕೈಗೊಳ್ಳುವಂತೆ ಸೂಚಿಸಿದೆ.
16. ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ವಾಸವಿರಬೇಕು. ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿ ಲಭ್ಯವಿದ್ದು, ಜನರಿಗೆ ಲಭ್ಯವಿರಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.
17. ಕರ್ತವ್ಯ ನಿರ್ಲಕ್ಷ್ಯಕ್ಕೆ ಸಂಬಂಧಿಸಿದಂತೆ ಯಾವುದೇ ದೂರುಗಳು ಬಾರದಂತೆ ಕಾರ್ಯನಿರ್ವಹಿಸಲು ಸೂಚನೆ ನೀಡಿದ್ದೇನೆ.
18. ಈ ಬಾರಿ ಮಳೆಗಾಲದ ಆರಂಭದಲ್ಲೇ ಪ್ರವಾಹ ಪರಿಸ್ಥಿತಿ, ಗುಡ್ಡ ಕುಸಿತ ಪ್ರಕರಣಗಳು ವರದಿಯಾಗುತ್ತಿವೆ. ಇಂತಹ ಪ್ರಕರಣಗಳಲ್ಲಿ ಸಾವು ನೋವು ಸಂಭವಿಸದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು. ಮನೆ ಹಾನಿ, ಬೆಳೆಹಾನಿ, ಜೀವ ಹಾನಿ ಪ್ರಕರಣಗಳಲ್ಲಿ ಕಡ್ಡಾಯವಾಗಿ ಸ್ಥಳಕ್ಕೆ ಭೇಟಿ ನೀಡಿ ತುರ್ತಾಗಿ ಪರಿಹಾರ ವಿತರಿಸಲು ಸೂಚನೆ ನೀಡಲಾಗಿದೆ.
19. ರಾಜ್ಯದ 28 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಮಳೆ ಹಾನಿಗೆ ಪರಿಹಾರ ಒದಗಿಸಲು ಯಾವುದೇ ಅನುದಾನದ ಕೊರತೆಯಿಲ್ಲ. ಜಿಲ್ಲೆಗಳಲ್ಲಿ ಎಸ್.ಡಿ.ಆರ್.ಎಫ್ ಅಡಿ ಒಟ್ಟಾರೆಯಾಗಿ ಒಂದು ಸಾವಿರ ಕೋಟಿಗಿಂತಲೂ ಹೆಚ್ಚು ಹಣ ಲಭ್ಯವಿದ್ದು, ಅತಿವೃಷ್ಟಿಯಿಂದ ಮನೆಗಳಿಗೆ ಹಾನಿ ಉಂಟಾದರೆ ಮಾರ್ಗಸೂಚಿಯಂತೆ ಪರಿಹಾರ ಕಾರ್ಯ ನಡೆಸಲು ಸೂಚಿಸಲಾಗಿದೆ.
20. ಬೆಂಗಳೂರು ನಗರದಲ್ಲಿ ಪ್ರವಾಹ ತಪ್ಪಿಸಲು ಅಧಿಕಾರಿಗಳು ಇನ್ನೂ ಹೆಚ್ಚು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಲಾಗಿದೆ.
21. ಪ್ರತಿ ತಿಂಗಳು ಜನಸ್ಪಂದನ ಕಾರ್ಯಕ್ರಮ ನಡೆಸಬೇಕು. ಕಾರ್ಯಕ್ರಮದಲ್ಲಿ ಸ್ವೀಕೃತವಾಗುವ ಅರ್ಜಿಗಳನ್ನು ಆದ್ಯತೆ ಮೇರೆಗೆ ಬಗೆಹರಿಸಬೇಕು ಎಂದು ಸೂಚನೆ ನೀಡಲಾಗಿದೆ.
22. ಆರು ತಿಂಗಳ ಒಳಗಾಗಿ ಕಂದಾಯ ಗ್ರಾಮಗಳನ್ನು ಘೋಷಿಸುವ ಕಾರ್ಯ ಪೂರ್ಣಗೊಳಿಸಲು ಸೂಚಿಸಿದ್ದು, ಬಗರ್ ಹುಕುಂ ಅರ್ಜಿಗಳ ಶೀಘ್ರ ವಿಲೇವಾರಿ ಹಾಗೂ ಪೋಡಿಮುಕ್ತ ಅಭಿಯಾನದಲ್ಲಿ ಶೇ. 100 ರಷ್ಟು ಪ್ರಗತಿ ಸಾಧಿಸಲು ಸೂಚಿಸಲಾಯಿತು.
23. ಹಾಡಿಗಳಲ್ಲಿ ಶಾಲೆ, ರಸ್ತೆ, ಆಸ್ಪತ್ರೆಯಂತಹ ಮೂಲಸೌಲಭ್ಯ ಒದಗಿಸುವುದು ಸರ್ಕಾರದ ಕರ್ತವ್ಯವಾಗಿದ್ದು, ಜಿಲ್ಲಾಧಿಕಾರಿಗಳು, ಸಿಇಒಗಳು ಇಂತಹ ಹಾಡಿಗಳಿಗೆ ನಿರಂತರ ಭೇಟಿ ನೀಡಬೇಕು ಎಂದು ಸೂಚಿಸಲಾಗಿದೆ.
24. ಅರಣ್ಯ ಹಕ್ಕುಗಳಿಗಾಗಿ 2,95,176 ಅರ್ಜಿಗಳು ಸಲ್ಲಿಕೆಯಾಗಿದ್ದು, 16,700 ಮಾತ್ರ ಅರಣ್ಯ ಹಕ್ಕುಪತ್ರ ಒದಗಿಸಲಾಗಿದೆ. 2,61,762 ಅರ್ಜಿಗಳನ್ನು ತಿರಸ್ಕರಿಸಲಾಗಿದ್ದು, ಸಕಾರಣವಿಲ್ಲದೇ ತಿರಸ್ಕರಿಸಲಾಗಿರುವ ಅರ್ಜಿಗಳನ್ನು ಮರುಪರಿಶೀಲನೆ ನಡೆಸಬೇಕೆಂದು ತಿಳಿಸಲಾಯಿತು.
25. ಜಿಲ್ಲಾಧಿಕಾರಿ, ತಹಶೀಲ್ದಾರ್, ಎಸಿ ಕೋರ್ಟ್ ಗಳಲ್ಲಿ ಪ್ರಕರಣಗಳನ್ನು ಸರಿಯಾಗಿ ವಿಲೇವಾರಿ ಮಾಡಬೇಕು. ಮೆರಿಟ್ ಮೇಲೆ ತೀರ್ಮಾನ ಮಾಡಬೇಕು. ಪ್ರಕರಣಗಳನ್ನು ಮುಂದಕ್ಕೆ ಹಾಕುವ ಪ್ರವೃತ್ತಿ ಇರಬಾರದೆಂದು ತಿಳಿಸಲಾಗಿದೆ.
26. ರಾಜ್ಯದಲ್ಲಿ ಈ ವರ್ಷ 1395 ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಸರಿಯಾದ ಶಿಕ್ಷೆಯಾಗುವಂತೆ ನೋಡಿಕೊಳ್ಳಲು ಸೂಚಿಸಲಾಯಿತು.
27. ಕಂದಾಯ ಇಲಾಖೆಯಲ್ಲಿ ಕಂದಾಯ ಗ್ರಾಮಗಳ ಸಮಸ್ಯೆಯನ್ನು ಬೇಗ ಮುಕ್ತಾಯ ಮಾಡಬೇಕು. ಬಗರ್ ಹುಕುಂ ಸಭೆಗಳನ್ನು ಮಾಡಿ ಹಕ್ಕು ಪತ್ರಗಳನ್ನು ವಿತರಿಸಬೇಕು. ತಹಶೀಲ್ದಾರ್, ಎಸಿ ಮತ್ತು ಡಿಸಿ ಕೋರ್ಟುಗಳಲ್ಲಿನ ಪ್ರಕರಣಗಳನ್ನು ಗುಣಾತ್ಮಕವಾಗಿ, ಪರಿಣಾಮಕಾರಿಯಾಗಿ, ಕಾಲಮಿತಿಯೊಳಗೆ ಇತ್ಯರ್ಥ ಮಾಡಬೇಕು.
28. ಸರ್ಕಾರದ ವಿವಿಧ ಉದ್ದೇಶಗಳಿಗೆ ಮಖ್ಯವಾಗಿ ಶಾಲೆ, ಆಸ್ಪತ್ರೆ, ಅಂಗನವಾಡಿ, ಹಾಸ್ಟೆಲ್ ಸೇರಿದಂತೆ ವಿವಿಧ ಉದ್ದೇಶಗಳಿಗೆ ಜಮೀನುಗಳನ್ನು ಕಾಯ್ದಿರಿಸಬೇಕೆಂದು ಸೂಚಿಸಲಾಗಿದೆ. ಸ್ಮಶಾನ, ಕಬರಸ್ತಾನಗಳಿಗೆ ಜಮೀನು ಗುರುತಿಸಲು ಸೂಚಿಸಲಾಗಿದೆ.
29. ನಗರಾಭಿವೃದ್ಧಿ ಇಲಾಖೆಯಡಿ ಒಟ್ಟು 46,85,107 ಎ-ಖಾತಾ ಸ್ವತ್ತುಗಳನ್ನು ಗುರುತಿಸಲಾಗಿದ್ದು, 21,18,459 ಸ್ವತ್ತುಗಳಿಗೆ ಇ-ಖಾತಾ ನೀಡಲಾಗಿದೆ. 9,93,342 ಅನಧಿಕೃತ ಬಿ-ಖಾತಾ ಸ್ವತ್ತುಗಳನ್ನು ಗುರುತಿಸಲಾಗಿದ್ದು, ಇದುವರೆಗೆ 2,21,691 ಬಿ-ಖಾತಾ ನೀಡಲಾಗಿದೆ. ಎಲ್ಲಾ ಸ್ವತ್ತುಗಳಿಗೆ ನಿಯಮಾನುಸಾರ ಖಾತಾ ಒದಗಿಸಿ ತೆರಿಗೆ ವ್ಯಾಪ್ತಿಗೆ ತರಲು ಸೂಚಿಸಲಾಗಿದೆ.
30. ಯುವನಿಧಿ ಯೋಜನೆಯಡಿ ಸುಮಾರು 1.80 ಲಕ್ಷ ಅರ್ಹ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ ಅವರ ಬೆಳವಣಿಗೆ ಮೇಲೆ ನಿಗಾ ವಹಿಸಲು ಸೂಚನೆ ನೀಡಲಾಗಿದೆ.
31. ವಿವಿಧ ವಸತಿ ಯೋಜನೆಗಳಡಿಯಲ್ಲಿ 6,29,961 ಮನೆಗಳು ಮಂಜೂರಾಗಿದ್ದು, 3,63,769 ಮನೆಗಳು ಪ್ರಗತಿಯಲ್ಲಿವೆ. ನಗರ ಪ್ರದೇಶದಲ್ಲಿ 42,538 ಮನೆಗಳು ಮಂಜೂರಾಗಿದ್ದು, 37,303 ಮನೆಗಳು ಪ್ರಗತಿಯಲ್ಲಿವೆ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ರಾಜ್ಯದಲ್ಲಿ ಇನ್ನೂ 5,22,160 ಫಲಾನುಭವಿಗಳ ಆಯ್ಕೆ ಬಾಕಿಯಿದ್ದು, ಆಯ್ಕೆ ಪ್ರಕ್ರಿಯೆಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
32. ಒಳಮೀಸಲಾತಿ ಸಮೀಕ್ಷೆಯನ್ನು ಎರಡು ತಿಂಗಳ ಕಾಲ ವಿಸ್ತರಿಸಲಾಗಿದ್ದು, ಎಲ್ಲಾ ಜಿಲ್ಲೆಗಳಲ್ಲಿ ಶೇ.100 ರಷ್ಟು ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಲು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಎಂದು ಸೂಚಿಸಲಾಗಿದೆ.
33. ಅಲ್ಪಸಂಖ್ಯಾತರ ಕಾಲೋನಿಗಳ ಸಮಗ್ರ ಅಭಿವೃದ್ಧಿಗೆ 2023-24ನೇ ಸಾಲಿನಲ್ಲಿ ರೂ.541 ಕೋಟಿ ಬಿಡುಗಡೆಯಾಗಿದ್ದು ಹಾಗೂ 2024-25ನೇ ಸಾಲಿನಲ್ಲಿ 229.5 ಕೋಟಿ ರೂ. ಮಂಜೂರಾಗಿದ್ದು ನಿಗದಿತ ಅವಧಿಯ ಒಳಗಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚಿಸಲಾಗಿದೆ.
34. ಕೆರೆಗಳ ಅಳತೆ ಮಾಡಿ ಒತ್ತುವರಿ ತೆರವು ಮಾಡಲು 6 ತಿಂಗಳ ಗಡುವು ನೀಡಲಾಗಿದೆ.
35. ರಾಜ್ಯದಲ್ಲಿ ಅರಣ್ಯೀಕರಣಕ್ಕೆ ಲಭ್ಯವಿರುವ ಜಮೀನಿನಲ್ಲಿ ಸಂಪೂರ್ಣ ಸಸಿಗಳನ್ನು ನೆಡಲು ಕ್ರಿಯಾ ಯೋಜನೆ ಸಿದ್ಧಪಡಿಸಿ, ಹಂತ ಹಂತವಾಗಿ ಅನುಷ್ಠಾನಗೊಳಿಸಲು ಸೂಚನೆ ನೀಡಿದ್ದೇನೆ.
36. ಆನೆ ಮತ್ತು ಮಾನವ ಸಂಘರ್ಷ ತಡೆಯಲು ಸಮರ್ಪಕ ಕ್ರಮಗಳನ್ನು ಕೈಗೊಳ್ಳಬೇಕು. ಆನೆ ಕಾರ್ಯಪಡೆಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಆನೆಗಳಿಗೆ ಸರಿಯಾದ ಆಹಾರ ಕಾಡಿನಲ್ಲೇ ಲಭ್ಯವಾಗುವಂತೆ ಮಾಡಬೇಕು. ಇದಕ್ಕೆ ಪೂರಕವಾಗಿ ಲಂಟಾನಾ ಕಳೆಗಳನ್ನು ತೆಗೆಯುವ ಕೆಲಸವಾಗಬೇಕು. ಇದೇ ರೀತಿ ಕುಡಿಯುವ ನೀರಿನ ಲಭ್ಯತೆಯೂ ಕಾಡಿನಲ್ಲಿ ಸಾಕಷ್ಟು ಪ್ರಮಾಣದಲ್ಲಿ ಇರುವಂತೆ ನೋಡಿಕೊಳ್ಳಬೇಕು.
37. ರಾಜ್ಯದಲ್ಲಿ ಒಟ್ಟು 9 ರೈಲ್ವೇ ಯೋಜನೆಗಳು ಅನುಷ್ಠಾನ ಹಂತದಲ್ಲಿದ್ದು, ಇದಕ್ಕೆ ಅಗತ್ಯವಾದ ಭೂಸ್ವಾಧೀನ ಕಾರ್ಯವನ್ನು ಆಯಾ ಜಿಲ್ಲಾಧಿಕಾರಿಗಳು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು.
38. ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ತಾಣಗಳನ್ನು ಗುರುತಿಸಿ ಕ್ರಿಯಾ ಯೋಜನೆಗಳನ್ನು ರೂಪಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ.
39. ಕೆಲವು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ರಸ್ತೆ ಅಪಘಾತಗಳು ಹೆಚ್ಚಾಗಿವೆ. ರಸ್ತೆ ಸುರಕ್ಷತಾ ಸಪ್ತಾಹಗಳನ್ನು ಕಾಟಾಚಾರಕ್ಕೆ ನಡೆಸಬಾರದು. ಅಪಘಾತಗಳು ಹೆಚ್ಚು ನಡೆಯುವ ಸ್ಥಳ (Black spots) ಗಳನ್ನು ಗುರುತಿಸಿ ಅಪಘಾತಗಳನ್ನು ತಪ್ಪಿಸಲು ಏನು ಕ್ರಮ ಕೈಗೊಂಡಿದ್ದೀರಿ? ಅಪಘಾತ ಪ್ರಮಾಣ ಯಾವುದೇ ಕಾರಣಕ್ಕೂ ಹೆಚ್ಚಾಗುವುದನ್ನು ಒಪ್ಪಲು ಸಾಧ್ಯವಿಲ್ಲ. ಇದಕ್ಕೆ ಜಿಲ್ಲಾಧಿಕಾರಿ ಅವರೇ ಹೊಣೆ.
40. ಜಿಲ್ಲಾಧಿಕಾರಿ ಹಾಗೂ ಎಸ್ಪಿ ಅವರು ಕಠಿಣ ಕ್ರಮ ಕೈಗೊಂಡರೆ ಮೈಕ್ರೋ ಫೈನಾನ್ಸ್ ಹಾವಳಿಯನ್ನು ಜಿಲ್ಲೆಯಲ್ಲಿ ಸಂಪೂರ್ಣವಾಗಿ ಮಟ್ಟ ಹಾಕಲು ಸಾಧ್ಯವಿದೆ.
41. ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 91 ಅಸಂಘಟಿತ ಕಾರ್ಮಿಕ ವರ್ಗಗಳನ್ನು ಗುರುತಿಸಲಾಗಿದ್ದು, ಇದುವರೆಗೆ 25,61,105 ಕಾರ್ಮಿಕರನ್ನು ನೋಂದಾಯಿಸಲಾಗಿದೆ. ಎಲ್ಲಾ ಜಿಲ್ಲಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅಸಂಘಟಿತ ಕಾರ್ಮಿಕರನ್ನು ಈ ಯೋಜನೆಯಡಿ ನೋಂದಾಯಿಸಲು ಕ್ರಮ ಕೈಗೊಳ್ಳಬೇಕು.
42. ನಾವು ರಾಜ್ಯವನ್ನು ಮಾದಕ ದ್ರವ್ಯ ಮುಕ್ತ ಕರ್ನಾಟಕ ಮಾಡುತ್ತೇವೆ ಎಂದು ಈಗಾಗಲೇ ಘೋಷಿಸಿದ್ದೇವೆ. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಮುಂದುವರೆಸಬೇಕು. 2023ರಲ್ಲಿ 6767 ಪ್ರಕರಣಗಳು, 2024ರಲ್ಲಿ 4188 ಪ್ರಕರಣಗಳು ದಾಖಲಾಗಿವೆ. ಈ ವರ್ಷ ಇದುವರೆಗೆ 1793 ಪ್ರಕರಣಗಳು ದಾಖಲಾಗಿವೆ. ಜಿಲ್ಲೆಗಳಲ್ಲಿ ಮಾದಕ ದ್ರವ್ಯ ದಂಧೆಯನ್ನು ಮಟ್ಟ ಹಾಕಲು ಡಿಸಿ ಹಾಗೂ ಎಸ್ಪಿ ಅವರು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು. ಅಗತ್ಯಬಿದ್ದರೆ ಇನ್ನಷ್ಟು ಕಠಿಣ ಕಾಯ್ದೆಗಳನ್ನು ಜಾರಿಗೆ ತರಲು ನಾವು ಬದ್ಧರಾಗಿದ್ದೇವೆ. ಶಾಲಾ, ಕಾಲೇಜುಗಳಲ್ಲಿ ಮಾದಕ ದ್ರವ್ಯ ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸಬೇಕು.
43. ಜಿಲ್ಲಾಧಿಕಾರಿಗಳು ಅಪರಾಧ ಚಟುವಟಿಕೆಗಳನ್ನು ಹತ್ತಿಕ್ಕಲು ಎಲ್ಲಾ ಸಹಕಾರ ಪೊಲೀಸ್ ಇಲಾಖೆಗೆ ನೀಡಬೇಕು. ಗೂಂಡಾ ಕಾಯ್ದೆಯಡಿ ಬಾಕಿಯಿರುವ ಎಲ್ಲಾ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು.
44. ಕ್ರಿಕೆಟ್ ಬೆಟ್ಟಿಂಗ್ ದಂಧೆಗೆ ಯುವ ಜನಾಂಗ ಬಲಿಯಾಗುತ್ತಿದೆ. ಇದರ ಮೇಲೆ ನಿಯಂತ್ರಣ ಹೇರಬೇಕು. ಜಿಲ್ಲೆಗಳಲ್ಲಿ ಇಸ್ಪೀಟು, ಮಟ್ಕಾ, ಓಸಿ ದಂಧೆಗಳನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಬೇಕು. ಯಾವುದೇ ಒತ್ತಡಗಳಿಗೆ ಮಣಿಯದೆ ನಿರ್ದಾಕ್ಷಿಣ್ಯವಾಗಿ ಹಾವಳಿಯನ್ನು ಮಟ್ಟ ಹಾಕಬೇಕು. ಇದಕ್ಕೆ ಜಿಲ್ಲಾಧಿಕಾರಿಗಳೇ ಪೂರ್ಣ ಹೊಣೆ ಎಂದು ಖಡಕ್ ಎಚ್ಚರಿಕೆ ನೀಡಿದರು.
JDS ಪಕ್ಷ ಸಂಘಟನೆಗೆ ಅಲ್ಪಸಂಖ್ಯಾತ ಮುಖಂಡರಿಗೆ ಮಾಜಿ ಎಂಎಲ್ಸಿ ಹೆಚ್.ಎಂ ರಮೇಶ್ ಗೌಡ ಕರೆ
ಕುರಿಗಾಹಿಗಳಿಗೆ ಬಂದೂಕು ನೀಡೋದು ಸಮರ್ಪಕಗೊಳಿಸಿ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ