ಶಿವಮೊಗ್ಗ: ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ನನಗೂ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ. ಒಂದು ವೇಳೆ ಸಚಿವ ಸ್ಥಾನ ನೀಡದಿದ್ದರೆ ಭಿನ್ನಮತ ವಿಲ್ಲ ಎಂಬುದಾಗಿ ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ನನಗೆ ಸಚಿವ ಸ್ಥಾನ ಕೊಡಿ ಎಂದು ಪಕ್ಷದ ವರಿಷ್ಠರು ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಎಲ್ಲರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನನಗೆ ಸಂಪುಟ ವಿಸ್ತರಣೆಯಾದರೇ ಸಚಿವ ಸ್ಥಾನ ಸಿಗುವ ನಿರೀಕ್ಷೆಯಿದೆ ಎಂಬುದಾಗಿ ತಿಳಿಸಿದರು.
ರಾಜ್ಯದಲ್ಲಿ ಅತಿಹೆಚ್ಚು ಸ್ಥಾನ ಪಡೆಯುವ ಮೂಲಕ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ಸರ್ಕಾರ ಚೆನ್ನಾಗಿ ನಡೆಯಬೇಕು ಎನ್ನುವುದು ನನ್ನ ಅಭಿಲಾಷೆ. ಸರ್ಕಾರ ಜನಪರವಾಗಿ ಕೆಲಸ ಮಾಡಬೇಕು ಎಂದರು.
ನನಗೆ ಸಚಿವ ಸ್ಥಾನ ನೀಡಬೇಕು ಎನ್ನುವ ಹಕ್ಕೊತ್ತಾಯ ಮಂಡಿಸಿದ್ದೇನೆ. ಈಡಿಗ ಸಮುದಾಯದ ಪ್ರಮುಖರು ನನಗೆ ಸಚಿವ ಸ್ಥಾನ ಕೊಡಿ ಎಂದು ಪಕ್ಷದ ಮೇಲೆ ಒತ್ತಡ ಹೇರಬೇಕು ಎಂದು ನಾನು ಒತ್ತಾಯಿಸುವುದಿಲ್ಲ. ಒತ್ತಡ ತರುವುದು ಬಿಡುವುದು ಅವರಿಗೆ ಬಿಟ್ಟ ವಿಚಾರವಾಗಿದೆ. ಆದರೇ ಸಚಿವ ಸ್ಥಾನ ಸಿಗುತ್ತದೆ ಎನ್ನುವ ವಿಶ್ವಾಸ ನನಗಿದೆ ಎಂದು ಪುನರುಚ್ಚರಿಸಿದ ಅವರು, ಅಭಿವೃದ್ದಿ ಬಗ್ಗೆ ಹೆಚ್ಚಿನ ಒತ್ತು ನೀಡುತ್ತಿದ್ದೇವೆ ಎಂಬುದಾಗಿ ತಿಳಿಸಿದರು.
ರಸ್ತೆ ಅಭಿವೃದ್ದಿಗೆ ಹಣ ಇದೆ. ಆದರೆ ಮಳೆಯಿಂದಾಗಿ ಅಭಿವೃದ್ದಿಗೆ ತೊಡಕಾಗಿದೆ. ಸಾಗರ ಮತ್ತು ಹೊಸನಗರ ಭಾಗದಲ್ಲಿ ರಸ್ತೆ ಗುಂಡಿ ಮುಚ್ಚಲು 5 ಕೋಟಿ ರೂ. ಮೀಸಲಿರಿಸಿದ್ದು ಟೆಂಡರ್ ಕರೆಯಲಾಗಿದೆ. ಮಾರ್ಕೇಟ್ ರಸ್ತೆ ಅಗಲೀಕರಣ ಸಹ ಶೀಘ್ರದಲ್ಲಿ ಕೈಗೆತ್ತಿಕೊಳ್ಳಲಾಗುತ್ತದೆ. ಮಾರಿಕಾಂಬಾ ಜಾತ್ರೆ ಸಮೀಪಿಸುತ್ತಿರುವುದರಿಂದ ಶಿವಪ್ಪನಾಯಕ ವೃತ್ತದಿಂದ ದುರ್ಗಾಂಬಾ ವೃತ್ತದವರೆಗೆ ಡಾಂಬಾರೀಕರಣ ಮಾಡಲು ಯೋಚಿಸಲಾಗಿದೆ ಎಂಬುದಾಗಿ ಹೇಳಿದರು.
ಆರೋಗ್ಯ ಸೇವೆಗೆ ಹೆಚ್ಚಿನ ಹೊತ್ತು
ಸಾಗರ ಉಪವಿಭಾಗೀಯ ಆಸ್ಪತ್ರೆಗೆ 1.80 ಕೋಟಿ ರೂ., ತಾಯಿಮಗು ಆಸ್ಪತ್ರೆಗೆ 1.70 ಕೋಟಿ ರೂ. ಅಭಿವೃದ್ದಿಗೆ ಹಣ ಮಂಜೂರು ಮಾಡಿದೆ. ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಭೂತ ಸೌಕರ್ಯಗಳಿಗೂ ಕೂಡ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು.
ಸಾಗರದ ಟ್ರಾಫಿಕ್ ಸಮಸ್ಯೆ ಪರಿಹಾರ
ಸಾಗರ ಸಬ್ ಜೈಲನ್ನು 1.70 ಕೋಟಿ ರೂ. ಅನುದಾನದಲ್ಲಿ ಅಭಿವೃದ್ದಿಪಡಿಸಲಾಗಿತ್ತು. ಇನ್ನೊಂದು ಭಾಗದ ಗೋಡೆ ಶಿಥಿಲಗೊಂಡಿದ್ದು ಅದರ ಅಭಿವೃದ್ದಿಗೆ ಗಮನ ಹರಿಸಿದೆ. ಸಾಗರದಲ್ಲಿ ಟ್ರಾಫಿಕ್ ಠಾಣೆ, ತುಮರಿಯಲ್ಲಿ ಪೊಲೀಸ್ ಉಪ ಠಾಣೆಗೆ ಗೃಹ ಸಚಿವರಿಗೆ ಮನವಿ ಸಲ್ಲಿಸಿದೆ. ರಸ್ತೆ ಅಗಲೀಕರಣ ಹಿನ್ನೆಲೆಯಲ್ಲಿ ಸಾಗರ ಠಾಣೆ ಸ್ಥಳಾಂತರಿಸಿ ಹೊಸ ಕಟ್ಟಡ ಕಟ್ಟಲು ಮನವಿ ಸಲ್ಲಿಸಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಈ ಸಂದರ್ಭದಲ್ಲಿ ಸಾಗರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಪ್ರಮುಖರಾದ ಸೋಮಶೇಖರ ಲ್ಯಾವಿಗೆರೆ, ರವಿಕುಮಾರ್, ಗಿರೀಶ್ ಕೋವಿ, ಮಹಾಬಲ ಕೌತಿ, ವಿಲ್ಸನ್, ರವೀಂದ್ರ ಸಾಗರ್, ಅನ್ವರ್ ಭಾಷಾ, ಕಲ್ಲಪ್ಪ ಮೆಣಸಿನಾಳ್, ಲಿಂಗರಾಜ್ ಆರೋಡಿ ಇನ್ನಿತರರು ಹಾಜರಿದ್ದರು.
ಬೆಂಗಳೂರಿನ ಕಬ್ಬನ್ ಪಾರ್ಕ್ ಅಭಿವೃದ್ಧಿಗೆ 5 ಕೋಟಿ ಅನುದಾನ: ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ
BIG NEWS : ಅಕ್ರಮವಾಗಿ `BPL’ ರೇಷನ್ ಕಾರ್ಡ್ ಪಡೆದವರಿಗೆ ಸರ್ಕಾರದಿಂದ ಬಿಗ್ ಶಾಕ್.!








