ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಬೆಳಗಾವಿ ಅಧಿವೇಶನದಲ್ಲೂ ಭಾರಿ ಚರ್ಚೆ ಆಯಿತು. ಇದೀಗ ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಅಂದರೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದೆಹಲಿಗೆ ಹೋಗುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ದೆಹಲಿ ನಾಯಕರು ನಿಮಗೆ ಆಹ್ವಾನ ನೀಡಿದ್ದಾರಾ ಎಂಬ ಪ್ರಶ್ನೆಗೆ, ‘ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಹಾಕಿದ್ದ ಚಾರ್ಜ್ಶೀಟ್ ಕೋರ್ಟ್ನಲ್ಲಿ ತಿರಸ್ಕೃತಗೊಂಡಿದ್ದು, ಈಗ ಒಂದು ಎಫ್ಐಆರ್ ಬಾಕಿ ಉಳಿದುಕೊಂಡಿದೆ. ನಮ್ಮ ಮೇಲೆ ಯಾವ ರೀತಿ ದಬ್ಬಾಳಿಕೆ ನಡೆಯುತ್ತಿದೆ ಎಂದು ತಿಳಿಸಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ’ ಎಂದರು.
ನಾನು ಮಂಗಳವಾರ ದೆಹಲಿಗೆ ಹೋಗುತ್ತಿದ್ದು, ಆಗ ಅಲ್ಲಿನ ಪೊಲೀಸರನ್ನು ಭೇಟಿ ಮಾಡುವೆ. ಅಂದು ಕೇಂದ್ರ ಜಲಶಕ್ತಿ ಸಚಿವರು ನದಿ ಜೋಡಣೆ ವಿಚಾರವಾಗಿ ಸಭೆ ಕರೆದಿದ್ದಾರೆ. ಅಂದು ನಮ್ಮ ರಾಜ್ಯದ ಪ್ರಮುಖ ಯೋಜನೆಗಳಾದ ಮಹದಾಯಿ, ಕೃಷ್ಣ ಮೇಲ್ದಂಡೆ, ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆ ವಿಚಾರವಾಗಿ ಚರ್ಚೆ ಮಾಡುವೆ ಎಂದು ಹೇಳಿದರು.








