ಬೆಂಗಳೂರು : ರಾಜ್ಯದ ಎಲ್ಲ ರಾಜಕೀಯ ಪಕ್ಷಗಳಲ್ಲಿನ ಪ್ರಭಾವಿ ವ್ಯಕ್ತಿಗಳು ಅಕ್ರಮ ಮರಳು ಗಣಿಗಾರಿಕೆಯಲ್ಲಿ ಭಾಗಿಯಾಗಿದ್ದಾರೆ ಎಂಬುದಾಗಿ ಗೃಹ ಸಚಿವ ಜಿ.ಪರಮೇಶ್ವರ್ ಅವರು ವಿಧಾನಸಭೆಯಲ್ಲಿ ನೀಡಿದ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಅಕ್ರಮ ಗಣಿಗಾರಿಕೆ ಆರೋಪ ಸಂಬಂಧ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ.
2026ರ ಜನವರಿ 27ರಂದು ನಡೆದ ವಿಧಾನಸಭಾ ಕಲಾಪದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ನೀಡಿದ ಹೇಳಿಕೆ, ಅಕ್ರಮ ಗಣಿಗಾರಿಕೆ ದೊಡ್ಡ ದಂಧೆಯಾಗಿದೆ. ಪ್ರಕರಣ ಸಂಬಂಧ ಯಾರ ಹೆಸರನ್ನು ಪ್ರಸ್ತಾಪಿಸುತ್ತಿಲ್ಲ. ಯಾರನ್ನೂ ದೂಷಣೆ ಮಾಡುತ್ತಿಲ್ಲ. ಏಕೆಂದರೆ ಇದು ಅತ್ಯಂತ ಮುಜುಗರ ಸಂಗತಿಯಾಗಿದೆ. ಈ ಸಂಬಂಧ ಸೀಮಿತವಾಗಿ ಉತ್ತರವನ್ನು ಮಾತ್ರ ನೀಡುತ್ತಿದ್ದು, ಅನೇಕ ಪ್ರಭಾವಿಗಳು ದಂಧೆಯಲ್ಲಿ ಭಾಗಿಯಾಗಿದ್ದಾರೆ. ಈ ವಿಷಯವನ್ನು ಚರ್ಚಿಸುವುದಕ್ಕಾಗಿ ಸಭೆ ಕರೆಯುವುದಾಗಿ ಹೇಳಿದ್ದಾರೆ. ಈ ಅಂಶ ಜನವರಿ 28ರಂದು ಪತ್ರಿಕೆಗಳು ಮತ್ತು ಟಿವಿ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ ಎಂದು ನ್ಯಾಯಪೀಠ ಹೇಳಿದೆ.
ಮಾಫಿಯಾಗಳಿಂದ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ತಡೆಯುವುದಕ್ಕೆ ಕ್ರಮ ಕೈಗೊಳ್ಳುವಲ್ಲಿ ರಾಜ್ಯದ ಗೃಹ ಸಚಿವರು ಅಸಹಾಯಕರಾಗಿದ್ದಾರೆ ಎಂದು ಭಾವಿಸಿದರೆ, ರಾಜ್ಯದಲ್ಲಿ ನಡೆಯುತ್ತಿರುವ ಮರಳು ಗಣಿಗಾರಿಕೆಯ ಅಕ್ರಮ ಚಟುವಟಿಕೆಯನ್ನು ರಾಜ್ಯದ ಆಡಳಿತ ವ್ಯವಸ್ಥೆ ತಡೆಯುತ್ತದೆ ಎಂಬ ಭರವಸೆಯಿಲ್ಲ. ಇದೊಂದು ಗಂಭೀರವಾದ ಸಮಸ್ಯೆಯಾಗಿದ್ದು ಕೇಂದ್ರ ಸಂಸ್ಥೆ, ವಿಶೇಷವಾಗಿ ರಚಿಸುವ ತನಿಖಾ ಸಂಸ್ಥೆ ಇಲ್ಲವೇ ವಿಶೇಷ ತನಿಖಾ ದಳದಿಂದ(ಎಸ್ಐಟಿ) ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕಾದ ಅಗತ್ಯವಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ಮರಳು ಮಾಫಿಯಾಗಳಿಂದ ಅಕ್ರಮ ಮರಳು ಗಣಿಗಾರಿಕೆ ತಡೆಯಲು ಕ್ರಮ ಕೈಗೊಳ್ಳುವಲ್ಲಿ ಗೃಹ ಸಚಿವರು ವಿಧಾನಸಭೆಯಲ್ಲಿ ಅಸಹಾಯಕತೆ ತೋರಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ಅಗತ್ಯವಿರಲಿದೆ ಎಂದು ನ್ಯಾಯಮೂರ್ತಿ ಡಿ.ಕೆ. ಸಿಂಗ್ ಮತ್ತು ನ್ಯಾಯಮೂರ್ತಿ ತಾರಾ ವಿತಾಸ್ತ ಗಂಜು ಅವರಿದ್ದ ವಿಭಾಗೀಯ ಪೀಠ, ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದ್ದು, ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ಮೂರು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿದೆ.








